ಕರ್ನಾಟಕದಲ್ಲಿ "ಲವ್ ಜಿಹಾದ್" ವಿರುದ್ಧ ಕಠಿಣ ಕಾನೂನು
ಬೆಂಗಳೂರು, ಡಿಸೆಂಬರ್ 14: ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಕರ್ನಾಟಕದಲ್ಲಿ ಲವ್ ಜಿಹಾದ್ ನಿರ್ಬಂಧಕ್ಕೆ ಕಠಿಣ ಕಾನೂನು ಜಾರಿಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಭವಿಷ್ಯದಲ್ಲಿ ಲವ್ ಜಿಹಾದ್ ನಿಷೇಧಕ್ಕೆ ಕಠಿಣ ಕಾನೂನು ತರಲಾಗುತ್ತದೆ ಎಂದಿದ್ದಾರೆ.
ಉತ್ತರ ಕರ್ನಾಟಕದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ವಿರೋಧಿ ಮಸೂದೆಯನ್ನು ಮಂಡಿಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸುತ್ತಿರುವುದರ ನಡುವೆ ಇಂಥದೊಂದು ವಿಷಯ ಪ್ರಸ್ತಾಪಿಸಲಾಗಿದೆ.
"ಬಿಜೆಪಿ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಮತ್ತು ಮತಾಂತರ ನಿಷೇಧ ಕಾಯ್ದೆಗಳನ್ನು ಜಾರಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಯಾವಾಗಲೂ ಹೇಳುತ್ತೇವೆ. ಆ ಮಾತಿಗೆ ನಾವು ಬದ್ಧರಾಗಿದ್ದೇವೆ. ಅದಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಮುಂಬರುವ ದಿನಗಳಲ್ಲಿ ಲವ್ ಜಿಹಾದ್ ವಿರೋಧಿ ಕಾಯ್ದೆಯನ್ನು ಜಾರಿಗೆ ತರಲಾಗುವುದು," ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.

ಮತಾಂತರ ನಿಷೇಧ ಮಸೂದೆಗೆ ಏಕೆ ವಿರೋಧ?:
"ಕೆಲವು ಸಂಸ್ಥೆಗಳು ತಾವು ಧಾರ್ಮಿಕ ಮತಾಂತರದಲ್ಲಿ ಭಾಗಿ ಆಗುವುದಿಲ್ಲ, ಅದು ತಮ್ಮ ಉದ್ದೇಶವೂ ಅಲ್ಲ ಎಂದು ಸಾರ್ವಜನಿಕವಾಗಿ ಹೇಳಿಕೊಳ್ಳುತ್ತವೆ. ಹಾಗಿದ್ದರೆ ಮತಾಂತರ ವಿರೋಧಿ ಕಾನೂನನ್ನು ಅವರು ಏಕೆ ವಿರೋಧಿಸುತ್ತಾರೆ?, ಒಂದು ಕಡೆ ಅವರು ಮತಾಂತರ ಮಾಡುವುದಿಲ್ಲ ಎಂದು ಹೇಳುತ್ತಾರೆ, ಇನ್ನೊಂದು ಕಡೆಯಲ್ಲಿ ಅದೇ ಮತಾಂತರ ವಿರೋಧಿ ಮಸೂದೆಯನ್ನು ವಿರೋಧಿಸುತ್ತಾರೆ,"ಎಂದು ಸಚಿವ ಸುನೀಲ್ ಕುಮಾರ್ ಹೇಳಿದರು.
2018ರ ಚುನಾವಣಾ ಪ್ರಣಾಳಿಕೆಯಲ್ಲಿ ಭಾರತೀಯ ಜನತಾ ಪಕ್ಷವು ಗೋಹತ್ಯೆ ವಿರೋಧಿ ಕಾನೂನನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದು, ಅದರಿಂದೆ ಈ ವರ್ಷದ ಆರಂಭದಲ್ಲಿ ಕಾನೂನು ಜಾರಿಗೊಳಿಸಲಾಗಿದೆ ಎಂದರು.
