Greater Bengaluru: ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ; ಮಹತ್ವದ ಬದಲಾವಣೆ
ಬೆಂಗಳೂರು, ಆಗಸ್ಟ್19: 2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕರಿಸಲಾಯಿತು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸದನದಲ್ಲಿ ಈ ವಿಧೇಯಕವನ್ನು ಮಂಡಿಸಿದರು. ವಿರೋಧ ಪಕ್ಷದ ನಾಯಕರು, ಶಾಸಕರು ಚರ್ಚೆ ನಡೆಸಿದ ನಂತರ ಅನುಮೋದನೆ ನೀಡಲಾಯಿತು.
2025ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕದ ಪ್ರಸ್ತಾವನೆ ವೇಳೆ ಮಾತನಾಡಿದ ಶಿವಕುಮಾರ್ ಅವರು, ಇದರಲ್ಲಿ ಒಂದು ಸಣ್ಣ ಸ್ಪಷ್ಟನೆ ನೀಡುವುದಿದೆ. ಏಕೆಂದರೆ ಮಸೂದೆ ಅಂಗೀಕಾರಗೊಂಡಿದ್ದರೂ ಕೆಲವರು ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದರು. ಹೀಗಾಗಿ ಈ ಮಸೂದೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದರು.

ಈ ತಿದ್ದುಪಡಿಯ ಉದ್ದೇಶ ಹಾಗೂ ಇದರ ಪರಿಣಾಮವೇನು ಎಂಬ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ಈಗ ಜಾರಿಯಲ್ಲಿರುವ ಕಾಯ್ದೆ ಅನುಸಾರ ಜಿಬಿಎ ಅಡಿಯಲ್ಲಿ ರಚಿಸಲಾಗಿರುವ ಪಾಲಿಕೆಗಳ ವಿಚಾರದಲ್ಲಿ ಪ್ರಾಧಿಕಾರವು ಹಸ್ತಕ್ಷೇಪ ಮಾಡಲು ಅವಕಾಶವಿದೆ ಎಂದು ಯಾರೋ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಪಾಲಿಕೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಅಂಶವನ್ನು ಪ್ರಸ್ತುತ ತಿದ್ದುಪಡಿ ವಿಧೇಯಕದಲ್ಲಿ ತೆಗೆದು ಹಾಕಲಾಗಿದೆ. ಪಾಲಿಕೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ತೆಗೆದುಕೊಳ್ಳುವುದಿಲ್ಲ. ಪಾಲಿಕೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲಿವೆ. ಪಾಲಿಕೆಗಳ ಕಾರ್ಯಚಟುವಟಿಕೆಯಲ್ಲಿ ಜಿಬಿಎ ಹಸ್ತಕ್ಷೇಪ ಇಲ್ಲ ಎಂಬ ಸ್ಪಷ್ಟನೆ ನೀಡಲು ಈ ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಶಾಸಕ ಅಶ್ವತ್ ನಾರಾಯಣ ಅವರು, ನೀವು ಯಾವ ರೀತಿ ನಿಯಂತ್ರಣಕ್ಕೆ ತರಲು ಮುಂದಾಗಿದ್ದಿರಿ, ಈಗ ಯಾಕೆ ಅದನ್ನು ಹಿಂಪಡೆದಿದ್ದೀರಿ, ನ್ಯಾಯಾಲಯದಲ್ಲಿ ಅರ್ಜಿ ಹಾಕಿದವರ ಆಕ್ಷೇಪಗಳೇನು ವಿವರಿಸಿ ಎಂದು ಕೇಳಿದಾಗ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸದಿದ್ದರೂ ಮುಂದೆ ಯಾವುದೇ ರೀತಿಯ ಗೊಂದಲಗಳು ಇರಬಾರದು ಎಂಬ ಕಾರಣಕ್ಕೆ ಈ ತಿದ್ದುಪಡಿ ತರುತ್ತಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಆಯ್ಕೆಯಾಗುವ ಮೇಯರ್ ಹಾಗೂ ಪಾಲಿಕೆ ಸದಸ್ಯರಿಗೆ ಸಂಪೂರ್ಣ ಅಧಿಕಾರ ಇರಬೇಕು ಎಂಬುದು ನಮ್ಮ ಉದ್ದೇಶ. ಮುಂದೆ ನಾನು, ನೀವು ಅಧಿಕಾರದಲ್ಲಿ ಇರುತ್ತೇವೋ ಇರುವುದಿಲ್ಲವೋ ಗೊತ್ತಿಲ್ಲ. ಆದರೆ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಅದನ್ನು ತೆಗೆದುಹಾಕಿದ್ದೇವೆ ಎಂದು ತಿಳಿಸಿದರು.
ಶಾಸಕರ ಚರ್ಚೆ ನಂತರ ಮಾತನಾಡಿದ ಶಿವಕುಮಾರ್ ಅವರು, ನಾನು ಕೊಟ್ಟ ವಿವರಣೆ ಸುರೇಶ್ ಕುಮಾರ್ ಹಾಗೂ ಅಶೋಕ್ ಅವರಿಗೆ ಅರ್ಥವಾಗಿದೆ. ಆದರೆ ಬಹಳ ಓದಿಕೊಂಡಿರುವ ಅಶ್ವತ್ ನಾರಾಯಣ ಅವರಿಗೆ ಅರ್ಥವಾಗಿಲ್ಲ. ನಾನು ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಬಗ್ಗೆ ಅಧ್ಯಯನ ಮಾಡಿದ್ದೇನೆ. ನಾನು ನನ್ನ 47ನೇ ವಯಸ್ಸಿಗೆ ಪದವಿ ಪೂರ್ಣಗೊಳಿಸಿದೆ. ರಾಜಕೀಯ ಶಾಸ್ತ್ರ ವಿಷಯದಲ್ಲಿ ಸ್ಥಳೀಯ ಸಂಸ್ಥೆಗಳ ವಿಚಾರದಲ್ಲಿ ನನಗೆ ಅತಿಹೆಚ್ಚು ಅಂಕ ಸಿಕ್ಕಿತ್ತು. ರಾಜೀವ್ ಗಾಂಧಿ ಅವರು 73, 74ನೇ ತಿದ್ದುಪಡಿ ಮಾಡುವ ಸಂದರ್ಭದಲ್ಲಿ ಕರ್ನಾಟಕಕ್ಕೆ ಬಂದಿದ್ದರು. ಆಗ ನಾನು ಈ ತಿದ್ದುಪಡಿಯ ಉದ್ದೇಶದ ಬಗ್ಗೆ ಅವರ ಬಳಿ ಕೇಳಿದೆ. ಪಂಚಾಯ್ತಿಯಿಂದ ಸಂಸತ್ತಿನವರೆಗೆ ನಾಯಕರು ಇರಬೇಕು. ಹೀಗಾಗಿ ಇದು ನಾಯಕರನ್ನು ತಯಾರು ಮಾಡುವ ಅಡಿಪಾಯ ಎಂದರು. ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲು ಇವುಗಳಿಗೆ ಸ್ವಾಯತ್ತತೆ ನೀಡಬೇಕು ಎಂದು ಹೇಳಿದರು.












Click it and Unblock the Notifications