ಗ್ರಾಮ ಪಂಚಾಯಿತಿ ಚುನಾವಣೆ; ಜೆಡಿಎಸ್ ಮಹತ್ವದ ನಡೆ
ಬೆಂಗಳೂರು, ನವೆಂಬರ್ 23: ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ಒಟ್ಟು ಎರಡು ಹಂತಗಳಲ್ಲಿ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಶೀಘ್ರದಲ್ಲೇ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಪಕ್ಷ ಮಹತ್ವದ ಸಭೆಯನ್ನು ಕರೆದಿದೆ. ನವೆಂಬರ್ 28ರಂದು ಬೆಳಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಪ್ರಮುಖರ ಸಭೆ ನಡೆಯಲಿದೆ.
ಪಕ್ಷದ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. 'ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ರಾಜ್ಯದಲ್ಲಿನ 5800 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಈ ಬಗ್ಗೆ ಆಂತರಿಕವಾಗಿ ಪಕ್ಷದಲ್ಲಿ ತುರ್ತಾಗಿ ಚರ್ಚಿಸುವುದು ಅಗತ್ಯವಾಗಿದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

'ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಚುನಾವಣೆಗಳಲ್ಲಿ ನಡೆಸಿರುವ ಅಕ್ರಮ ಮತ್ತು ಅವ್ಯವಹಾರ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಕೆಳ ಹಂತದಿಂದ ಪಕ್ಷದ ಸಂಘಟನೆ/ಬಲವರ್ಧನೆ ಕುರಿತು ಚರ್ಚೆ ನಡೆಸುವುದು ಅಗತ್ಯವಾಗಿದೆ' ಎಂದು ತಿಳಿಸಿದ್ದಾರೆ.
ಜೆ. ಪಿ. ಭವನದಲ್ಲಿ ನಡೆಯುವ ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರುಗಳು, ಶಾಸಕರು, ಮಾಜಿ ಶಾಸಕರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ರಾಜ್ಯ ಪದಾಧಿಕಾರಿಗಳು, ಪಕ್ಷದ ಇತರೆ ಮುಖಂಡ, ಪ್ರಮುಖರ ಸಭೆಯನ್ನು ಕರೆಯಲಾಗಿದೆ.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಸವ ಕಲ್ಯಾಣ ಮತ್ತು ಮಸ್ಕಿ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ, ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷ ಸಿದ್ಧತೆ ಆರಂಭಿಸಿದೆ.












Click it and Unblock the Notifications