ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ?
ಬೆಂಗಳೂರು, ಡಿಸೆಂಬರ್ 27 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಅನಾರೋಗ್ಯದ ನೆಪವೊಡ್ಡಿ ರಾಜ್ಯಾಧ್ಯಕ್ಷ ಸ್ಥಾನವನ್ನು ಅವರು ತೊರೆಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.
ಜೆಡಿಎಸ್ ಪಕ್ಷದ ವ್ಯವಹಾರವನ್ನೆಲ್ಲ ವರಿಷ್ಠರು ನೋಡಿಕೊಳ್ಳುತ್ತಾರೆ. ಆದ್ದರಿಂದ ತನಗೆ ಮಾಡಲು ಕೆಲವಿಲ್ಲ ಎಂದು ಆಪ್ತರ ಬಳಿ ವಿಶ್ವನಾಥ್ ಹೇಳಿಕೊಂಡಿದ್ದಾರೆ. ಪಕ್ಷದಲ್ಲಿ ದೇವೇಗೌಡರ ಕುಟುಂಬ ಸದಸ್ಯರ ಮಾತು ಅಂತಿಮವಾಗಿದೆ. ಆದ್ದರಿಂದ, ವಿಶ್ವನಾಥ್ ರಾಜೀನಾಮೆಗೆ ಮುಂದಾಗಿದ್ದಾರೆ.
ಹುಣಸೂರು ಕ್ಷೇತ್ರದ ಶಾಸಕರಾದ ಎಚ್.ವಿಶ್ವನಾಥ್ ಅವರು ಪಕ್ಷದ ಬಗ್ಗೆ ಯಾವುದೇ ಆರೋಪಗಳನ್ನು ಮಾಡದೆ, ಅನಾರೋಗ್ಯದ ಕಾರಣವನ್ನು ಮುಂದಿಟ್ಟುಕೊಂಡು ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, 'ವಿಶ್ವನಾಥ್ ಅವರ ಆರೋಗ್ಯ ಸರಿ ಇಲ್ಲ. ಹೀಗಾಗಿ ಅಧ್ಯಕ್ಷ ಸ್ಥಾನದಿಂದ ದೂರ ಸರಿಯುವ ಮಾತನಾಡಿರಬಹುದು. ಅವರಿಗೆ ಬೇಕಿದ್ದರೆ ಹೆಚ್ಚಿನ ಅಧಿಕಾರ ನಿಡೋಣ' ಎಂದು ಹೇಳಿದ್ದಾರೆ.
ಎಚ್.ವಿಶ್ವನಾಥ್ ಅವರು ವಿಧಾನಸಭೆ ಚುನಾವಣೆಯ ಸಮಯದಲ್ಲಿ ಜೆಡಿಎಸ್ ಸೇರಿದ್ದರು. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ, ದೇವೇಗೌಡರು ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರು.
ಸ್ವಾಭಿಮಾನಿ ಮತ್ತು ಅಪಾರ ರಾಜಕೀಯ ಅನುಭವ ಹೊಂದಿರುವ ಎಚ್.ವಿಶ್ವನಾಥ್ ಅವರು ಜೆಡಿಎಸ್ ಪಕ್ಷದ ಬೆಳವಣಿಗೆಗಳಿಂದ ಬೇಸರಗೊಂಡಿದ್ದಾರೆ. ಆದ್ದರಿಂದ, ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಅವರ ಆಪ್ತರು ಹೇಳುತ್ತಾರೆ.
ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದರು. ಆದರೆ, ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಅವರು ಮುಖ್ಯಮಂತ್ರಿಯಾದರು. ಆಗಸ್ಟ್ 6ರಂದು ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಚ್.ವಿಶ್ವನಾಥ್ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.












Click it and Unblock the Notifications