ಹುಬ್ಬಳ್ಳಿ-ಆಂಕೋಲಾ ರೈಲು ಮಾರ್ಗ: 10 ವಾರಗಳಲ್ಲಿ ನಿರ್ಧರಿಸಲು ಕೇಂದ್ರಕ್ಕೆ ಆದೇಶ
ಬೆಂಗಳೂರು ಜೂ.7. ಮಹತ್ವದ ಹುಬ್ಬಳ್ಳಿ-ಅಂಕೋಲಾ ನಡುವೆ ಬ್ರಾಡ್ಗೇಜ್ ರೈಲು ಮಾರ್ಗ ನಿರ್ಮಾಣ ಯೋಜನೆ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕುರಿತು ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು.
ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಯೋಜನೆಯಿಂದ ಅರಣ್ಯ ಮತ್ತು ವನ್ಯಜೀವಿಗಳ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧರಿಸಿ, 10 ವಾರಗಳ ಒಳಗೆ ನಿರ್ಧಾರ ಕೈಗೊಂಡು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.
ಹುಬ್ಬಳ್ಳಿ-ಅಂಕೋಲಾ ನಡುವೆ 164.44 ಕಿ.ಮಿ ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಕರ್ನಾಟಕ ವನ್ಯಜೀವಿ ಮಂಡಳಿ 2020ರ ಮಾ.20ರಂದು ಅನುಮತಿ ನೀಡಿರುವುದನ್ನು ಆಕ್ಷೇಪಿಸಿ ಪ್ರಾಜೆಕ್ಟ್ ವೃಕ್ಷ ಫೌಂಡೇಷನ್ ಮತ್ತು ಗಿರಿಧರ್ ಕುಲಕರ್ಣಿ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದವು. ಆಗ ಕೇಂದ್ರ ಸರ್ಕಾರಿ ವಕೀಲರು, ತಜ್ಞರ ಸಮಿತಿ ರಚಿಸಲಾಗಿದ್ದು, ಅದು ವರದಿ ನೀಡಲು ಇನ್ನೂ ಸ್ವಲ್ಪ ಸಮಯಾವಕಾಶ ನೀಡಬೇಕೆಂದರು.
ಕೇಂದ್ರಕ್ಕೆ ತರಾಟೆ:
ಅದಕ್ಕೆ ನ್ಯಾಯಪೀಠ, ಇನ್ನು ಎಷ್ಟು ಸಮಯಬೇಕು, 2021ರ ಡಿಸೆಂಬರ್ ನಲ್ಲಿಯೇ ತಜ್ಞರ ಸಮಿತಿಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿತ್ತು. ಆದರೂ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿತು.
ಕೊನೆಗೆ ನ್ಯಾಯಪೀಠ, ಆದಷ್ಟು ತಜ್ಞರ ಸಮಿತಿ ವರದಿಯನ್ನು ಸಲ್ಲಿಸಬೇಕು, ಅದನ್ನು ಆಧರಿಸಿ ರಾಷ್ಟ್ರೀಯ ವನ್ಯಜೀವಿ ಮಂಡಳಿ ಹತ್ತು ವಾರಗಳಲ್ಲಿ ತನ್ನ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಆದೇಶಿಸಿ ವಿಚಾರಣೆಯನ್ನು ಮುಂದೂಡಿತು.
ಕಳೆದ ವಿಚಾರಣೆ ವೇಳೇ ನ್ಯಾಯಪೀಠ, ಹುಬ್ಬಳ್ಳಿ - ಅಂಕೋಲಾ ನಡುವಿನ ಬ್ರಾಡ್ ಗೇಜ್ ರೈಲು ಮಾರ್ಗ ಯೋಜನೆಯಿಂದ ವನ್ಯಜೀವಿಗಳ ಮೇಲಾಗಲಿರುವ ಪರಿಣಾಮಗಳ ಬಗ್ಗೆ ಸಮೀಕ್ಷೆ ಪೂರ್ಣಗೊಳಿಸುವ ಮುನ್ನ ಅಗತ್ಯ ಅನುಮೋದನೆ ಗಳನ್ನು ಪಡೆದುಕೊಳ್ಳುವಂತೆ ಹೈಕೋರ್ಟ್ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ನಿರ್ದೇಶನ ನೀಡಿತು.
