ಗುಜರಾತ್ ಫಲಿತಾಂಶ : ಕರ್ನಾಟಕದಲ್ಲಿ ನಾಯಕರ ವಾಗ್ಯುದ್ಧ
Recommended Video

ಬೆಂಗಳೂರು, ಡಿಸೆಂಬರ್ 18 : ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಮೇಲೆ ಈ ಚುನಾವಣೆ ಫಲಿತಾಂಶ ಪ್ರಭಾವ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಗುಜರಾತ್ನ 182, ಹಿಮಾಚಲ ಪ್ರದೇಶದ 68 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸೋಮವಾರ ನಡೆಯುತ್ತಿದೆ. ಕರ್ನಾಟಕ ವಿವಿಧ ಪಕ್ಷಗಳ ನಾಯಕರು ಎರಡೂ ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಾದಗಿರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಗುಜರಾತ್ನಲ್ಲಿ ನರೇಂದ್ರ ಮೋದಿ ಅವರ ಪ್ರಭಾವ ಕಡಿಮೆ ಆಗಿದೆ. ನೋಟು ನಿಷೇಧ, ಜಿಎಸ್ಟಿಗೆ ಜನರು ಬೆಂಬಲ ನೀಡಿಲ್ಲ. ಜನರು ಬೆಂಬಲ ನೀಡಿದ್ದರೆ ಕಾಂಗ್ರೆಸ್ ಇನ್ನೂ ಕಡಿಮೆ ಕ್ಷೇತ್ರದಲ್ಲಿ ಗೆಲ್ಲಬೇಕಿತ್ತು' ಎಂದರು.
'ಗುಜರಾತ್, ಹಿಮಾಚಲ ಪ್ರದೇಶದ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪ್ರಭಾವ ಬೀರುವುದಿಲ್ಲ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ. ನರೇಂದ್ರ ಮೋದಿ, ಅಮಿತ್ ಶಾ ಆಟ ಕರ್ನಾಟಕದಲ್ಲಿ ನಡೆಯುವುದಿಲ್ಲ' ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು...

ಕರ್ನಾಟಕದಲ್ಲಿಯೂ ಬಿಜೆಪಿಗೆ ಗೆಲುವು
ಎರಡೂ ರಾಜ್ಯಗಳ ಚುನಾವಣೆ ಫಲಿತಾಂಶದದ ಬಗ್ಗೆ ಪ್ರತಿಕ್ರಿಯೆ ನೀಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, 'ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಗೆಲುವು ಸಾಧಿಸಲಿದ್ದೇವೆ ಎಂಬ ನಿರೀಕ್ಷೆ ಇತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವನ್ನು ಜನರು ಮೆಚ್ಚಿದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ. ಇದು ಬದಲಾವಣೆಯ ಕಾಲ. ಕರ್ನಾಟಕದಲ್ಲಿಯೂ ಬಿಜೆಪಿ 150 ಸ್ಥಾನಗಳಲ್ಲಿ ಜಯಗಳಿಸಲಿದೆ. ನಾಳೆಯಿಂದ ಬಿಜೆಪಿ ಕಡೆ ಕಾಂಗ್ರೆಸ್, ಜೆಡಿಎಸ್ನ ರಾಜ್ಯ, ತಾಲೂಕು, ಜಿಲ್ಲಾ ಮಟ್ಟದ ನಾಯಕರು ಆಗಮಿಸಲಿದ್ದಾರೆ' ಎಂದು ಹೇಳಿದರು.

ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ
ಬೆಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು, 'ಗುಜರಾತ್ನಲ್ಲಿ ಕಾಂಗ್ರೆಸ್ ಅಧಿಕಾರದತ್ತ ದಾಪುಗಾಲಿಟ್ಟಿದೆ. ರಾಹುಲ್ ಗಾಂಧಿ ಅವರ ವಿರುದ್ಧ ಆರೋಪ ಮಾಡಿದವರಗೆ ಉತ್ತರ ಸಿಕ್ಕಿದೆ. ಚುನಾವಣೆ ಫಲಿತಾಂಶ ರಾಷ್ಟ್ರ ರಾಜಕಾರಣದ ಮೇಲೆ ಪರಿಣಾಮ ಬೀರಲಿದೆ. ಕರ್ನಾಟಕ ಚುನಾವಣೆ ಸ್ಥಳೀಯ ವಿಷಯಗಳ ಮೇಲೆ ನಿರ್ಧರಿತವಾಗಲಿದೆ' ಎಂದರು.

