ಹುಣಸೂರು, ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಅಂತಿಮ!
ಬೆಂಗಳೂರು, ಅಕ್ಟೋಬರ್ 17 : ಇನ್ನೇನು 2018ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ಟಿಕೆಟ್ ಗಾಗಿ ಪೈಪೋಟಿ ಶುರುವಾಗಿದೆ.
ಹುಣಸೂರು ಮತ್ತು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಹುಣಸೂರು ವಿಧಾನಸಭಾ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ಎಚ್.ಡಿ.ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದು, ಹುಣಸೂರು ಕ್ಷೇತ್ರದಿಂದ ಎಚ್.ವಿಶ್ವನಾಥ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದರು.
ಹುಣಸೂರು ಕ್ಷೇತ್ರದಿಂದ ಬೇರೆಯವರಿಗೆ ಟಿಕೆಟ್ ನೀಡಲಾಗುತ್ತಿದೆ ಎನ್ನುವ ವದಂತಿಗಳಲ್ಲಿ ಸತ್ಯಾಂಶವಿಲ್ಲ. ಹಿರಿಯ ಮುಖಂಡರಾದ ವಿಶ್ವನಾಥ್ ಸ್ಪರ್ಧೆಯಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟನೆ ನೀಡಿದರು.

ಕುಟುಂಬದಿಂದ ಇಬ್ಬರೇ ಸ್ಪರ್ಧೆ ಎಂದ ಎಚ್ ಡಿಕೆ
ಪ್ರಜ್ವಲ್ ರೇವಣ್ಣ ಹುಣಸೂರು ಕ್ಷೇತ್ರಕ್ಕೆ ಸ್ಪರ್ಧಿಸುವ ಸಲುವಾಗಿಯೇ ಕಳೆದ ಕೆಲ ಸಮಯದಿಂದ ಕ್ಷೇತ್ರದಲ್ಲಿ ಓಡಾಡಿಕೊಂಡು ಸಭೆ, ಸಮಾರಂಭಗಳಲ್ಲಿ ಪಾಲ್ಗೊಂಡು ಜನರ ಮಧ್ಯೆ ಗುರುತಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದರು. ಆದರೆ ಇದಕ್ಕೆ ಅಡ್ಡಗಾಲು ಹಾಕಿದ ಚಿಕ್ಕಪ್ಪ ಎಚ್.ಡಿ.ಕುಮಾರ ಸ್ವಾಮಿ ಅವರು ತಮ್ಮ ಕುಟುಂಬದಿಂದ ರೇವಣ್ಣ ಹಾಗೂ ನಾನು ಹೊರತುಪಡಿಸಿ ಬೇರೆ ಯಾರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಪ್ರಜ್ವಲ್ ಆಸೆಗೆ ತಣ್ಣೀರು
ಹುಣಸೂರು ಕ್ಷೇತ್ರದಿಂದ ವಿಶ್ವನಾಥ್ ಸ್ಪರ್ಧಿಸುವುದು ಖಚಿತ ಎಂದು ಎಚ್ ಡಿಕೆ ಸ್ಪಷ್ಟ ಪಡಿಸುವ ಮೂಲಕ ಪ್ರಜ್ವಲ್ ಅವರ ರಾಜಕೀಯ ಕನಸಿಗೆ ತಣ್ಣೀರು ಎರಚಿದರು. ವಿಕೆಟ್ ಕೈತಪ್ಪಲಿದೆ ಎಂಬುವುದು ಗೊತ್ತಾಗುತ್ತಿದ್ದಂತೆಯೇ ಜೆಡಿಎಸ್ ನಲ್ಲಿ ಸೂಟ್ ಕೇಸಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ಬಹಿರಂಗವಾಗಿ ಹೇಳಿ ಆಕ್ರೋಶ ಹೊರ ಹಾಕಿದ್ದರು.

ಮೊದಲೇ ಮ್ಯಾಚ್ ಫಿಕ್ಸ್
2018ರ ವಿಧಾನಸಭಾ ಚುನಾವಣೆಗೆ ಹುಣಸೂರು ಕ್ಷೇತ್ರದ ಟಿಕೆಟ್ ನೀಡಬೇಕೆಂದು ಕಾಂಗ್ರೆಸ್ ನಿಂದ ಹೊರ ಬರುವುದಕ್ಕೂ ಮುನ್ನವೇ ಕುಮಾರಸ್ವಾಮಿ ಹಾಗೂ ದೇವೇಗೌಡ ಜತೆ ಎಚ್ ವಿಶ್ವಾನಾಥ್ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡ ಬಳಿಕ ಜೆಡಿಎಸ್ ಸೇರಿದ್ದರು.

ಪ್ರಚಾಕ್ಕೆ ನಿಖಿಲ್ ಎಂಟ್ರಿ, ಪ್ರಜ್ವಲ್ ಡೌಟ್
ಹುಣಸೂರು ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿರುವ ಪ್ರಜ್ವಲ್ ರೇವಣ್ಣ 2018ರ ಚುನಾವಣೆಯ ಪ್ರಚಾರದಿಂದ ದೂರ ಉಳಿಯುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್, ಚುನಾವಣೆಗೆ ನೇರವಾಗಿ ಸ್ಪರ್ಧಿಸದಿದ್ದರೂ, ಪ್ರಮುಖವಾಗಿ ಕುಮಾರಸ್ವಾಮಿ ಜತೆಗೆ ರಾಜ್ಯಾದ್ಯಂತ ಪ್ರಚಾರಕ್ಕಿಳಿಯಲಿದ್ದಾರೆ.












Click it and Unblock the Notifications