ವಿಧಾನಸೌಧಕ್ಕೆ ಹೆಜ್ಜೆ ಹಾಕಲಿದ್ದಾರೆ ಅತಿಥಿ ಉಪನ್ಯಾಸಕರು
ಬೆಂಗಳೂರು, ಮಾರ್ಚ್,22: ಸರ್ಕಾರದ ಭರವಸೆಗೆ ಮಣಿದು ಪ್ರತಿಭಟನೆ ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತೆ ಪ್ರತಿಭಟನೆ ಹಾದಿ ಹಿಡಿಯುವ ಸೂಚನೆ ನೀಡಿದ್ದಾರೆ. ಅತಿಥಿ ಉಪನ್ಯಾಸಕರ ಸಂಘ ಮಾರ್ಚ್ 24ರಂದು ಕುಟುಂಬ ಸಮೇತ ವಿಧಾನಸೌಧ ಚಲೋ ಚಳವಳಿ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಎನ್.ಶ್ರೀನಿವಾಸಾಚಾರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಬಜೆಟ್ನಲ್ಲಿ ರಾಜ್ಯ ಸರ್ಕಾರ ಬಜೆಟ್ ನಲ್ಲೂ ನಿರ್ಲಕ್ಷ್ಯ ಮಾಡಿದೆ. ಸರ್ಕಾರದ ಮೇಲೆ ಮತ್ತೆ ಒತ್ತಡ ಹೇರಲು ವಿಧಾನಸೌಧ ಚಲೋ ಹೋರಾಟ ಹಮ್ಮಿಕೊಂಡಿದ್ದು, ಅತಿಥಿ ಉಪನ್ಯಾಸಕರ ಕುಟುಂಬದ ಸದಸ್ಯರೂ ಅದರಲ್ಲಿ ಪಾಲ್ಗೊಳ್ಳಲಿದ್ದಾರೆ.[ಶೂ ಪಾಲಿಶ್ ಮಾಡಿದ ಅತಿಥಿ ಉಪನ್ಯಾಸಕರು]
ಫೆಬ್ರವರಿ 26 ರಂದು ಸಭೆ ಕರೆದಿದ್ದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ಬೇಡಿಕೆಗಳ ಕುರಿತು ಮಾರ್ಚ್ 5ರಂದು ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದ್ದರು. ಇದೀಗ ಮಾ. 26ಕ್ಕೆ ಚರ್ಚಿಸುವುದಾಗಿ ಹೇಳುತ್ತಿದ್ದಾರೆ. ಹೀಗೆ ಸಮಯ ವ್ಯರ್ಥ ಮಾಡುವುದರಿಂದ ಸಮಸ್ಯೆ ಬಗೆ ಹರಿಯುವುದಿಲ್ಲ ಎಂದು ಶ್ರೀನಿವಾಸಾಚಾರ್ ಹೇಳಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸಬೇಕು. ವೇತನ ಹೆಚ್ಚಳ, ಹೆರಿಗೆ ರಜೆ ಸೇರಿದಂತೆ ವಿವಿಧ ಸೌಲಭ್ಯ ಒದಗಿಸಿಕೊಡಬೇಕು ಎಂಬ ಬೇಡಿಕೆಗಳನ್ನು ಇಡಲಾಗಿತ್ತು.[ಅತಿಥಿ ಉಪನ್ಯಾಸಕರ ಬೇಡಿಕೆಗಳೇನು?]
ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಸರ್ಕಾರ ಒಮ್ಮೆ ಸೇವೆಯಿಂದ ವಜಾಗೊಳಿಸಿ ಆದೇಶ ನೀಡಿತ್ತು. ನಂತರ ಆದೇಶ ಹಿಂದಕ್ಕೆ ಪಡೆದುಕೊಂಡಿತ್ತು. ತಿಂಗಳುಗಳ ಕಾಲ ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದರು.