GST ಸರಳೀಕರಣದಿಂದ ರಾಜ್ಯಕ್ಕೆ 2.5 ಲಕ್ಷ ಕೋಟಿ ನಷ್ಟ: ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ
ತೆರಿಗೆ ವಿಚಾರದಲ್ಲಿ ಜಿಎಸ್ಟಿ ಕೌನ್ಸಿಲ್ ಹೊಸ ಬದಲಾವಣೆಗಳತ್ತ ಹೆಜ್ಜೆ ಇಟ್ಟಿದೆ. ಕೌನ್ಸಿಲ್ ನಮ್ಮ ಮುಂದಿಟ್ಟಿರುವ ಜಿಎಸ್ಟಿ ತೆರಿಗೆ ಸರಳೀಕರಣ ವ್ಯವಸ್ಥೆಯನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಈ ವ್ಯವಸ್ಥೆ ರಾಜ್ಯಗಳ ತೆರಿಗೆ ಆದಾಯವನ್ನು ರಕ್ಷಿಸುವಂತಿರಬೇಕು ಹಾಗೂ ಇದರ ಸಂಪೂರ್ಣ ಲಾಭ ದೇಶದ ಜನಸಾಮಾನ್ಯರಿಗೆ ಸಿಗಬೇಕೇ ಹೊರತು, ಕೆಲವು ಕಂಪನಿಗಳಿಗೆ ಮಾತ್ರ ಲಾಭ ಆಗುವಂತಿರಬಾರದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ನಡೆದ ಸಮಾನ ಮನಸ್ಕ ಎಂಟು ರಾಜ್ಯಗಳ ಸಚಿವರು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದ್ದಾರೆ. ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಜಿಎಸ್ಟಿ ಸರಳೀಕರಣ ವ್ಯವಸ್ಥೆಯಿಂದ ರಾಜ್ಯಗಳ ಆದಾಯ 85,000 ಕೋಟಿ ರೂಪಾಯಿಯಿಂದ 2.5 ಲಕ್ಷ ಕೋಟಿ ರೂಪಾಯಿವರೆಗೆ ನಷ್ಟ ಉಂಟಾಗಲಿದ್ದು, ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಮಂಡಳಿಯೇ ನಷ್ಟ ಪರಿಹಾರ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಪ್ರಸ್ತಾವಿತ ಜಿಎಸ್ಟಿ ಸರಳೀಕರಣದಿಂದ ರಾಜ್ಯ ಸರ್ಕಾರಗಳಿಗೆ ಯಾವ ಪ್ರಮಾಣದಲ್ಲಿ ಆದಾಯ ಖೋತಾ ಆಗಬಹುದು ಎಂಬ ಅಂದಾಜಿನ ಕುರಿತು ಕೇಂದ್ರ ಸರ್ಕಾರ ಈವರೆಗೆ ಯಾವುದೇ ಮಾಹಿತಿ ನೀಡಿಲ್ಲ. ಕೆಲವು ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ರಾಜ್ಯಗಳಿಗೆ ಭಾಗಶಃ 85,000 ಕೋಟಿಯಿಂದ 2.5 ಲಕ್ಷ ಕೋಟಿವರೆಗೆ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಿವೆ. ರಾಜ್ಯ ಸರ್ಕಾರಗಳಿಗೆ ಆದಾಯ ನಷ್ಟ ಉಂಟಾದರೆ ಕೇಂದ್ರ ಸರ್ಕಾರಕ್ಕೂ ನಷ್ಟವಾಗಲಿದೆ. ಹೀಗಾಗಿ ಜಿಎಸ್ಟಿ ಸ್ಥಿರಗೊಳ್ಳುವವರೆಗೆ ಕೇಂದ್ರ ಸರ್ಕಾರ ತಮ್ಮ ಖಜಾನೆಯಿಂದ ಒಂದು ರೂಪಾಯಿಯನ್ನೂ ನೀಡುವ ಅಗತ್ಯವಿಲ್ಲ. ಬದಲಿಗೆ ಪ್ರತಿಯೊಂದು ರಾಜ್ಯಗಳಿಗೂ ಪರಿಹಾರ ನೀಡಬೇಕು ಎಂದಿದ್ದಾರೆ.
