Gruha Lakshmi Scheme: ಮಹಿಳೆಯರಿಗೆ ಗುಡ್ ನ್ಯೂಸ್: ಗೃಹ ಲಕ್ಷ್ಮಿ ಯೋಜನೆ ಕುರಿತು ಮಹತ್ವದ ಹೇಳಿಕೆ ಕೊಟ್ಟ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 19: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೂ ಶೀಘ್ರವೇ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೃಹಲಕ್ಷ್ಮಿ ಯೋಜನೆಯ ಹಣ ಜನವರಿಯಿಂದ ಕೊಡಬೇಕಿದ್ದು, ಶೀಘ್ರವೇ ಅದನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಹಾಲು ಉತ್ಪಾದಕ ರೈತರಿಗೆ 7 ರೂಪಾಯಿ ಹಾಲಿನ ಪ್ರೋತ್ಸಾಹ ಧನ ನೀಡಲಾಗುವುದು 2026- 27 ನೇ ಸಾಲಿಗೆ 7 ರೂ. ಹಾಲಿನ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತಿದೆ. 2024-25 ರ ಬಜೆಟ್ ನಲ್ಲಿ 52009 ಕೋಟಿಗಳನ್ನು ಗ್ಯಾರಂಟಿಗಳಿಗೆ ಇರಿಸಲಾಗಿದ್ದು, ಅದರಲ್ಲಿ 41560 ಕೋಟಿ ವೆಚ್ಚ ಮಾಡಲಾಗಿದೆ ಎಂದು ಹೇಳಿದರು.

ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿಯಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಆರೋಗ್ಯಕರವಾಗಿರಲು Fiscal responsibility Act ದಂತೆ ಇರುವ ಮಾನದಂಡಗಳನ್ನು ಪೂರೈಸಿರಬೇಕು. ನಾವು ಪೂರೈಸಿದ್ದೇವೆ. ಆರ್ಥಿಕ ಹೊಣಗಾರಿಕೆ ಅಧಿನಿಯಮದ ಮಾನದಂಡದಂತೆ, ಸಾಲದ ಮೊತ್ತ GSDP ಯ ಶೇ.25 ರಷ್ಟಿರಬೇಕು, ರಾಜ್ಯ ಶೇ.24.91 ರಷ್ಟರ ಮಿತಿಯಲ್ಲಿದೆ. ವಿತ್ತೀಯ ಕೊರತೆ GSDPಯ ಶೇ.3 ರಷ್ಟುನ್ನು ಮೀರಬಾರದು. ಅದು 2.95 % ರಷ್ಟಿದೆ. ಸರ್ಕಾರ ಎಲ್ಲ ಆರ್ಥಿಕ ಮಾನದಂಡಗಳ ಮಿತಿಯೊಳಗಿದೆ. ಆದ್ದರಿಂದ ನಮ್ಮ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು, ಜನರಿಗೂ ಇದರ ಬಗ್ಗೆ ಅರಿವಿದೆ ಎಂದರು
2024-25 ನೇ ಸಾಲಿನಲ್ಲಿ SCSP ಮತ್ತು TSP ಅಡಿಯಲ್ಲಿ ಒಟ್ಟು 39,121 ಕೋಟಿ ಹಂಚಿಕೆ ಮಾಡಿದ್ದು, ಇದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರದ ಕಟಿಬದ್ದತೆಯನ್ನು ತೋರಿಸುತ್ತದೆ ಎಂದರು. ಮೈಕ್ರೊ ಹಣಕಾಸಿನ ಸಂಸ್ಥೆಗಳಿಗೆ ನಿಯಂತ್ರಣ ಕಾನೂನುಗಳನ್ನು ಸರ್ಕಾರ ಜಾರಿಗೆ ತಂದಿದ್ದು, ಕಾನೂನು ಬಾಹಿರವಾಗಿ ತೊಂದರೆಗೊಳಗಾಗುತ್ತಿದ್ದ ಜನರಿಗೆ ಇದರಿಂದ ರಕ್ಷಣೆ ದೊರೆಯುವಂತಾಗಿದೆ. ಹಾಲಿಗೆ ನೀಡುವ ಪ್ರೋತ್ಸಾಹ ಧನವನ್ನು ನಮ್ಮ ಸರ್ಕಾರ 2 ರೂ ನಿಂದ 5 ರೂಗೆ ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಪ್ರೋತ್ಸಾಹ ಧನವನ್ಬು ಹೆಚ್ಚಿಸುವ ತೀರ್ಮಾನವನ್ನು ಸೂಕ್ತ ಸಂದರ್ಭದಲ್ಲಿ ತೆಗೆದುಕೊಳ್ಳಲಾಗುವುದೆಂದರು.
ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ. ವಿವಿ ಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಜೊತೆಗೆ ಶೈಕ್ಷಣಿಕ ಗುಣಮಟ್ಟವನ್ನು ಮೇಲ್ದರ್ಜೆಗೇರಿಸುವ ಸಂಬಂಧ ರಚಿಸಲಾಗಿರುವ ಸಚಿವ ಸಂಪುಟದ ಉಪಸಮಿತಿಯ ವರದಿ ಬಂದ ನಂತರ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದೆಂದರು. ಸದಸ್ಯರ ಎಲ್ಲ ಪ್ರಶ್ನೆಗಳಿಗೆ ಸ್ಪಷ್ಟನೆಯನ್ನು ಸರ್ಕಾರ ನೀಡಿದ್ದು, ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಅಂಗೀಕರಿಸುವಂತೆ ಸದನವನ್ನು ಮುಖ್ಯಮಂತ್ರಿಗಳು ಕೋರಿದರು . ಸದನವು ವಂದನಾ ನಿರ್ಣಯವನ್ನು ಅಂಗೀಕರಿಸಿದೆ ಎಂದು ಸಭಾಪತಿಗಳು ತಿಳಿಸಿದರು.












Click it and Unblock the Notifications