ಒಂಬತ್ತ ವರ್ಷಗಳ ಕಾಲ ಈ ನಮ್ಮ ಗ್ಯಾರಂಟಿ ಮುಂದುವರಿಸುತ್ತೇವೆ: ಡಿ ಕೆ ಶಿವಕುಮಾರ್
ಶಿವಮೊಗ್ಗ, ಫೆಬ್ರವರಿ 24: ಯುವಕರು, ರೈತರು, ಮಹಿಳೆಯರಿಗೆ ಒಂದು ಮಾತು ನೀಡುತ್ತೇನೆ. ಬಲಿಷ್ಠ ಕಾಂಗ್ರೆಸ್ ಸರ್ಕಾರ ಈ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಬಿಜೆಪಿ ನಾಯಕರು ಏನೇ ಹೇಳಿದರೂ ಅದು ಸುಳ್ಳು. ಕೇವಲ ಮುಂದಿನ ನಾಲ್ಕು ವರ್ಷ ಮಾತ್ರವಲ್ಲ, ನಂತರದ ಐದು ವರ್ಷ ಸೇರಿ ಒಂಬತ್ತು ವರ್ಷಗಳ ಕಾಲ ನಿಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.
ನಾವು ನುಡಿದಂತೆ ನಡೆದಿದ್ದೇವೆ. ನಮಗೂ ಮುನ್ನ ಅಧಿಕಾರದಲ್ಲಿದ್ದ ಬಿಜೆಪಿ, ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಿತ್ತು. ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ. ಇದೇ ನಮಗೂ ಬಿಜೆಪಿ ಅವರಿಗೂ ಇರುವ ವ್ಯತ್ಯಾಸ. ದೇವಾಲಯ ಯಾರ ಆಸ್ತಿಯೂ ಅಲ್ಲ. ಭಕ್ತ ಹಾಗೂ ಭಗವಂತನ ನಡುವೆ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಬಿಜೆಪಿಯವರು ರಾಮ ಮಂದಿರ ವಿಚಾರವಾಗಿ ಪ್ರಚಾರ ಪಡೆಯುತ್ತಿದ್ದಾರೆ. ಅಯೋಧ್ಯೆಯಲ್ಲಿ ಮೊದಲು ಪೂಜೆಗೆ ಅವಕಾಶ ಮಾಡಿಕೊಟ್ಟಿದ್ದೇ ರಾಜೀವ್ ಗಾಂಧಿ ಅವರು. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕೀಯ ಇರಬಾರದು.

ನಮ್ಮ ಐದು ಗ್ಯಾರಂಟಿ ಯೋಜನೆಗಳನ್ನು ಜಾತಿ ಆಧಾರದ ಮೇಲೆ ಕೊಟ್ಟಿಲ್ಲ, ನೀತಿ ಆಧಾರದ ಮೇಲೆ ಕೊಟ್ಟಿದ್ದೇವೆ. ಇವು ಒಂದು ವರ್ಗದ ಜನರಿಗೆ ಸೇರಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲ ಎಲ್ಲಾ ವರ್ಗದ ಜನರ ಬಗ್ಗೆ ಕಾರ್ಯಕ್ರಮ ರೂಪಿಸಿದೆ.
"ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನ ಸಂಪದಂ. ಜ್ಞಾನಶಕ್ತಿ ಸ್ವರೂಪಸ್ಯ ದೀಪ ಜ್ಯೋತಿ ಪ್ರಕಾಶಿತಂ!" ಅದರಂತೆ ನಿಮ್ಮ ಮನೆ ಬೆಳಗಲಿ ಎಂದು ಬೆಳಗಾವಿಯಲ್ಲಿ ಗೃಹಜ್ಯೋತಿ ಯೋಜನೆ ಘೋಷಣೆ ಮಾಡಿದೆವು. ಇಂದು ಒಂದೂವರೆ ಕೋಟಿ ಕುಟುಂಬ 200 ಯೂನಿಟ್ ವರೆಗೂ ವಿದ್ಯುತ್ ಉಚಿತವಾಗಿ ಬಳಸುತ್ತಿದೆ. ಇದರಿಂದ ಪ್ರತಿ ಕುಟುಂಬಕ್ಕೆ 1500ರೂಪಾಯಿ ಉಳಿಯುತ್ತದೆ. ನಾವು ಅನ್ನಭಾಗ್ಯ ಯೋಜನೆಯಲ್ಲಿ 10 ಕೆ.ಜಿ ಅಕ್ಕಿ ನೀಡಲು ಘೋಷಣೆ ಮಾಡಿದೆವು. ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದಾಗ ಅದರ ಹಣ ನಿಮ್ಮ ಖಾತೆಗೆ ಹಾಕಿದೆವು. ಇನ್ನು ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಕಾರ್ಯಕ್ರಮ ನೀಡಲಾಗಿದೆ. ಇದರಿಂದ ಪ್ರತಿ ಮಹಿಳೆಗೆ ಕನಿಷ್ಠ 2-3 ಸಾವಿರ ಉಳಿಯುತ್ತದೆ.

ಇನ್ನು ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಮಹಿಳೆಯರ ನೆರವಿಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ. ಆ ಮೂಲಕ ನಿಮ್ಮ ಮನೆಯಿಂದ ದರಿದ್ರ ಹಾಗೂ ಸಂಕಟ ನಿವಾರಣೆಗೆ ಮುಂದಾಗಿದ್ದೇವೆ. ಈ ಯೋಜನೆಯಲ್ಲಿ ರಾಜ್ಯದ 1.10 ಕೋಟಿ ಜನ ಪ್ರಯೋಜನ ಪಡೆಯುತ್ತಿದ್ದಾರೆ. ಇನ್ನು ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ಮೂಲಕ ಪದವೀಧರರಿಗೆ 3 ಸಾವಿರ, ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ ಪ್ರತಿ ತಿಂಗಳು ನೀಡಲಾಗುತ್ತಿದೆ.












Click it and Unblock the Notifications