ಕರ್ನಾಟಕ ಕಾಂಗ್ರೆಸ್ ಬಂಡಾಯ ಶಮನಕ್ಕೆ ಕೇಂದ್ರದಿಂದ ಆಜಾದ್, ವೇಣುಗೋಪಾಲ್ ಆಗಮನ
ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರದ ಭಿನ್ನಾಭಿಪ್ರಾಯವನ್ನು ದೂರ ಮಾಡಲು ಕಾಂಗ್ರೆಸ್ ನ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಬರಲಿದ್ದಾರೆ.
ಕಾಂಗ್ರೆಸ್ ನ ಶಾಸಕರಾದ ರಮೇಶ್ ಜಾರಕಿಹೊಳಿ (ಗೋಕಾಕ್ ಕ್ಷೇತ್ರ) ಹಾಗೂ ಡಾ.ಸುಧಾಕರ್ (ಚಿಕ್ಕಬಳ್ಳಾಪುರ ಕ್ಷೇತ್ರ) ಭಾನುವಾರದಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಎಸ್ಸೆಂ ಕೃಷ್ಣರನ್ನು ಬೆಂಗಳೂರಿನ ನಿವಾಸದಲ್ಲಿ ಭೇಟಿ ಆಗಿದ್ದರು. ಮೈತ್ರಿ ಸರಕಾರ ರಚನೆ ಆದ ದಿನದಿಂದಲೂ ಇದು ಆಗ ಬೀಳುತ್ತದೆ, ಈಗ ಬೀಳುತ್ತದೆ ಎಂಬ ಚರ್ಚೆಯಂತೂ ನಡೆಯುತ್ತಲೇ ಇದೆ.
ಒಟ್ಟಾಗಿ ಲೋಕಸಭೆ ಚುನಾವಣೆ ಎದುರಿಸಿ, ಎರಡೂ ಪಕ್ಷಗಳು ತಲಾ ಒಂದು ಸ್ಥಾನಗಳಲ್ಲಿ ಜಯಿಸಿವೆ. ಆ ನಂತರ ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್.ರಾಜಣ್ಣ ಮಾತನಾಡಿ, ಜೂನ್ ಹತ್ತನೇ ತಾರೀಕಿನ ಒಳಗೆ ಮೈತ್ರಿ ಸರಕಾರ ಬಿದ್ದು ಹೋಗುತ್ತದೆ ಎಂದು ಹೇಳಿದ್ದಾರೆ. ಒಟ್ಟು ಇಪ್ಪತ್ತೆಂಟು ಕ್ಷೇತ್ರಗಳ ಪೈಕಿ ಕರ್ನಾಟಕದಲ್ಲಿ ಬಿಜೆಪಿ ಇಪ್ಪತ್ತೈದು, ಬಿಜೆಪಿ ಬೆಂಬಲಿತ ಪಕ್ಷೇತರರು ಒಂದು ಸ್ಥಾನದಲ್ಲಿ ಗೆದ್ದಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಇರುವ ಅಸಮಾಧಾನ ಶಮನಕ್ಕಾಗಿಯೇ ಕೇಂದ್ರ ನಾಯಕರಾದ ಗುಲಾಂ ನಬಿ ಆಜಾದ್ ಹಾಗೂ ವೇಣುಗೋಪಾಲ್ ಬರುತ್ತಿದ್ದಾರೆ. ಬುಧವಾರದಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ರಾಜ್ಯದಲ್ಲಿನ ಕಾಂಗ್ರೆಸ್ ಹಿರಿಯ ನಾಯಕರ ಜತೆಗೆ ಈ ಇಬ್ಬರೂ ನಾಯಕರು ಮಾತುಕತೆ ನಡೆಸಲಿದ್ದಾರೆ.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಬಿಜೆಪಿ 105, ಕಾಂಗ್ರೆಸ್ 79, ಜೆಡಿಎಸ್ 37ರ ಜತೆಗೆ ಸಮಾಜವಾದಿ ಪಕ್ಷ 1 ಮತ್ತು ಪಕ್ಷೇತರರು 2 ಸ್ಥಾನ ಪಡೆದಿದ್ದಾರೆ.












Click it and Unblock the Notifications