ಎಚ್.ಸಿ.ಬಾಲಕೃಷ್ಣ, ಚೆಲುವರಾಯಸ್ವಾಮಿ ಬಿಜೆಪಿಗೆ?
ಬೆಂಗಳೂರು, ಜುಲೈ 27 : ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಲು ತಂತ್ರ ರೂಪಿಸಿರುವ ಬಿಜೆಪಿ ಮೂವರು ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೆಳೆಯಲು ಮುಂದಾಗಿದೆ. ಇಬ್ಬರು ಮಾಜಿ ಶಾಸಕರು, ಒಬ್ಬರು ಹಾಲಿ ವಿಧಾನ ಪರಿಷತ್ ಸದಸ್ಯರು ಬಿಜೆಪಿ ಸೇರುವ ಸಾಧ್ಯತೆ ಇದೆ.
ಕರ್ನಾಟಕ ಬಿಜೆಪಿ ಮಂಡ್ಯ, ರಾಮನಗರ, ಮೈಸೂರು ಭಾಗದಲ್ಲಿ ಪಕ್ಷವನ್ನು ಸಂಘಟನೆ ಮಾಡಿ, ಈ ಭಾಗದ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದೆ. ಅದಕ್ಕಾಗಿ ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಮುಂದಾಗಿದೆ.
ಲೋಕಸಭೆ ಚುನಾವಣೆ : ಕರ್ನಾಟಕ ಬಿಜೆಪಿಗೆ ಕಗ್ಗಂಟಾಗಿರುವ 11 ಕ್ಷೇತ್ರಗಳು
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರಿಗೆ ಈ ಕುರಿತು ಸೂಚನೆ ನೀಡಲಾಗಿದೆ ಎಂಬುದು ಸದ್ಯ ಹರಡಿರುವ ಸುದ್ದಿ. ಮೂವರು ನಾಯಕರ ಜೊತೆ ಅಶೋಕ್ ಅವರು ಮಾತುಕತೆ ನಡೆಸಲಿದ್ದು, ಪಕ್ಷಕ್ಕೆ ಕರೆತರಲು ಪ್ರಯತ್ನ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆ : 28 ಕ್ಷೇತ್ರಕ್ಕೆ ಬಿಜೆಪಿಯಿಂದ ಕಾರ್ಯದರ್ಶಿಗಳ ನೇಮಕ
ಕರ್ನಾಟಕ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸುವ ಗುರಿ ಹೊಂದಿದೆ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದೆ. ಲೋಕಸಭೆ ಚುನಾವಣೆಯಲ್ಲಿಯೂ ಎರಡೂ ಪಕ್ಷಗಳು ಮೈತ್ರಿ ಮುಂದುವರೆಸುವ ಮಾತುಗಳನ್ನು ಆಡುತ್ತಿವೆ. ಆದ್ದರಿಂದ, ಬಿಜೆಪಿಗೆ ಪ್ರಬಲ ಪೈಪೋಟಿ ಎದುರಾಗುವ ನಿರೀಕ್ಷೆ ಇದೆ....
ಬಿಜೆಪಿ ಸೇರುವ ನಾಯಕರು ಯಾರು?
ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಮತ್ತು ಜೆಡಿಎಸ್ ನಾಯಕ, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಎಚ್.ಸಿ.ಬಾಲಕೃಷ್ಣ ಮತ್ತು ಎನ್.ಚಲುವರಾಯಸ್ವಾಮಿ 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ.
ಆರ್.ಅಶೋಕ್ ಜೊತೆ ಮಾತುಕತೆ
ಮೂವರು ಒಕ್ಕಲಿಗ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ ಬಯಸಿದೆ. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಈ ಕುರಿತು ಮೂವರ ಜೊತೆ ಮಾತುಕತೆ ನಡೆಸಿದ್ದಾರೆ. ಲೋಕಸಭೆ ಚುನಾವಣೆ ವೇಳೆಗೆ ಎಲ್ಲಾ ನಾಯಕರು ಪಕ್ಷಕ್ಕೆ ಸೇರುವ ಸಾಧ್ಯತೆ ಇದೆ.
ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ, ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಬಿಜೆಪಿ ಸೇರಿದರೆ ರಾಮನಗರ ಮತ್ತು ಮಂಡ್ಯ ಭಾಗದಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಸಿಗಲಿದೆ.
ಎಚ್.ಸಿ.ಬಾಲಕೃಷ್ಣ ಬಿಜೆಪಿಗೆ?
ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ ಬಿಜೆಪಿ ಸೇರುವ ಸಾಧ್ಯತೆ ಇದೆ. 2018ರ ಚುನಾವಣೆಯಲ್ಲಿ ಮಾಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 68067 ಮತಗಳನ್ನು ಪಡೆದು, ಜೆಡಿಎಸ್ನ ಎ.ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದರು.
ಜೆಡಿಎಸ್ ಪಕ್ಷದಲ್ಲಿದ್ದ ಎಚ್.ಸಿ.ಬಾಲಕೃಷ್ಣ ಅವರು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದರು.
ಎನ್. ಚೆಲುವರಾಯಸ್ವಾಮಿ
ನಾಗಮಂಗಲ ಕ್ಷೇತ್ರದ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಅವರು ಸಹ ಬಿಜೆಪಿ ಸೇರುವ ಸಾಧ್ಯತೆ ಇದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ನಾಗಮಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ 64,729 ಮತಗಳನ್ನು ಪಡೆದು ಸೋಲು ಅನುಭವಿಸಿದ್ದರು.
ಜೆಡಿಎಸ್ ಪಕ್ಷದಲ್ಲಿದ್ದ ಚಲುವರಾಯಸ್ವಾಮಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿ ಪಕ್ಷದಿಂದ ಅಮಾನತುಗೊಂಡಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದರು.
ಪುಟ್ಟಣ್ಣ ಬಿಜೆಪಿಗೆ?
ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರು ಸಹ ಬಿಜೆಪಿ ಸೇರುವ ಸಾಧ್ಯತೆ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಮೂರು ಬಾರಿ ಪುಟ್ಟಣ್ಣ ಗೆಲುವು ಸಾಧಿಸಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ಬಹುತೇಕ ದೂರ ಉಳಿದಿದ್ದಾರೆ.
ಪುಟ್ಟಣ್ಣ ಅವರು ವಿಧಾನಸಭೆ ಚುನಾವಣೆ ಸಮಯದಲ್ಲಿಯೇ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆ ಆರಂಭವಾಗಿತ್ತು. ಆದರೆ, ಅವರು ಆಗ ಪಕ್ಷ ಸೇರಿರಲಿಲ್ಲ.