ಕೃಷಿಕರಿಗೆ ಭರ್ಜರಿ ಗುಡ್ನ್ಯೂಸ್, 1 ಕೋಟಿ ರೂ. ಅನುದಾನ: ಸಚಿವ ಎನ್.ಚಲುವರಾಯಸ್ವಾಮಿ
ಬೆಂಗಳೂರು: ರಾಜ್ಯದಲ್ಲಿ ನೈಜ ಕೃಷಿ ಮಾಡುವ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಗುಡ್ನ್ಯೂಸ್ ಕೊಡುವುದಕ್ಕೆ ಮುಂದಾಗಿದೆ. ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೈಜ ಕೃಷಿಗೆ ಒತ್ತು ನೀಡಿ, ಇವರಿಂದ ಬಂದ ಪ್ರಾಥಮಿಕ ಉತ್ಪನ್ನಗಳನ್ನು ಸಂಸ್ಕರಣೆ ಮಾಡಿ ಮಾರುಕಟ್ಟೆಗೆ ಒದಗಿಸಿದಲ್ಲಿ ನೈಜ ಕೃಷಿ ಕಾರ್ಯಕ್ರಮ ಯಶ್ವಸಿ ಆಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ 2025- 2026 ನೇ ಸಾಲಿನ ಆಯವ್ಯಯದಲ್ಲಿ 1 ಕೋಟಿ ಅನುದಾನ ಒದಗಿಸಿ ನೈಜ ಕೃಷಿ ಮಾಡುವ ರೈತರಿಗೆ ರಿಯಾಯಿತಿ ದರದಲ್ಲಿ ಪರಿಕರ ಒದಗಿಸಲಾಗುವುದು ಎಂದಿದ್ದಾರೆ.
ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ಕರ್ನಾಟಕ ಸರ್ಕಾರದ ಜೀವನೋಪಾಯ ಮತ್ತು ಉದ್ಯಮಶೀಲತೆ ಇಲಾಖೆ ಜಂಟಿಯಾಗಿ ನೈಸರ್ಗಿಕ ಕೃಷಿ ಕುರಿತ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ರಾಜ್ಯ ಸರ್ಕಾರದ ಕೃಷಿ ಇಲಾಖೆಯು ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕೆಂದೂ ಘೋಷಿಸಲಾಗಿದೆ. 2025- 2026ನೇ ಸಾಲಿನ ಬಜೆಟ್ನಲ್ಲಿ 1 ಕೋಟಿ ರೂಪಾಯಿ ಅನುದಾನ ಒದಗಿಸಿ ನೈಜ ಕೃಷಿ ಮಾಡುವ ರೈತರಿಗೆ ರಿಯಾಯಿತಿ ದರದಲ್ಲಿ ಪರಿಕರ ಒದಗಿಸಲಾಗುವುದು ಹಾಗೂ ಕೃಷಿ ಪರಿಕರ ಮಾರಾಟಗಾರರು ರಸಾಯನಿಕ ಪರಿಕರಿಗಳ ಬದಲಾಗಿ ಸಾವಯವ ಪರಿಕರಗಳನ್ನು ಮಾರಾಟ ಮಾಡಿದಲ್ಲಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಭರವಸೆ ನೀಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ 990 ಕ್ಲಸ್ಟರ್ ಗಳನ್ನು ಗುರುತಿಸಿ ನೈಜ ಕೃಷಿ ಕಾರ್ಯಕ್ರಮವನ್ನು ಅಳವಡಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ, ಹಾಗೂ ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ಮೂಲಕ ನೈಜ ಕೃಷಿ ಪ್ರಾತ್ಯಕ್ಷಿಕೆಯನ್ನು ಕೂಡ ಅನುಷ್ಠಾನ ಮಾಡಲಾಗಿದೆ. ಪ್ರಸ್ತುತ ನೈಜ ಕೃಷಿಯನ್ನು ಪ್ರೋತ್ಸಾಹಿಸಲು ಹಾಗೂ ನೈಜ ಕೃಷಿಯನ್ನು ರೈತರು ಅಳವಡಿಸಿಕೊಳ್ಳುವಂತೆ ಮಾಡಲು ಸಾವಯವ ಕ್ಷೇತ್ರಗಳ ಪ್ರಮಾಣಿಕರಣ ಮಾಡುವುದು, ಉತ್ಕೃಷ್ಟ ಬೆಲೆ ನೀಡುವುದು ಹಾಗೂ ಮಾರುಕಟ್ಟೆಯೊಂದಿಗೆ ಜೋಡಿಸುವಲ್ಲಿ ಸೂಕ್ತ ಕ್ರಮ ಕೈಗೊಂಡಲ್ಲಿ ನೈಜ ಕೃಷಿ ಕಾರ್ಯಕ್ರಮವು ಯಶ್ವಸಿಯಾಗಿ, ರೈತರ ಆದಾಯ ಹೆಚ್ಚಿಸುವುದಲ್ಲದೇ ಪರಿಸರ ಸಂರಕ್ಷಣೆ ಸಹ ಆಗುವುದು ಎಂದಿದ್ದಾರೆ.
ಈ ಯೋಜನೆಯಡಿ ರಾಜ್ಯದಲ್ಲಿ ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಮಹಿಳಾ ರೈತರಿಗೆ ಕೃಷಿ ತಂತ್ರಜ್ಞಾನಗಳನ್ನು, ನೈಸರ್ಗಿಕ ಕೃಷಿ ವಿಧಾನಗಳನ್ನು ಮತ್ತು ಆಧುನಿಕ ಕೃಷಿ ತಂತ್ರಜ್ಞಾನಗಳ ಬಗ್ಗೆ ತರಬೇತಿ ನೀಡಿ, ಕೃಷಿ ಚಟುವಟಿಕೆಗಳಲ್ಲಿ ಗ್ರಾಮೀಣ ಮಹಿಳೆಯರನ್ನು ಸ್ವಾವಲಂಬಿಗಳಾಗಲು ರಾಜ್ಯಾದ್ಯಂತ ಕೃಷಿ ಸಖಿಯರನ್ನು ನೇಮಿಸಿಕೊಳ್ಳಲಾಗಿದೆ. ಇವರು ಸಂಜೀವಿನಿ ಯೋಜನೆಯಡಿ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ತರಭೇತಿ ಪಡೆದು ಗ್ರಾಮೀಣ ಮಹಿಳೆಯರಿಗೆ ಕೃಷಿ ತರಬೇತಿ, ಕೃಷಿ ಕ್ಷೇತ್ರ ಪಾಠಶಾಲೆಗಳನ್ನು ಆಯೋಜಿಸಿ, ರೈತ ಹಾಗೂ ರೈತ ಮಹಿಳೆಯರಿಗೆ ಸೂಕ್ತ ಸಲಹೆಗಳನ್ನು ನೀಡಿ ಅವರ ಆರ್ಥಿಕ ಅಭಿವೃದ್ಧಿಗೆ ನೆರವು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.












Click it and Unblock the Notifications