ಹಾಲಾಡಿ ನಮ್ಮ ಅಭ್ಯರ್ಥಿ : ವಿರೋಧಿಗಳಿಗೆ ಬಿಎಸ್ವೈ ತಿರುಗೇಟು
ಉತ್ತರ ಕನ್ನಡ, ನವೆಂಬರ್ 14 : 'ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರನ್ನು ಮುಂದಿನ ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮುರುಡೇಶ್ವರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, 'ನಮ್ಮದೇ ತಪ್ಪಿನಿಂದಾಗಿ ಹಾಲಾಡಿ ಅವರು ನಮ್ಮಿಂದ ದೂರವಾಗಿದ್ದರು. ಆಗಲೂ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಿಂತು ಭಾರೀ ಅಂತರದಿಂದ ಗೆದ್ದು ಬಂದಿದ್ದಾರೆ' ಎಂದರು.

'ಶ್ರೀನಿವಾಸ್ ಶೆಟ್ಟಿ ಅಂತಹ ವ್ಯಕ್ತಿ ನಮ್ಮ ಪಕ್ಷಕ್ಕೆ ಬೇಕಾಗಿದ್ದಾರೆ. ಈ ಸಂದರ್ಭದಲ್ಲಿ ಯಾರೋ ಕೆಲವರು ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಅದನ್ನು ಸಹಿಸಲಾಗುವುದಿಲ್ಲ' ಎಂದು ಯಡಿಯೂರಪ್ಪ ತಿಳಿಸಿದರು.
ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಕೆಲವು ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದರು. ಆದ್ದರಿಂದ, ಕುಂದಾಪುರದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಗೊಂದಲ ಉಂಟಾಗಿತ್ತು.
2013ರ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀನಿವಾಸ್ ಶೆಟ್ಟಿ ಸ್ಪರ್ಧಿಸಿದ್ದರು. ಕಾಂಗ್ರೆಸ್ನ ಮಲ್ಯಾಡಿ ಶಿವರಾಮ ಶೆಟ್ಟಿ, ಬಿಜೆಪಿಯ ಕಿಶೋರ್ ಕುಮಾರ್ ಸ್ಪರ್ಧೆ ಮಾಡಿದರೂ ಹಾಲಾಡಿ ಅವರಿಗೆ ಪ್ರಬಲ ಪೈಪೋಟಿ ನೀಡಲಾಗದೇ ಸೋಲು ಅನುಭವಿಸಿದ್ದರು.












Click it and Unblock the Notifications