ಕಾಂಗ್ರೆಸ್ ನಾಯಕರಿಗೆ ತಳಮಳ
ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, 'ಹಿಮಾಚಲ ಪ್ರದೇಶ, ಗುಜರಾತ್ ಎರಡೂ ರಾಜ್ಯಗಳಲ್ಲಿ ಬಿಜೆಪಿ ಬಹುಮತ ಸಾಧಿಸಲಿದೆ. ರಾಜ್ಯದ ಮೇಲೂ ಚುನಾವಣೆ ಫಲಿತಾಂಶ ಸಾಕಷ್ಟು ಪರಿಣಾಮ ಬೀರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ ಜನರು ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಫಲಿತಾಂಶ ನೋಡಿ ಕಾಂಗ್ರೆಸ್ ನಾಯಕರಿಗೆ ತಳಮವಳ ಉಂಟಾಗಿದೆ. ಕೆಲವು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಅದನ್ನು ಮುಂದೆ ಬಿಜೆಪಿ ಗೆಲುವು ಸಾಧಿಸಲಿದೆ' ಎಂದರು.

ಸದ್ಯ ಫಲಿತಾಂಶದ ಬಗ್ಗೆ ಹೇಳಲಾಗದು
'ಸದ್ಯದ ಸ್ಥಿತಿ ನೋಡಿ ಫಲಿತಾಂಶದ ಬಗ್ಗೆ ಹೇಳಲಾಗದು. ಆದರೂ ನಾವೂ ಮಹತ್ವದ ಮುನ್ನಡೆ ಸಾಧಿಸಿದ್ದೇವೆ. ಚುನಾಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಹಿನ್ನೆಡೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗಿನ ಸ್ಥಿತಿಗತಿ ನೋಡಿದರೆ ನಾವು ಮುಂದಿದ್ದೇವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ನೇರವಾಗಿ ನಮ್ಮ ರಾಜ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳುವುದಕ್ಕಿಂತ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಲಿದೆ. 22 ವರ್ಷಗಳ ನಂತರ ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅದು ಪ್ರಮುಖ ವಿಚಾರವೇ' ಎಂದು ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ
'ಗುಜರಾತ್ನಲ್ಲಿ ಮೊದಲ ಹಂತದ ಚುನಾವಣೆ ನಡೆದಾಗ ಕಾಂಗ್ರೆಸ್, ಬಿಜೆಪಿ ನಡುವೆ ಸಮಾನ ಪೈಪೋಟಿ ಇತ್ತು. ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಪಾಕಿಸ್ತಾನದ ನಡುವೆ ಲಿಂಕ್ ಇದೆ ಎಂದು ಹೇಳಿಕೆ ಕೊಟ್ಟು ಪಕ್ಷಕ್ಕೆ ಹಿನ್ನಡೆ ಉಂಟು ಮಾಡಿದ್ದಾರೆ. ಈ ಹೇಳಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ಮೋದಿ ಕೀಳು ಮಟ್ಟದ ಪ್ರಚಾರ ಮಾಡಿ ಗೆದ್ದಿದ್ದಾರೆ. ಇದು ನಿಜವಾದ ಗೆಲುವಲ್ಲ' ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಎಳ್ಳಷ್ಟು ಪರಿಣಾಮ ಬೀರುವುದಿಲ್ಲ
'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡಿದ ಆಶಿರ್ವಾದಕ್ಕೆ ನಾವು ಬದ್ಧರಾಗಿದ್ದೇವೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ರಾಜ್ಯದಲ್ಲಿ ನಡೆದಿರುವ ಚುನಾವಣೆ ಫಲಿತಾಂಶ ಕರ್ನಾಟಕ ರಾಜ್ಯದಲ್ಲಿ ಎಳ್ಳಷ್ಟು ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಸರ್ಕಾರದ ಸಾಧನೆಗಳು ನಾಡಿನ ಜನತೆಗೆ ಗೊತ್ತಿರುವ ಸಂಗತಿ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಜನರು ಆಶಿರ್ವದಿಸುತ್ತಾರೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದರು.

ಗುಜರಾತ್ ಚುನಾವಣೆ ಫಲಿತಾಂಶ ಆತಂಕವಿಲ್ಲ
'ಗುಜರಾತ್ ಚುನಾವಣೆಗೂ ರಾಜ್ಯದ ರಾಜಕೀಯಕ್ಕೂ ವ್ಯತ್ಯಾಸವಿದೆ. ನಮ್ಮ ಸರ್ಕಾರದ ಬಗ್ಗೆ ನಕರಾತ್ಮಕ ಅಭಿಪ್ರಾಯಗಳಿಲ್ಲ. ಗುಜರಾತ್ ಫಲಿತಾಂಶ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.












Click it and Unblock the Notifications