ಕೊವಿಡ್-19 ಚಿಕಿತ್ಸೆಗೆ ಇನ್ನೂ ದರ ನಿಗದಿ ಮಾಡಿಲ್ಲ: ಶ್ರೀರಾಮುಲು
ಬೆಂಗಳೂರು, ಜೂ. 19: ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್-19 ಚಿಕಿತ್ಸೆಗೆ ದರ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹದ ಸುದ್ದಿಗಳು ಹರಿದಾಡುತ್ತಿವೆ. ಅವು ನಿಜವಲ್ಲ. ಕೊರೊನಾ ವೈರಸ್ ಸೋಂಕಿತರಿಗೆ ವೆಂಟಿಲೇಟರ್, ಐಸಿಯು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಸರ್ಕಾರ ಇನ್ನೂ ದರ ನಿಗದಿ ಮಾಡಿಲ್ಲ ಎಂದು ಆರೋಗ್ಯ ಸಚಿವ ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.
Recommended Video
ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ದರ ನಿಗದಿ ವಿಚಾರ ನಿನ್ನೆಯ ಟಾಸ್ಕ್ ಫೋರ್ಸ್ ಸಭೆಯಲ್ಲಿ ಚರ್ಚೆ ಆಗಿದೆ. ಈ ವೇಳೆ ಬೇರೆ ರಾಜ್ಯಗಳ ಖಾಸಗಿ ಆಸ್ಪತ್ರೆಗಳಲ್ಲಿ ಇರುವ ದರಗಳ ಬಗ್ಗೆ ಕೂಡಾ ಪರಿಶೀಲಿಸಿದ್ದೇವೆ. ಈ ಬಗ್ಗೆ ಸಿಎಂ ಗಮನಕ್ಕೆ ಕೂಡಾ ತಂದಿದ್ದೇವೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ ಎಂದಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ತೀರ್ಮಾನ ತೆಗೆದುಕೊಳ್ಳುವವರೆಗೆ ದರ ನಿಗದಿ ಅಧಿಕೃತ ನಿರ್ಧಾರ ಆಗುವುದಿಲ್ಲ. ಖಾಸಗಿ ಆಸ್ಪತ್ರೆಗಳು ಹೇಳಿರುವ ದರ ಅವರು ಹೇಳಿದ್ದು, ಅದು ಅವರ ಬೇಡಿಕೆ ಆಗಿದೆ ಅಷ್ಟೇ. ರಾಜ್ಯ ಸರ್ಕಾರ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ಎಷ್ಟು ದರ ನಿಗದಿ ಮಾಡಬೇಕು ಅಂತಾ ಸಿಎಂ ಮತ್ತು ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳುತ್ತದೆ. ಜೊತೆಗೆ ಯಾವುದೇ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಬೇಕಾಬಿಟ್ಟಿ ದರ ವಸೂಲಿ ಮಾಡುವಂತಿಲ್ಲ ಎಂದು ಶ್ರೀರಾಮುಲು ಎಚ್ಚರಿಕೆ ಕೊಟ್ಟಿದ್ದಾರೆ.