ಸೆಸ್ ಆದಾಯದಲ್ಲಿ ರಾಜ್ಯಗಳಿಗೆ ಪಾಲಿಲ್ಲ
ಕೇಂದ್ರದ ಆದಾಯದಲ್ಲಿ ಜಿಎಸ್ಟಿ ಪಾಲು ಕೇವಲ ಶೇ.28ರಷ್ಟು ಮಾತ್ರ. ಉಳಿದ ಶೇ.72ರಷ್ಟು ಆದಾಯವನ್ನು ಕೇಂದ್ರ ವಿವಿಧ ಮೂಲಗಳಿಂದ ಗಳಿಸುತ್ತದೆ. ನೇರ ತೆರಿಗೆ, ಆದಾಯ ತೆರಿಗೆ, ಕಸ್ಟಮ್ಸ್ ಹಾಗೂ ವಿವಿಧ ಸೆಸ್ ಕೇಂದ್ರದ ಆದಾಯದ ಮೂಲ. ಸೆಸ್ ಮೂಲಕವೇ ಕೇಂದ್ರ ಸರ್ಕಾರ ಶೇ.17ರಿಂದ ಶೇ.20 ರಷ್ಟು ಆದಾಯ ಗಳಿಸುತ್ತದೆ. ಸೆಸ್ ಆದಾಯದಲ್ಲಿ ಒಂದು ರೂಪಾಯಿಯನ್ನೂ ಸಹ ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಹಂಚಿಕೊಳ್ಳುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯಗಳ ಆದಾಯದಲ್ಲಿ ಜಿಎಸ್ಟಿ ಪಾಲು ಶೇ.50 ರಷ್ಟಿದೆ. ಹೀಗಾಗಿ ಅಭಿವೃದ್ಧಿಗಾಗಿ ಹಾಗೂ ಆದಾಯ ಸಂಗ್ರಹಣೆಗೆ ರಾಜ್ಯಗಳು ಜಿಎಸ್ಟಿಯನ್ನೇ ಅವಲಂಬಿಸಿವೆ. ಇಂತಹ ಸಂದರ್ಭದಲ್ಲಿ ರಾಜ್ಯಗಳ ಆದಾಯದ ಶೇ 20ರಷ್ಟು ಆದಾಯ ನಷ್ಟವಾದರೆ, ರಾಜ್ಯಗಳ ಆರ್ಥಿಕ ಸ್ವಾಯತ್ತತೆ ಪ್ರಶ್ನಾರ್ಥಕವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಜಿಎಸ್ಟಿಯಿಂದ ರಾಜ್ಯಕ್ಕೆ ನಷ್ಟ ಏರಿಕೆ
ಜಿಎಸ್ಟಿ ಪರಿಚಯಿಸುವಾಗ ಈ ನೂತನ ತೆರಿಗೆ ವ್ಯವಸ್ಥೆ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತದೆ ಎನ್ನಲಾಗಿತ್ತು. ಇದು ನಿಜವಾಗಿದ್ದರೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಆದಾಯ ದುಪ್ಪಟ್ಟಾಗಬೇಕಿತ್ತು. ಆದರೆ ಕಳೆದ 7-8 ವರ್ಷಗಳಲ್ಲಿ ಈ ಹೇಳಿಕೆ ಸುಳ್ಳು ಎಂದು ಸಾಬೀತಾಗಿದೆ. ಪ್ರತಿ ವರ್ಷವೂ ಎಲ್ಲ ರಾಜ್ಯಗಳ ನಿವ್ವಳ ಆದಾಯ ಗಣನೀಯವಾಗಿ ಇಳಿಯುತ್ತಲೇ ಇದೆ. ಜಿಎಸ್ಟಿಗೂ ಮುನ್ನ ವ್ಯಾಟ್ ಅಡಿಯಲ್ಲಿ ತೆರಿಗೆ ಸಂಗ್ರಹಿಸುತ್ತಿದ್ದ ಕಾಲದಲ್ಲಿ ದೇಶದ ಜಿಡಿಪಿಗೆ ವ್ಯಾಟ್ ಕೊಡುಗೆ ಶೇ 6.1ರಷ್ಟಿತ್ತು. ಆದರೆ, ಈಗ ಜಿಎಸ್ಟಿ ಬಳಿಕ ಈ ಪ್ರಮಾಣ ಶೇ 6.1ಕ್ಕೆ ತಲುಪಿಲ್ಲ. ಪ್ರಸ್ತುತ ಜಿಡಿಪಿಗೆ ಜಿಎಸ್ಟಿ ಕೊಡುಗೆ ಕೇವಲ ಶೇ 5.9ರಷ್ಟು ಮಾತ್ರ. ಒಟ್ಟಾರೆ ಜಿಎಸ್ಟಿಯಿಂದಾಗಿ ರಾಜ್ಯ ಹಾಗೂ ಕೇಂದ್ರಕ್ಕೆ ಆದಾಯ ನಷ್ಟವಾಗುತ್ತಿರುವುದು ಸ್ಪಷ್ಟ ಎಂದು ವಿವರಿಸಿದ್ದಾರೆ.
ನಾವು ತೆರಿಗೆ ಸರಳೀಕರಣದ ಪರ ಇದ್ದೇವೆ. ಆದರೆ, ರಾಜ್ಯದ ಆದಾಯವನ್ನೂ ಕಾಪಾಡಬೇಕು. ಹೆಚ್ಚಿನ ಪ್ರಮಾಣದ ಅಭಿವೃದ್ಧಿ ಕೆಲಸಗಳನ್ನು ರಾಜ್ಯಗಳೇ ಮಾಡಬೇಕು. ಆದರೆ ಆದಾಯ ಮಾತ್ರ ಕೇಂದ್ರದ ಪಾಲಾದರೆ, ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ? ಸಾರ್ವಜನಿಕರೂ ಅವರ ಯೋಗಕ್ಷೇಮದ ಬೇಡಿಕೆ ಹಾಗೂ ಅಭಿವೃದ್ಧಿ ಅಗತ್ಯತೆಗಳಿಗೆ ರಾಜ್ಯ ಸರ್ಕಾರಗಳನ್ನೇ ಅವಲಂಬಿಸಿದ್ದಾರೆ ಎಂದಿದ್ದಾರೆ.












Click it and Unblock the Notifications