ಜೊತೆಗೆ 2021ರ ಡಿ.1ರಂದು ನೀಡಿದ್ದ ಆದೇಶದಂತೆ ಪರಿಸರ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಿ ಆದಷ್ಟು ಶೀಘ್ರ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್ ಕೇಂದ್ರಕ್ಕೆ ತಾಕೀತು ಮಾಡಿ ವಿಚಾರಣೆ ಮುಂದೂಡಿತು.
ಕೋರ್ಟ್ ಹಿಂದಿನ ಆದೇಶವೇನು?
ನ್ಯಾಯಪೀಠ, 2021ರ ಡಿ.1ರಂದು "ರೈಲ್ವೆ ಯೋಜನೆ ಪಶ್ಚಿಮ ಘಟ್ಟಗಳಲ್ಲಿನ ಅಪರೂಪದ ವನ್ಯಜೀವಿಗಳಿಗೆ ತೊಂದರೆ ಆಗಲಿದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ರಾಷ್ಟ್ರೀಯ ವನ್ಯಜೀವಿ ಮಂಡಳಿ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಮೌಲ್ಯಮಾಪನ ನಡೆಸಬೇಕು, ಅದಕ್ಕೆ ಅದು ಈಗಾಗಲೇ ಲಭ್ಯವಿರುವ ಸಮೀಕ್ಷೆಗಳು ಹಾಗೂ ವರದಿಗಳನ್ನು ಪರಿಶೀಲಿಸಬೇಕು. ಅಗತ್ಯಬಿದ್ದರೆ ತಜ್ಞರ ನೆರವನ್ನು ಪಡೆದುಕೊಳ್ಳಬಹುದು''ಎಂದು ಆದೇಶಿಸಿತ್ತು.
ಅಭಿವೃದ್ಧಿ ಕಾರ್ಯಗಳು ನಡೆಯಬೇಕು, ಆದರೆ ಅದರಿಂದ ವನ್ಯಜೀವಿ ಸಂಪತ್ತಿಗೆ ತೊಂದರೆ ಆಗಬಾರದು. ಹಾಗಾಗಿ ಮಂಡಳಿ ಆ ಬಗ್ಗೆ ಸಮೀಕ್ಷೆ ನಡೆಸಿ, ಮುಂದಿನ ವಿಚಾರಣೆಯೊಳಗೆ ವರದಿಯನ್ನು ಸಲ್ಲಿಸಬೇಕು ಎಂದು ನ್ಯಾಯಪೀಠ ಆದೇಶ ನೀಡಿತು.
ಅರ್ಜಿದಾರರ ಪರ ವಕೀಲರು, 40 ವರ್ಷಗಳಿಂದ ಬಾಕಿ ಇರುವ ರೈಲ್ವೆ ಯೋಜನೆ ಇದಾಗಿದೆ, ಹಲವು ವರ್ಷಗಳ ಹಿಂದೆ ನಡೆಸಿ ಸಮೀಕ್ಷೆ ಆಧರಿಸಿ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಯೋಜನೆಗೆ ಒಪ್ಪಿಗೆ ನೀಡಿ ರಾಷ್ಟ್ರೀಯ ವನ್ಯಜೀವಿ ಮಂಡಳಿಗೆ ಶಿಫಾರಸು ಮಾಡಿದೆ. ಮೂಲತಃ ಯೋಜನೆಯಿಂದ ಅಪರೂಪದ ವನ್ಯಜೀವಿಗಳಿಗೆ ಧಕ್ಕೆ ಆಗಲಿದೆ ಎಂದರು.
2020ರ ಮಾ.20ರಂದು ರಾಜ್ಯ ವನ್ಯಜೀವಿ ಮಂಡಳಿ ಕೈಗೊಂಡಿರುವ ನಿರ್ಣಯ ಆಧರಿಸಿ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ ಸಂಬಂಧ ಮುಂದಿನ ಕ್ರಮ ಜರುಗಿಸಬಾರದು ಎಂದು ಸರಕಾರಕ್ಕೆ ಸೂಚಿಸಿ ಜೂ.18ರಂದು ಹೈಕೋರ್ಟ್ ಮಧ್ಯಂತರ ಆದೇಶ ಮಾಡಿತ್ತು. ನಂತರ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸುತ್ತಾ ಬಂದಿದೆ.