ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿ, ಡಿಸೆಂಬರ್ 19: ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಡಿಸೆಂಬರ್ 19) ಗುರುವಾರ ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಭೇಟಿಯಾದರು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯ ಆಯ್ದ 25ಕ್ಕೂ ಹೆಚ್ಚು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಾದ ನಡೆಸಿದರು.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಪ್ರತಿಯೊಬ್ಬರನ್ನು ತಮ್ಮದೇ ದಾಟಿಯಲ್ಲಿ ಮಾತನಾಡಿಸಿದ ಮುಖ್ಯಮಂತ್ರಿಗಳು, ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮಹಿಳೆಯರು ಸದುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆ ಮಹಿಳೆಯರಿಂದ ಕೇಳಿ ಖುಷಿಪಟ್ಟರು. ಅಲ್ಲದೇ ಮುಂದಿನ ದಿನಗಳಲ್ಲಿ ಮತ್ತಷ್ಟು ಈ ಯೋಜನೆಯ ಹಣವನ್ನು ಬಳಸಿಕೊಂಡು ಉತ್ತಮ ಜೀವನ ನಡೆಸುವಂತೆ ಸಲಹೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ. ಗೃಹಲಕ್ಷ್ಮಿ ಯೋಜನೆಯ ಹಣದಿಂದ ಬದುಕಿನ ಅವಕಾಶಗಳನ್ನು ಸೃಷ್ಟಿಸಿಕೊಂಡ 25ಕ್ಕೂ ಹೆಚ್ಚು ಮಂದಿ ಫಲಾನುಭವಿಗಳನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ ಎಂದರು.
ಗೃಹಲಕ್ಷ್ಮಿ ಯೋಜನೆಯಿಂದ ಫಲಾನುಭವಿಗಳ ಜೀವನದಲ್ಲಿ ಆಗಿರುವ ಲಾಭಗಳ ಬಗ್ಗೆ ವಿವರಿಸಿದ್ದಾರೆ. ಬದುಕಿಗೆ ಹೊಸ ಚೈತನ್ಯ ನೀಡಿದ ಗೃಹಲಕ್ಷ್ಮಿ ಯೋಜನೆಯನ್ನು ಸಾಕಾರಗೊಳಿಸಿದ ನನಗೆ, ಇಲಾಖೆಯ ಸಚಿವರು ಹಾಗೂ ಸರ್ಕಾರಕ್ಕೆ ಕೃತಜ್ಞರಾಗಿರುವುದಾಗಿ ಗೃಹಲಕ್ಷ್ಮಿಯರು ತಿಳಿಸಿದ್ದಾರೆ. ಈ ಎಲ್ಲರ ಮಾತುಗಳು ಕೇಳಿ ಸಂತೃಪ್ತ ಭಾವ ನನ್ನಲ್ಲಿ ಮೂಡಿದೆ ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಿಂದ ಒಂದೇ ಮನೆಯ ಅತ್ತೆ ಸೊಸೆಯ ಮಧ್ಯೆ ಜಗಳ ತಂದಿದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ ಇಂದಿನ ಕಾರ್ಯಕ್ರಮಕ್ಕೆ ಅತ್ತೆ-ಸೊಸೆಯರೇ ಜೊತೆ ಜೊತೆಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯೋಜನೆಯಿಂದ ತಮಗಾಗಿರುವ ಲಾಭದ ಬಗ್ಗೆ ಮಾತನಾಡಿದ್ದಾರೆ. ಈ ಯೋಜನೆಯಿಂದ ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗುತ್ತಿರುವುದು ಸಂತೋಷದ ವಿಚಾರ. ಆದ್ದರಿಂದ ಮಹಿಳೆಯರನ್ನು ಸಶಕ್ತಗೊಳಿಸುವ ಈ ಯೋಜನೆಯನ್ನು ಮುಂದುವರಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಉಪಸ್ಥಿತರಿದ್ದರು.












Click it and Unblock the Notifications