ಮತಾಂತರದ ಉದ್ದೇಶಕ್ಕಾಗಿ ಮದುವೆ:
ಉತ್ತರ ಪ್ರದೇಶದಲ್ಲಿ ಬಲವಂತದ ಧಾರ್ಮಿಕ ಮತಾಂತರದ ವಿರುದ್ಧ ಹೊರಡಿಸಲಾದ ಸುಗ್ರೀವಾಜ್ಞೆಯ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಕರ್ನಾಟಕ ಸರ್ಕಾರವು ಈ ಹಿಂದೆ ಅಧಿಕಾರಿಗಳಿಗೆ ಸೂಚಿಸಿತ್ತು. ಉತ್ತರ ಪ್ರದೇಶದೊಂದಿಗೆ, ಬಿಜೆಪಿ ಆಡಳಿತದ ಮಧ್ಯಪ್ರದೇಶ ಮತ್ತು ಹಿಮಾಚಲ ಪ್ರದೇಶಗಳು ಕೇವಲ ಮದುವೆಯ ಉದ್ದೇಶಕ್ಕಾಗಿ ಧಾರ್ಮಿಕ ಮತಾಂತರದ ಮಾಡುತ್ತಿರುವುದರ ವಿರುದ್ಧ ಶಾಸನಗಳನ್ನು ಹೊಂದಿವೆ. ಲವ್ ಜಿಹಾದ್ ವಿರುದ್ಧದ ಈ ಕಾನೂನುಗಳ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಈಗಾಗಲೇ ಶುರು ಮಾಡಲಾಗಿದೆ.
ಮತಾಂತರ ವಿರೋಧಿ ಮಸೂದೆಗೆ ಕ್ರೈಸ್ತ ಸಂಘಟನೆಗಳ ವಿರೋಧ:
ಕರ್ನಾಟಕದಲ್ಲಿ ಮತಾಂತರ-ವಿರೋಧಿ ಕಾನೂನಿಗೆ ಸಂಬಂಧಿಸಿದಂತೆ ಕೆಲವು ಕ್ರಿಶ್ಚಿಯನ್ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಬೆಳಗಾವಿಯಲ್ಲಿ ಡಿಸೆಂಬರ್ 17ರಂದು ಮಸೂದೆಯ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಿವೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತಾಂತರ ವಿರೋಧಿ ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ, "ಯಾವುದೇ ಹೊಸ ಕಾನೂನುಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬರುವುದು ಸಹಜ. ಆದರೆ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಈ ಕಾನೂನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ಬಗ್ಗೆ ಆತಂಕ ಪಡಬೇಕಿಲ್ಲ: ಸಿಎಂ
ಕರ್ನಾಟಕ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆ ಬಗ್ಗೆ ಸಾರ್ವಜನಿಕರು ಯಾವುದೇ ರೀತಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಈ ಕಾಯ್ದೆಯ ಪ್ರಕಾರ, ಬಡತನದ ದುರುಪಯೋಗ ಪಡೆದು, ಆಸೆ, ಆಮಿಷಗಳನ್ನು ಒಡ್ಡಿ ಮತಾಂತರ ಮಾಡುವುದಕ್ಕೆ ಅವಕಾಶವಿಲ್ಲ. ಆದರೆ, ಹಿಂದೂ, ಕ್ರಿಶ್ಚಿಯನ್, ಇಸ್ಲಾಂ ಹಾಗೂ ಸಿಖ್ ಧರ್ಮಗಳನ್ನು ಸಂವಿಧಾನದಲ್ಲಿ ಗುರುತಿಸಲಾಗಿದ್ದು, ಅವರ ಪ್ರಾರ್ಥನೆ, ಆಚರಣೆಗಳಿಗೆ ಯಾವುದೇ ತೊಂದರೆ ಇರುವುದಿಲ್ಲ. ಮತಾಂತರವನ್ನು ನಿಷೇಧಿಸುವುದಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಚರ್ಚಿಸಲಾಗುತ್ತಿದೆ. ಈ ಬಗ್ಗೆ ಸ್ವತಂತ್ರದ ನಂತರದಲ್ಲೂ ಬಹಳಷ್ಟು ದೊಡ್ಡ ಪ್ರಮಾಣದ ಚರ್ಚೆಯಾಗಿದೆ. ಈಗ ವಿವಿಧ ರಾಜ್ಯಗಳಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆೊಳಿಸಲಾಗಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.












Click it and Unblock the Notifications