ನೂತನ ಸಚಿವರಾಗಿ ಎಚ್ ನಾಗೇಶ್, ಆರ್ ಶಂಕರ್ ಪ್ರಮಾಣ ವಚನ
ಬೆಂಗಳೂರು, ಜೂನ್ 14: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು ನೂತನ ಸಚಿವರಾಗಿ ಪಕ್ಷೇತರ ಶಾಸಕ ಎಚ್ ನಾಗೇಶ್ ಹಾಗೂ ಕಾಂಗ್ರೆಸ್ನ ಆರ್ ಶಂಕರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಿಆರ್ ವಾಲಾ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಇದ್ದರು. ಸಂಪುಟ ದರ್ಜೆ ಸಚಿವರಾಗಿ ಆರ್ ಶಂಕರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಆರ್ ಶಂಕರ್ ಅವರು ಕೆಪಿಜೆಪಿ ಪಕ್ಷದಲ್ಲಿದ್ದು ಇದೀಗ ಕಾಂಗ್ರೆಸ್ ಜೊತೆ ವಿಲೀನ ಮಾಡಿಕೊಂಡಿದ್ದಾರೆ.
ಸಂಪುಟ ವಿಸ್ತರಣೆ : ಎರಡು ಖಾತೆಗಳಿಗೆ ಕಾಂಗ್ರೆಸ್ ಬೇಡಿಕೆ?
ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೊದಲು ಶಂಕರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು.
ಇದೇ ವೇಳೆ ಕೆಪಿಜೆಪಿಯನ್ನು ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸುವ ಪತ್ರವನ್ನು ನೀಡಿದ್ದರು. ಶಂಕರ್ ರಾಣೆ ಬೆನ್ನೂರು ಹಾಗೂ ಎಚ್ ನಾಗೇಶ್ ಮುಳಬಾಗಿಲು ಕ್ಷೇತ್ರವನ್ನು ಪ್ರತಿನಿಧಿಸಿ ಶಾಸಕರಾಗಿದ್ದಾರೆ.
ಮೂರನೇ ಸ್ಥಾನ ಭರ್ತಿ ಮಾಡುವ ಬಗ್ಗೆ ಜೆಡಿಎಸ್ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲದಿರುವುದರಿಂದ ಒಂದು ಸ್ಥಾನ ಖಾಲಿ ಉಳಿದಿದೆ.
ಬಂಡಾಯ, ಅಸಮಾಧಾನ, ಅತೃಪ್ತಿಗಳ ನಡುವೆ ಇಬ್ಬರು ಸಂಪುಟದೊಳಗೆ ಎಂಟ್ರಿ ಕೊಟ್ಟಿದ್ದಾರೆ.13 ತಿಂಗಳ ಮೈತ್ರಿ ಸರ್ಕಾರದಲ್ಲಿ ಎರಡನೇ ಸಂಪುಟ ವಿಸ್ತರಣೆ ಇದಾಗಿದೆ.