ಹಾಸನ ಜಿಲ್ಲೆಗೊಂದು ಸಚಿವ ಸ್ಥಾನ ನೀಡುವಂತೆ ಮನವಿ
ಬೆಂಗಳೂರು, ಸೆಪ್ಟೆಂಬರ್, 15 : ಸೆಪ್ಟೆಂಬರ್ ಅಂತ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳುತ್ತಿದ್ದಂತೆಯೇ ಸಚಿವ ಸ್ಥಾನಕ್ಕೆ ಪೈಪೋಟಿ ಆರಂಭವಾಗಿದೆ. ಎ.ಮಂಜು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಾಸನ ಜಿಲ್ಲೆಯ ಮುಖಂಡರ ನಿಯೋಗ ಬೆಂಗಳೂರಿಗೆ ಬಂದಿದೆ.
ಅರಕಲಗೋಡು ಶಾಸಕ ಎ.ಮಂಜು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ನಾಯಕರ ನಿಯೋಗ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಮನವಿ ಮಾಡಿದೆ. [ಸೆಪ್ಟೆಂಬರ್ ಅಂತ್ಯದಲ್ಲಿ ಸಂಪುಟ ವಿಸ್ತರಣೆ]

ಮಾಜಿ ಶಾಸಕರಾದ ಪುಟ್ಟೇಗೌಡ, ಎಸ್.ಎಂ.ಆನಂದ್, ವಿಶ್ವನಾಥ್, ಮಾಜಿ ಸಂಸದ ಜವರೇಗೌಡ ಮುಂತಾದ ನಾಯಕರ ನಿಯೋಗ ಸಚಿವ ಸಂಪುಟ ವಿಸ್ತರಣೆ ಮಾಡುವಾಗ, ಹಾಸನ ಜಿಲ್ಲೆಗೆ ಪ್ರಾತಿನಿಧ್ಯ ನೀಡಬೇಕು. ಹಲವು ವರ್ಷಗಳಿಂದ ಜಿಲ್ಲೆಗೆ ಸಚಿವ ಸ್ಥಾನ ನೀಡಿಲ್ಲ ಒತ್ತಾಯಿಸಿದ್ದಾರೆ. [ಅಸಮರ್ಥ ಸಚಿವರನ್ನು ಕೈಬಿಡಿ, ಹೊಸಬರಿಗೆ ಅವಕಾಶ ಕೊಡಿ]
ವರಿಷ್ಠರು ನಿರ್ಧರಿಸುತ್ತಾರೆ : ಹಾಸನ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬುದನ್ನು ಒಪ್ಪಿಕೊಂಡ ಪರಮೇಶ್ವರ ಅವರು, ಸಂಪುಟ ವಿಸ್ತರಣೆ ಸಮಯದಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ನಿಯೋಗ ಎ.ಮಂಜು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮನವಿ ಮಾಡಿತು. 'ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡಬೇಕಿದೆ. ಜಿಲ್ಲೆಯಲ್ಲಿ ರಾಜಕೀಯ ಶಕ್ತಿ ಹೆಚ್ಚಾಗಬೇಕಾದರೆ ಜಿಲ್ಲೆಗೆ ಸಚಿವ ಸ್ಥಾನ ಬೇಕು' ಎಂದು ಮಾಜಿ ಶಾಸಕ ಪುಟ್ಟೇಗೌಡ ಹೇಳಿದರು. [ಚಿತ್ರ : ಶಾಸಕ ಎ.ಮಂಜು]












Click it and Unblock the Notifications