ಖಾಸಗಿ ಶಾಲಾ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ಯೋಜನೆ: ಸುರೇಶ್ ಕುಮಾರ್!
ಬೆಂಗಳೂರು, ಡಿ. 15: ಖಾಸಗಿ ಅನುದಾನಿತ ಶಾಲಾ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕೊನೆಗೂ ಮುಂದಾಗಿದೆ. ಆ ಮೂಲಕ ಖಾಸಗಿ ಶಾಲೆಗಳ ಶಿಕ್ಷಕರ ಹಲವು ದಶಕಗಳ ಸಂಕಷ್ಟಗಳನ್ನು ದೂರ ಮಾಡಲು ಮುಂದಾಗಿದೆ. ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಗುವ ಸೌಲಭ್ಯಗಳು ಖಾಸಗಿ ಶಾಲೆಗಳ ಶಿಕ್ಷಕರಿಗೆ ಇಲ್ಲ. ಈ ತಾರತಮ್ಯ ಹೋಗಲಾಡಿಸಿ ಎಂದು ಧಾರವಾಡದಲ್ಲಿ ಖಾಸಗಿ ಶಾಲೆಗಳ ಶಿಕ್ಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಶಿಕ್ಷಕರ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ಸೌಲಭ್ಯಗಳನ್ನು ಖಾಸಗಿ ಶಾಲಾ ಶಿಕ್ಷಕರಿಗೂ ವಿಸ್ತರಿಸಲು ಮುಂದಾಗಿದೆ.
ಧಾರವಾಡದಲ್ಲಿ ನಡೆಯುತ್ತಿರುವ ಶಿಕ್ಷಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತು ಸಂಟಘನೆಗಳ ಪ್ರತಿನಿಧಿಗಳು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಚರ್ಚೆ ಸಂದರ್ಭದಲ್ಲಿ ಖಾಸಗಿ ಅನುದಾನಿತ ಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದಿಂದ ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೊಡಲು ಮುಂದಾಗಿರುವ ಸೌಲಭ್ಯಗಳೇನು? ಮುಂದಿದೆ ಮಾಹಿತಿ!
ಜ್ಯೋತಿ ಸಂಜೀವಿನಿ
ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹಾಗೂ ಖಾಸಗಿ ಶಾಲಾ ಶಿಕ್ಷಕರ ಸಂಘಟನೆ ಪದಾಧಿಕಾರಿಗಳೊಂದಿಗೆ ಮಾತನಾಡಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರ್ಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದ್ದು, ಈ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದಿದ್ದಾರೆ.
ಪ್ರಮುಖವಾಗಿ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವ ಕುರಿತಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು. ಖಾಸಗಿ ಶಾಲಾ ಶಿಕ್ಷಕರಿಗೂ ಆ ಯೋಜನೆಯನ್ನು ವಿಸ್ತರಿಸಲು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಮಹತ್ವದ ಭರವಸೆ ನೀಡಿದ್ದಾರೆ.
ವೇತನ ತಾರತಮ್ಯ
ಇನ್ನು ವೇತನದ ತಾರತಮ್ಯ ಸರಿಪಡಿಸುವ ಕುರಿತು ಕೂಲಂಕುಷವಾಗಿ ಪರಿಶೀಲನೆ ನಡೆಸಿ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ಅವರು ಭರವಸೆ ನೀಡಿದ್ದಾರೆ. ತಕ್ಷಣವೇ ವೇತನ ತಾರತಮ್ಯದ ಬಗ್ಗೆ ಒದಗಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚಿಸಿದ್ದಾರೆ. ಎಲ್ಲ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಮಾನ ವೇತನ ಸೌಲಭ್ಯಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ತಾರತಮ್ಯ ಸರಿಪಡಿಸುವ ಭರವಸೆ ನೀಡಲಾಗಿದೆ.
ಹಳೆಯ ಪಿಂಚಣಿ ವ್ಯವಸ್ಥೆ
ಎನ್.ಪಿ.ಎಸ್. ಪದ್ಧತಿ ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆ ಮುಂದುವರೆಸುವುದು ಶಿಕ್ಷಣ ಇಲಾಖೆಯೊಂದೇ ತೆಗೆದುಕೊಳ್ಳಬೇಕಾದ ನಿರ್ಧಾರವಲ್ಲ. ಅದು ಎಲ್ಲ ಇಲಾಖೆಗಳಿಗೂ ಸಂಬಂಧಿಸಿದೆ. ಹೀಗಾಗಿ ಎನ್.ಪಿ.ಎಸ್ ಮುಂದುವರೆಸುವುದಾದರೆ ಉದ್ಯೋಗದಾತರ ಪಾಲಿನ ಹಣವನ್ನು ಸರ್ಕಾರಿ ಶಾಲಾ ಶಿಕ್ಷಕರಿಗೆ ಕೊಡುವಂತೆ ಸರ್ಕಾರವೇ ಭರ್ತಿ ಮಾಡುವ ಕುರಿತು, ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಭರವಸೆ ನೀಡಿದ್ದಾರೆ.
ದೈಹಿಕ ಶಿಕ್ಷಕರ ನೇಮಕಾತಿ
ದೈಹಿಕ ಶಿಕ್ಷಕರ ಬೇಡಿಕೆಗಳಿಗೆ ಸಂಬಂಧಿಸಿದ ಡಾ. ವೈದ್ಯನಾಥನ್ ವರದಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿಗೆ ಪ್ರಸ್ತಾಪಿಸಿದ್ದು, ಈ ಶಿಕ್ಷಕರನ್ನು ಇತರೆ ಶಿಕ್ಷಕರ ಸಾಲಿನಲ್ಲಿ ಸಮಾನವಾಗಿ ಗುರುತಿಸಲು ಅನುಕೂಲವಾಗುವಂತೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.
ಖಾಲಿ ಹುದ್ದೆಗಳ ಭರ್ತಿ
2015ರ ನಂತರ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ, ನಿಧನ ಸೇರಿದಂತೆ ಹಲವಾರು ಕಾರಣಗಳಿಂದ ತೆರವಾಗಿರುವ ಹುದ್ದೆಗಳ ಭರ್ತಿಗೆ ಪ್ರಸ್ತುತ ಆರ್ಥಿಕ ಇಲಾಖೆಯ ನಿರ್ಬಂಧದ ತೆರವಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹಾಗೆಯೇ ಇದಕ್ಕೂ ಮುನ್ನ ರಾಜ್ಯದ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿಯಾಗಿರುವ ಹುದ್ದೆಗಳ ವಿವರಗಳನ್ನು ಶಾಲಾವಾರು ಸಂಗ್ರಹಿಸಿ ಸಲ್ಲಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಮುದಿನ ಮೂರು ತಿಂಗಳುಗಳಲ್ಲಿ ಸರ್ಕಾರವು ಶಿಕ್ಷಕರ ಎಲ್ಲ ಸಮಸ್ಯೆಯನ್ನು ಪರಿಹರಿಸಲಿದೆ. ನಾಡಿನ ಮಕ್ಕಳ ಹಿತದೃಷ್ಟಿಯಿಂದ ಸಂಘಟನೆಯು ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಸಭೆಯಲ್ಲಿ ಮಾಜಿ ಶಿಕ್ಷಣ ಸಚಿವರೂ ಆದ ವಿಧಾನಪರಿಷತ್ ಸದಸ್ಯ ಬಸವರಾಜ ಎಸ್. ಹೊರಟ್ಟಿ, ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಶಾಮ ಮಲ್ಲನಗೌಡ, ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಮತ್ತಿತರರು ಭಾಗವಹಿಸಿದ್ದರು.
Recommended Video