ಗೃಹಲಕ್ಷ್ಮಿ; ಶನಿವಾರ ಒಂದೇ ದಿನ 14 ಲಕ್ಷ ನೋಂದಣಿ
ಬೆಂಗಳೂರು, ಜುಲೈ 23; ಕರ್ನಾಟಕ ಕಾಂಗ್ರೆಸ್ ನೀಡಿರುವ 5 ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಸಹ ಒಂದು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಯೋಜನೆಯಡಿ ಫಲಾನುಭವಿಗಳ ನೋಂದಣಿಗೆ ಚಾಲನೆ ಸಿಕ್ಕಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭವಾದ 3ನೇ ದಿನ ಅಂದರೆ ಶನಿವಾರ 14,16,462 ಫಲಾನುಭವಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಮೊದಲ ದಿನವಾದ ಗುರುವಾರ ಕೇವಲ 60 ಸಾವಿರ ನೋಂದಣಿ ನಡೆದಿತ್ತು ಎಂದು ಇಲಾಖೆ ಮಾಹಿತಿ ನೀಡಿದೆ.

ಶುಕ್ರವಾರ 7.77 ಲಕ್ಷ ಮಹಿಳೆಯರು ಗೃಹಲಕ್ಷ್ಮಿಗೆ ನೋಂದಣಿ ಮಾಡಿಸಿಕೊಂಡಿದ್ದರು. ಮೂರು ದಿನಗಳಲ್ಲಿ ಒಟ್ಟು 22,90,782 ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಯೋಜನೆಯಡಿ ನೋಂದಣಿಗೆ ಸರ್ಕಾರ ಯಾವುದೇ ಗಡುವು ನಿಗದಿ ಮಾಡಿಲ್ಲ.
ಡಿ. ಕೆ. ಶಿವಕುಮಾರ್ ಪರಿಶೀಲನೆ; ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಚಾಲನೆ ನೀಡಿದ್ದರು. ಶನಿವಾರ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಕನಕಪುರದ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ, ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಪಾರದರ್ಶಕ ಹಾಗೂ ಲಂಚಮುಕ್ತವಾಗಿ ನೋಂದಣಿ ಪ್ರಕ್ರಿಯೆ ನಡೆಯಬೇಕೆಂಬುದು ನಮ್ಮ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಜನರು ದೂರು ನೀಡಿದ್ದರು. ಆದ್ದರಿಂದ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ. ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರ್ಕಾರ ಸಹಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.
ಗೃಹಲಕ್ಷ್ಮಿ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಯೋಜನೆಯಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ. ಗಳನ್ನು ಡಿಬಿಟಿಯ ಮೂಲಕ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ಈ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಈಗಾಗಲೇ ಆರಂಭಗೊಂಡಿದ್ದು, ಯೋಜನೆಯ ಸೌಲಭ್ಯವನ್ನು ಎಲ್ಲ ಅರ್ಹ ಮಹಿಳೆಯರು ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ನೋಂದಣಿ ಮಾಡಿಕೊಳ್ಳುವುದು ಹೇಗೆ?; ಕರ್ನಾಟಕ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಜಾರಿಗೊಳಿಸಿದ ಪ್ರಮುಖ ಯೋಜನೆ ಇದಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ 2,000 ರೂ. ಹಣ ಜಮೆ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ನೋಂದಣಿಗೆ ಜುಲೈ 19 ರಂದು ಚಾಲನೆ ಸಿಕ್ಕಿದೆ.
ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳಲ್ಲಿ ಯೋಜನೆಗೆ ಅರ್ಜಿ ಸಲ್ಲಿಕೆ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ ಹಾಗೂ ಯೋಜನೆಯ ನೋಂದಣಿ ಸಂಪೂರ್ಣ ಉಚಿತ.
ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೋಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುತ್ತದೆ. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರ್ಕಾರ ನಿಗದಿಪಡಿಸಿರುವುದಿಲ್ಲ.
ರೇಷನ್ ಕಾರ್ಡ್ನಲ್ಲಿ ನಮೂದಿಸಿರುವ ಮನೆಯ ಯಜಮಾನಿಯನ್ನೇ 'ಗೃಹಲಕ್ಷ್ಮಿ' ಯೋಜನೆಯ ಫಲಾನುಭವಿ ಎಂದು ಪರಿಗಣಿಸಲಾಗುತ್ತದೆ. ಈ ಯೋಜನೆಯ ಪ್ರಯೋಜನವನ್ನು ಸೇವಾ ಕೇಂದ್ರಗಳಿಗೆ ಹೋಗದೇ ಪಡೆಯಬಹುದು. ಸ್ಥಳೀಯ ಮಟ್ಟದಲ್ಲಿ ಸರ್ಕಾರದಿಂದ ನೇಮಕಗೊಂಡ ಪ್ರಜಾಪ್ರತಿನಿಧಿಗಳು ಮನೆಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಲಿದ್ದಾರೆ.












Click it and Unblock the Notifications