ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಿಗೆ 'ಗ್ರಾಮ ಒನ್' ಸೌಲಭ್ಯ ವಿಸ್ತರಣೆ
ಬೆಂಗಳೂರು, ಮಾರ್ಚ್ 12: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ 'ಗ್ರಾಮ ಒನ್' ದಿನದಿಂದ ದಿನಕ್ಕೆ ಜನಪ್ರಿಯತೆ ಗಳಿಸುತ್ತಿದೆ. ನೂರಾರು ಸೌಲಭ್ಯ, ಸೇವೆಗಳು ಒಂದೇ ಸೂರಿನಡಿ ಲಭ್ಯವಿರುವುದಕ್ಕೆ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಸೇವೆಗಳನ್ನು ಗ್ರಾಮಸ್ಥರಿಗೆ ತಲುಪಿಸುವ 'ಗ್ರಾಮ ಒನ್' ಯೋಜನೆಯನ್ನು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಜಾರಿಗೊಳಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಲಾಗಿದೆ.
ಜನವರಿ ತಿಂಗಳಿನಲ್ಲಿ ಸುಮಾರು 12 ಜಿಲ್ಲೆಗಳ 3,026 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಲಾಗಿತ್ತು. ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲೂ ಗ್ರಾಮ ಒನ್ ಯೋಜನೆ ಮಹತ್ವ ಹಾಗೂ ಅಗತ್ಯದ ಬಗ್ಗೆ ಪ್ರಸ್ತಾಪಿಸಿ, ಈ ಯೋಜನೆಯನ್ನು ರಾಜ್ಯ ವ್ಯಾಪಿ ಜಾರಿಗೊಳಿಸುವುದಾಗಿ ಪ್ರಕಟಿಸಿದ್ದರು.
ಬೊಮ್ಮಾಯಿ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರದಂತೆ ಹೊಸದಾಗಿ 2,937 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆ ಜಾರಿ ಆಗಲಿದೆ. ಹೀಗಾಗಿ, ಶೀಘ್ರದಲ್ಲೇ ಒಟ್ಟು 5963 ಗ್ರಾಮ ಪಂಚಾಯಿತಿಗಳು ಈ ಯೋಜನೆ ವ್ಯಾಪ್ತಿಗೆ ಒಳಪಡಲಿವೆ.

ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ 'ಗ್ರಾಮ ಒನ್' ಮೂಲಕ ಹಳ್ಳಿಯ ಜನತೆಗೂ ಸೇವೆ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ವೆಬ್ಸೈಟ್: http://karnatakaone.gov.in ಅಥವಾ sevasindhu.karnataka.gov.in ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಗ್ರಾಮ ಒನ್: ಇದು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಎಲ್ಲಾ ಇಲಾಖೆಗಳ ನಾಗರಿಕ ಸೇವೆಗಳನ್ನು ಗ್ರಾಮೀಣ ನಾಗರಿಕರಿಗೆ ಅವರ ಗ್ರಾಮಗಳಲ್ಲಿಯೇ ತಲುಪಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ನಾಗರಿಕ ಕೇಂದ್ರಿತ ಸೇವೆಗಳಾದ ಜಿ2ಸಿ ಸೇವೆಗಳು, ಬ್ಯಾಂಕಿಂಗ್ ಸೇವೆಗಳು, ಆರ್ ಟಿ ಐ ಪ್ರಶ್ನೆಗಳು ಹಾಗೂ ಇನ್ನಿತರೇ ಸೇವೆಗಳನ್ನು ಗ್ರಾಮ ಮಟ್ಟದಲ್ಲಿ ಎಲ್ಲಾ ನಾಗರಿಕರಿಗೆ ತಲುಪಿಸುವ ಏಕ-ಬಿಂದು ಸಹಾಯ ಕೇಂದ್ರವಾಗಿರುವಂತೆ ಯೋಜಿಸಲಾಗಿದೆ.
ಕರ್ನಾಟಕದ ಮುಖ್ಯಮಂತ್ರಿಗಳು ಈ ಯೋಜನೆಯನ್ನು ವರ್ಷ 2020-21 ರ ಬಜೆಟ್ನಲ್ಲಿ ಘೋಷಿಸಿದ್ದಾರೆ. ವಾರದ ಎಲ್ಲಾ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತವೆ. ಈಗಾಗಲೇ ಸಕಾಲ ಯೋಜನೆಯಡಿ ಸಕಾಲದಲ್ಲಿ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ. ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಇಂತಹ ಕೇಂದ್ರ ಆರಂಭವಾಗಲಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು-ಒನ್ ಕರ್ನಾಟಕ-ಒನ್ ರೀತಿಯಲ್ಲಿ ಹಲವು ಸೇವೆಗಳು ಈ ಯೋಜನೆಯಡಿ ಸಿಗಲಿವೆ. ಮಾಹಿತಿ ಹಕ್ಕು ಕಾಯ್ದೆ ಸೇವೆ, ಮುಖ್ಯಮಂತ್ರಿಗಳ ಪರಿಹಾರ ಸೇವೆಗಳು, ಕೃಷಿ ಇಲಾಖೆ ಸೇವೆಗಳು, ಕಾರ್ಮಿಕ ಇಲಾಖೆ ಸೇವೆಗಳು, ವೃದ್ಧಾಪ್ಯ ವೇತನ, ಅಂಗವಿಕಲರ ವೇತನ ಒಳಗೊಂಡಂತೆ ಹಲವು ಸೇವೆಗಳು ಲಭ್ಯವಿದೆ.
ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ಯೋಜನೆಗಳ ಪ್ರಯೋಜನ ಸಾರ್ವಜನಿಕರಿಗೆ ಸಿಗಲಿದೆ. 100 ಕ್ಕೂ ಹೆಚ್ಚು ಸೇವೆಗಳು ಒಂದೇ ಸೂರಿನಡಿ ದೊರೆಯುತಿದೆ. ಸಕಾಲದಲ್ಲಿ ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಗ್ರಾಮ ಒನ್ ಯೋಜನೆಯನ್ನು ಸಕಾಲ ತಂತ್ರಾಂಶದೊಂದಿಗೆ ಏಕೀಕರಣ ಮಾಡಲ್ಪಟ್ಟಿರುವುದು ಈ ಯೋಜನೆಯ ವೈಶಿಷ್ಟ್ಯಗಳಲ್ಲಿ ಒಂದಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯ ಸಾಕಾರಕ್ಕೆ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಹಾಗೂ ಜಿಲ್ಲಾಧಿಕಾರಿಗಳು ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ನೇತೃತ್ವ ವಹಿಸಬೇಕು ಸಿಎಂ ಬೊಮ್ಮಾಯಿ ಮತ್ತೊಮ್ಮೆ ಆದೇಶಿಸಿದ್ದಾರೆ.












Click it and Unblock the Notifications