ಗುಲಾಬ್ ಚಂಡಮಾರುತ: ಕರ್ನಾಟಕದ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 27: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಗುಲಾಬ್ ಚಂಡಮಾರುತ ಸೃಷ್ಟಿಯಾಗಿದ್ದು, ಅದರ ಪರಿಣಾಮ ಕರ್ನಾಟಕದಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಬಹುತೇಕ ಕಡೆಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, 8 ಜಿಲ್ಲೆಗಳೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 1ರವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ, ಇನ್ನುಳಿದಂತೆ ಉತ್ತರ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿ ತೀರಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಾಯುಭಾರ ಕುಸಿತದಿಂದ ಉಂಟಾಗಿರುವ ಚಂಡಮಾರುತವನ್ನು ಗುಲಾಬ್ ಎಂದು ಹೆಸರಿಸಲಾಗಿದೆ.
ಗುಲಾಬ್ ಚಂಡಮಾರುತದ ವೇಗ ಗಂಟೆಗೆ 70-80 ಕಿ.ಮೀ. ಇರಲಿದೆ. ಚಂಡಮಾರುತ ಹಾದುಹೋಗಲಿರುವ ಕಾಳಿಂಗಪಟ್ಟಣಂ, ವಿಶಾಖಪಟ್ಟಣಂ ಮತ್ತು ಗೋಪಾಲಪುರಗಳಲ್ಲಿ ಈಗಾಗಲೇ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ 'ಗುಲಾಬ್'ಚಂಡಮಾರುತ ಪ್ರಭಾವದಿಂದ ರಾಜ್ಯದ ಹಲವೆಡೆ ಎರಡು ದಿನದಿಂದ ಮೋಡ ಮುಸುಕಿದ ವಾತಾವರಣ ಕಂಡು ಬಂದಿದೆ. ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆ ದಾಖಲಾಗಿದೆ. ಇದರ ಹೊರತು ಎಲ್ಲಿಯೂ ಅಷ್ಟಾಗಿ ಮಳೆ ಬಿದ್ದಿಲ್ಲ.

ವಾಯುಭಾರ ಕುಸಿತ
ಗೋಪಾಲಪುರದಿಂದ ಪೂರ್ವ-ಆಗ್ನೇಯ ದಿಕ್ಕಿನಲ್ಲಿ 470 ಕಿ.ಮೀ. ದೂರ ಮತ್ತು ಕಾಳಿಂಗಪಟ್ಟಣಂನ ಪೂರ್ವದಲ್ಲಿ 540 ಕಿ.ಮೀ. ದೂರದಲ್ಲಿ ತೀವ್ರವಾದ ವಾಯುಭಾರ ಕುಸಿತ ಆಗಿರುವ ಹಿನ್ನೆಲೆ ಗುಲಾಬ್ ಚಂಡಮಾರುತ ಏಳಲಿದೆ.
ಈ ನಡುವೆ ಚಂಡಮಾರುತದ ಪ್ರಭಾವ ಹೆಚ್ಚಾಗಿ ಉಂಟಾಗಲಿರುವ ಪರಿಸ್ಥಿತಿ ಎದುರಿಸಲು ಒಡಿಶಾ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳದಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.
ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ
ಗಾಳಿ-ಮಳೆ ಜಾಸ್ತಿ ಇರಲಿದ್ದು, ಸೆಪ್ಟೆಂಬರ್ 25ರ ನಂತರ ಮುಂದಿನ ಸೂಚನೆವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯುವಂತಿಲ್ಲ ಎಂದು ಹವಾಮಾನ ಇಲಾಖೆ ಮೀನುಗಾರರಿಗೆ ಎಚ್ಚರಿಕೆ ನೀಡಿದೆ.
ಇಂದು ಆಂಧ್ರಪ್ರದೇಶದ ಕರಾವಳಿ ತೀರದ ಸುತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ. ಹಾಗೇ, ಮುಂದಿನ 2 ದಿನಗಳ ಕಾಲ ಒಡಿಶಾ ಮತ್ತು ಛತ್ತೀಸ್ಗಢ್ನಲ್ಲೂ ಮಳೆ-ಪ್ರವಾಹದ ಎಚ್ಚರಿಕೆ ನೀಡಲಾಗಿದೆ.

ಕರಾವಳಿಯಲ್ಲಿ ಭಾರಿ ಮಳೆ
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆಪ್ಟೆಂಬರ್ 28ರವರೆಗೂ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಇಂದಿನಿಂದ 2 ದಿನ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Recommended Video

ಬೆಂಗಳೂರು ಹವಾಮಾನ ವರದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್ಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನು ಕೆಜಿಎಫ್, ಕಲಬುರಗಿ, ಬೀದರ್, ಅಫ್ಜಲ್ಪುರ, ಕೋಲಾರ, ಕೆಂಭಾವಿ, ಬೆಂಗಳೂರು ಎಚ್ಎಎಲ್, ಮದ್ದೂರು, ಭಾಗಮಂಡಲ, ಉತ್ತರಹಳ್ಳಿ, ವಿಜಯಪುರ, ಭಟ್ಕಳ, ಮಾಗಡಿ, ಗುಬ್ಬಿ, ಹೊಸಕೋಟೆಯಲ್ಲಿ ಮಳೆಯಾಗಿದೆ.












Click it and Unblock the Notifications