ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಶಾಕ್; ಶ್ರೇಯಸ್ಗೆ ಪ್ರೀತಂ ಗೌಡ ಆಪ್ತರ ಜೈಕಾರ! ಐಸಿಯುನಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ!
ಹಾಸನ, ಏಪ್ರಿಲ್ 09: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಆರಂಭದಿಂದಲೂ ಕೆಲ ಬಿಜೆಪಿ ನಾಯಕರು ಮೈತ್ರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಪ್ರೀತಂಗೌಡ ಅವರು ಜೆಡಿಎಸ್ ಜೊತೆಗಿನ ಮೈತ್ರಿ ಕುರಿತು ಬಹಿರಂಗವಾಗಿಯೇ ಅಸಮಾಧಾನವನ್ನ ಹೊರಹಾಕಿದ್ದು, ಇದೀಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಳಪತಿಗಳಿಗೆ ಶಾಕ್ ಕೊಟ್ಟಂತಾಗಿದೆ.
ಹೌದು, ಆರಂಭದಿಂದಲೂ ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧವಾಗಿ ತೀವ್ರ ಅಸಮಾಧಾನ ಹೊರಹಾಕಿರುವ ಮಾಜಿ ಶಾಸಕ ಪ್ರೀತಂ ಗೌಡ ಅವರು ಹಾಸನ ಜೆಡಿಎಸ್ ನಾಯಕರ ಜೊತೆಗೆ ಅಂತರವನ್ನ ಕಾಯ್ದುಕೊಂಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಪ್ರಚಾರ ಮಾಡಲು ಬಿಜೆಪಿ ಕಾರ್ಯಕರ್ತರು ನಿರ್ಧರಿಸಿದ ಬೆನ್ನಲ್ಲೇ ಹಾಸನದಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಆಘಾತ ಎದುರಾಗಿದೆ. ಬಿಜೆಪಿಯ ಮಾಜಿ ಶಾಸಕ ಪ್ರೀತಂ ಜೆ ಗೌಡ ಅವರ ಆಪ್ತರಾಗಿದ್ದ ಉದ್ದೂರು ಪುರುಷೋತ್ತಮ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
2018 ರ ವಿಧಾನಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಪ್ರೀತಂ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪುರುಷೋತ್ತಮ್ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಶ್ರೇಯಸ್ ಪಟೇಲ್ ಅವರನ್ನು ಭೇಟಿಯಾಗಿದ್ದಾರೆ. ಪುರುಷೋತ್ತಮ್ ಅವರು ಶ್ರೇಯಸ್ ಅವರನ್ನು ಬೆಂಬಲಿಸುವುದಾಗಿ ಮತ್ತು ಕಾಂಗ್ರೆಸ್ ಪರ ಪ್ರಚಾರ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಬಿಜೆಪಿ ಕರ್ನಾಟಕ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರು ಇತ್ತೀಚೆಗೆ ಪ್ರೀತಂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡ ನಂತರ ಪ್ರೀತಂ ಮತ್ತು ಪ್ರಜ್ವಲ್ ನಡುವಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಲು ಮುಂದಾಗುವುದಾಗಿ ಜೆಡಿಎಸ್ ನಾಯಕರಿಗೆ ಭರವಸೆ ನೀಡಿದ ಬೆನ್ನಲ್ಲೇ ಪುರುಷೋತ್ತಮ್ ಈ ನಿರ್ಧಾರ ಕೈಗೊಂಡಿದ್ದಾರೆ. ಆದರೆ, ಪ್ರೀತಂ ಗೌಡ ಹಾಗೂ ಪ್ರಜ್ವಲ್ ರೇವಣ್ಣ ನಡುವಿನ ಭಿನ್ನಾಭಿಪ್ರಾಯ ಕೊನೆಗೊಳ್ಳುವ ಲಕ್ಷಣ ಕಾಣುತ್ತಿಲ್ಲ ಎನ್ನಲಾಗಿದ್ದು, ಬಿಜೆಪಿಯ ಹಿರಿಯ ನಾಯಕರು ಸಮಸ್ಯೆ ಬಗೆಹರಿಸಲು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.
ಮೈಸೂರಿನಲ್ಲಿ ಎನ್ಡಿಎ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಒಡೆಯರ್ ಪರ ಪ್ರಚಾರ ನಡೆಸುತ್ತಿರುವ ಪ್ರಜ್ವಲ್ ಅವರನ್ನು ಪ್ರೀತಂ ಬಳಿ ಕರೆದೊಯ್ದು ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಇತ್ತೀಚೆಗೆ ಹಾಸನಕ್ಕೆ ಆಗಮಿಸಿದ್ದ ಅಗರ್ವಾಲ್ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಭರವಸೆ ನೀಡಿದರು. ಪ್ರೀತಂ ಅವರು ಹಾಸನಕ್ಕೆ ಬಂದಾಗಲೆಲ್ಲಾ ಪ್ರಜ್ವಲ್ ಪರ ಪ್ರಚಾರ ಮಾಡುತ್ತಾರೆ ಮತ್ತು ಪ್ರಸ್ತುತ ಮೈಸೂರಿನಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿದರು.












Click it and Unblock the Notifications