ಮೈಸೂರು, ಶಿವಮೊಗ್ಗ, ತುಮಕೂರು ಪಾಲಿಕೆ ಚುನಾವಣೆಗೆ ಒಪ್ಪಿಗೆ
ಬೆಂಗಳೂರು, ಆಗಸ್ಟ್ 09 : ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಮಹಾನಗರ ಪಾಲಿಕೆಗಳ ಚುನಾವಣೆ ನಡೆಸಲು ಕರ್ನಾಟಕ ಹೈಕೋರ್ಟ್ ಒಪ್ಪಿಗೆ ನೀಡಿದೆ. ಮೀಸಲಾತಿ, ವಾರ್ಡ್ ಮರು ವಿಂಗಡನೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿದ್ದ ಅರ್ಜಿಗಳನ್ನು ವಜಾಗೊಳಿಸಿದೆ.
ಗುರುವಾರ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಏಕಸದಸ್ಯ ಪೀಠ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿತು. ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಮಹಾನಗರ ಪಾಲಿಕೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲು ಚುನಾವಣಾ ಆಯೋಗಕ್ಕೆ ಅವಕಾಶ ನೀಡಿತು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಅಂಕಿ ಸಂಖ್ಯೆಗಳ ಲೆಕ್ಕ
ತುಮಕೂರಿನ ಕೆ.ಸಂದೀಪ್, ಮೈಸೂರಿನ ಎಂ.ಅನ್ವರ್ ಮುಂತಾದವರು ಪ್ರತ್ಯೇಕವಾಗಿ ರಿಟ್ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ಗೆ ದಾಖಲಿಸಿದ್ದರು. ವಾರ್ಡ್ ವಿಂಗಡನೆ ಮತ್ತು ಮೀಸಲಾತಿ ನಿಗದಿ ಪ್ರಶ್ನಿಸಿದ್ದ ರಿಟ್ ಅರ್ಜಿಗಳನ್ನು ವಜಾ ಮಾಡಿತು.
ಚುನಾವಣಾ ಆಯೋಗ ಮೊದಲ ಹಂತದಲ್ಲಿ 29 ನಗರ ಸಭೆ, 53 ಪುರಸಭೆ, 23 ಪಟ್ಟಣ ಪಂಚಾಯಿತಿಯ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1 ರಂದು ಫಲಿತಾಂಶ ಪ್ರಕಟವಾಗಲಿದೆ.
105 ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ಘೋಷಣೆ
ಆಗಸ್ಟ್ 2ರಂದು ಚುನಾವಣಾ ಆಯೋಗ ರಾಜ್ಯದ 105 ಸ್ಥಳೀಯ ಸಂಸ್ಥೆಗಳ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿತ್ತು. ಆದರೆ, ಹೈಕೋರ್ಟ್ನಲ್ಲಿ ವಿಚಾರಣೆ ಬಾಕಿ ಇದ್ದ ಕಾರಣ ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಪಾಲಿಕೆಗಳ ಚುನಾವಣೆ ದಿನಾಂಕ ಘೋಷಣೆ ಮಾಡಿರಲಿಲ್ಲ.