ವಿವಿಗಳ ಅಭಿವೃದ್ಧಿ: ಶಿಕ್ಷಣ ಮಂಡಲದ ಪ್ರಾಧಿಕಾರಿಗಳ ಜತೆ ಡಿಸಿಎಂ ಚರ್ಚೆ
ಬೆಂಗಳೂರು, ಅ. 21: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಮತ್ತಷ್ಟು ಪಾರದರ್ಶಕತೆಯನ್ನು ತರಲು ಸರ್ಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿಕೆ ಕೊಟ್ಟಿದ್ದಾರೆ. ಅದಕ್ಕಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿರುವ ಎಲ್ಲ ಅಂಶಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದಿದ್ದರೆ.
ಭಾರತೀಯ ಶಿಕ್ಷಣ ಮಂಡಲದ ಕರ್ನಾಟಕ ಉತ್ತರ ಪ್ರಾಂತ ಹಾಗೂ ಬೆಳಗಾವಿಯ ರಾಣಿ ಚನ್ನಮ್ಮ ವಿವಿ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ 'ವಿಶ್ವವಿದ್ಯಾಲಯಗಳ ಏಳಿಗೆಯಲ್ಲಿ ಪ್ರಾಧಿಕಾರಿಗಳ ಪಾತ್ರ' ವಿಷಯ ಕುರಿತ ಅನ್ಲೈನ್ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ಶಿಕ್ಷಣ ವ್ಯವಸ್ಥೆಯನ್ನು ಉನ್ನತಿಯತ್ತ ಕೊಡೊಯ್ಯಬೇಕಾದರೆ ನಾನು ಎನ್ನುವುದನ್ನು ಬಿಟ್ಟು ನಾವು ಎಂಬ ವಿಶಾಲ ತತ್ತ್ವದೊಂದಿಗೆ ಸಾಗಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಸಾಧಿಸಲು ಸಾಧ್ಯವಾಗುತ್ತದೆ. ವಿಶಾಲ ತಳಹದಿಯ ಮೇಲೆ ಕೆಲಸ ಮಾಡುತ್ತಿರುವ ಎಲ್ಲ ವಿವಿಗಳಲ್ಲಿ ಇಂಥ ನಡವಳಿಕೆಯಿಂದ ಮಾತ್ರ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೊಡ್ಡ ಕಾಣಿಕೆ
ಶೈಕ್ಷಣಿಕವಾಗಿ ನಮ್ಮ ಸರಕಾರವು ಕಳೆದ ಒಂದು ವರ್ಷದಲ್ಲಿ ಅನೇಕ ದಿಟ್ಟಹೆಜ್ಜೆಗಳನ್ನು ಇಟ್ಟಿದೆ. ಆದ್ಯತೆಯ ಮೇರೆಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತಿದೆ. ಎಲ್ಲ ದೃಷ್ಟಿಕೋನದಲ್ಲಿ ನೋಡಿದರೂ ಕರ್ನಾಟಕಕ್ಕೆ ಈ ನೀತಿ ದೊಡ್ಡ ಕಾಣಿಕೆ ನೀಡಲಿದೆ ಎಂದು ಡಾ. ಅಶ್ವಥ್ ನಾರಾಯಣ ಹೇಳಿದರು.

ಆಡಳಿತಾತ್ಮಕ ಬದಲಾವಣೆ
ಆ ಹಿನ್ನೆಲೆಯಲ್ಲಿ ಸರಕಾರವು ಶಿಕ್ಷಣ ನೀತಿಯನ್ನು ಅತ್ಯಂತ ಬದ್ಧತೆಯಿಂದ ಜಾರಿ ಮಾಡಲು ಮುಂದಾಗಿದೆ. ಈಗಾಗಲೇ ನೀತಿಯ ಜಾರಿಗೆ ಬೇಕಾದ ಕಾನೂನಾತ್ಮಕ-ಆಡಳಿತಾತ್ಮಕ ಬದಲಾವಣೆಗಳನ್ನು ಮಾಡಲಾಗುತ್ತಿದೆ. 2021ರ ಹೊತ್ತಿಗೆ ನೀತಿಯ ಜಾರಿ ಹಂತಹಂತವಾಗಿ ಆರಂಭವಾಗುತ್ತದೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಪರಿಣಾಮಕಾರಿ ಕೆಲಸ
ವಿವಿಗಳ ಮಟ್ಟದಲ್ಲಿ ಪ್ರಾಧಿಕಾರಿಗಳ ಪಾತ್ರ ಬಹುಮುಖ್ಯವಾದದ್ದು. ಅದರಲ್ಲೂ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಅತ್ಯಂತ ಜವಾಬ್ದಾರಿಯಂದ ಕೆಲಸ ಮಾಡಬೇಕಾಗುತ್ತದೆ. ಆ ನೀತಿಯ ಆಶಯಕ್ಕೆ ತಕ್ಕಂತೆ ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂದು ಡಿಸಿಎಂ ಹೇಳಿದರು.
Recommended Video

ಭಾರತವನ್ನು ಬದಲಿಸುವ ಶಕ್ತಿಯಿದೆ
ಮುಂದಿನ ಕೆಲ ವರ್ಷಗಳಲ್ಲಿ ಭಾರತವನ್ನು ಎಲ್ಲ ರೀತಿಯಲ್ಲೂ ಬದಲಿಸುವ ಶಕ್ತಿ ಶಿಕ್ಷಣ ನೀತಿಗೆ ಇದೆ. ಸಾಮಾಜಿಕ, ಆರ್ಥಿಕ ಬದಲಾವಣೆಗಳಿಗೆ ಕಾರಣವಾಗಲಿದೆ. ಹೀಗಾಗಿ ನೀತಿಯ ಜಾರಿಯಲ್ಲಿ ನಾವೆಲ್ಲರೂ ಯೋಧರಂತೆ ಕೆಲಸ ಮಾಡಬೇಕು. ಮುಖ್ಯವಾಗಿ ಸಿಂಡಿಕೇಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಎಂದು ಡಾ. ಅಶ್ವಥ್ ನಾರಾಯಣ ಅವರು ವಿವಿ ಆಡಳಿತಗಳಿಗೆ ತಾಕೀತು ಮಾಡಿದರು.












Click it and Unblock the Notifications