ಕಾಫಿಪುಡಿ ಕಲಬೆರಕೆ ಮಾಡಿದ್ದವನಿಗೆ 6 ತಿಂಗಳು ಜೈಲು ಕಾಯಂಗೊಳಿಸಿದ ಹೈಕೋರ್ಟ್
ಬೆಂಗಳೂರು, ನ.16:. ಅಪರೂಪದ ಪ್ರಕರಣವೊಂದರಲ್ಲಿ ಹೈಕೋರ್ಟ್, ಕಾಫಿ ಪುಡಿ ಕಲಬೆರೆಕೆ ಮಾಡಿದ್ದ ಕಾರಣಕ್ಕೆ ವ್ಯಕ್ತಿಯೊಬ್ಬನಿಗೆ ಶಿಕ್ಷೆಯಾಗಿದೆ. ಸಕಲೇಶಪುರದ ಕಾಫಿಪುಡಿ ಮಾರಾಟ ಮಾಡಿದ್ದಾತನಿಗೆ ಆರು ತಿಂಗಳು ಜೈಲು ಶಿಕ್ಷೆ ಕಾಯಂಗೊಳಿಸಿದೆ. ಆ ಮೂಲಕ ಇತರೆ ಕಲಬೆರೆಕೆ ಅಥವಾ ವಿವರಗಳನ್ನು ನೀಡದ ಪದಾರ್ಥಗಳನ್ನು ಮಾರಾಟ ಮಾಡುವ ವ್ಯಕ್ತಿಗಳಿಗೆ ಎಚ್ಚರಿಕೆಯ ಸಂದೇಶವನ್ನು ಕೋರ್ಟ್ ರವಾನಿಸಿದೆ.
ಅರ್ಜಿದಾರನಿಗೆ 6 ತಿಂಗಳು ಸಾಧಾರಣ ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶ ಎತ್ತಿಹಿಡಿದಿರುವ ಹೈಕೋರ್ಟ್, ಅರ್ಜಿದಾರರು 45 ದಿನಗಳಲ್ಲಿ ಸಕಲೇಶಪುರದ ಜೆಎಂಎಫ್ಸಿ ನ್ಯಾಯಾಲಯದ ಮುಂದೆ ಶರಣಾಗಿ, ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
ಅಷ್ಟೇ ಅಲ್ಲದೆ, ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಎಕ್ಸ್ಪೈರಿ ದಿನಾಂಕ ಅಥವಾ ಸಸ್ಯಾಹಾರ - ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರಾಟ ಮಾಡುವುದು ಆಹಾರ ಕಲಬೆರಕೆ ತಡೆ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧ ಎಂದು ಹೇಳಿರುವ ಹೈಕೋರ್ಟ್, ಪ್ರಕರಣದಲ್ಲಿ ವ್ಯಾಪಾರಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ಎತ್ತಿಹಿಡಿದಿದೆ.

ನ್ಯಾಯಮೂರ್ತಿ ಡಾ. ಎಚ್.ಬಿ. ಪ್ರಭಾಕರ ಶಾಸ್ತ್ರಿ ಅವರಿದ್ದ ಪೀಠ, ಪೊಟ್ಟಣದ ಮೇಲೆ ಬ್ಯಾಚ್ ಸಂಖ್ಯೆ ಹಾಗೂ ಎಕ್ಸ್ಪೈರಿ ದಿನಾಂಕ ನಮೂದಿಸದ ಕಾಫಿ ಪುಡಿ ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದು ಕೋರಿ ಸಕಲೇಶಪುರದ ಸೆಲೆಕ್ಟ್ ಕಾಫೀ ವರ್ಕ್ಸ್ನ ಮಾಲೀಕ ಸಯ್ಯದ್ ಅಹ್ಮದ್ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದೆ.
ಹೈಕೋರ್ಟ್ ಆದೇಶ: ಅರ್ಜಿದಾರರು ಮಾರಾಟ ಮಾಡಿರುವ ವಸ್ತುವಿನ ಮೇಲೆ ಆಹಾರ ಕಲಬೆರಕೆ ತಡೆ ಕಾಯ್ದೆಯಲ್ಲಿ ಹೇಳಿರುವಂತೆ ಬ್ಯಾಚ್ ಸಂಖ್ಯೆ, ಎಷ್ಟು ದಿನಗಳ ವರೆಗೆ ಬಳಕೆಗೆ ಉತ್ತಮವಾಗಿರಲಿದೆ ಹಾಗೂ ಸಸ್ಯಾಹಾರ ಅಥವಾ ಮಾಂಸಾಹಾರದ ಚಿಹ್ನೆ ನಮೂದಿಸಿಲ್ಲ. ಇದು ಕಾಯ್ದೆಯ ಸೆಕ್ಷ ನ್ 7(ಜಿ) ಮತ್ತು 7(ಜಿಜಿ) ಅಡಿಯಲ್ಲಿ ಅಪರಾಧವಾಗಲಿದ್ದು, ಸೆಕ್ಷನ್ 16(1)(ಎ) ಅಡಿಯಲ್ಲಿ ಶಿಕ್ಷೆ ವಿಧಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಪ್ರಕರಣದ ಸಾಕ್ಷಿಗಳು ಹಾಗೂ ವೈಜ್ಞಾನಿಕ ಅಧ್ಯಯನ ವರದಿಯನ್ನು ಪರಿಶೀಲಿಸಿದರೆ, ಕಾಫಿ ಪುಡಿಯಲ್ಲಿ ಕೆಫೀನ್ನ ಪ್ರಮಾಣ ಶೇ. 0.6ಕ್ಕಿಂತ ಕಡಿಮೆ ಇರಬಾರದು. ಆದರೆ, ಈ ಪ್ರಕರಣದಲ್ಲಿ ತಪಾಸಣೆಗೊಳಪಡಿಸಿರುವ ಮಾದರಿಯಲ್ಲಿ ಕೇವಲ ಶೇ.0.4 ಪ್ರಮಾಣದ ಕೆಫೀನ್ ಇದೆ. ಜಲೀಯ ಸಾರದ ಪ್ರಮಾಣ ಶೇ.50ಕ್ಕಿಂತ ಹೆಚ್ಚಿರಬಾರದು.

ಆದರೆ, ತಪಾಸಣೆಗೊಳಪಡಿಸಿದ ಕಾಫಿ ಪುಡಿಯಲ್ಲಿ ಶೇ.55 ಇದೆ. ಮೇಲಾಗಿ, ಲೇಬಲ್ ಮೇಲೆ ಕಾಫಿ ಪುಡಿ ತಯಾರಾದ ಸಂಸ್ಥೆಯ ಹೆಸರು ಹೊರತುಪಡಿಸಿ, ಬ್ಯಾಚ್ ಸಂಖ್ಯೆ, ಎಕ್ಸ್ಪೈರಿ ದಿನಾಂಕ ಮತ್ತಿತರ ಮಾಹಿತಿ ನಮೂದಿಸಿಲ್ಲ ಎಂದು ಆದೇಶಿಸಿದೆ.
ಪ್ರಕರಣದ ವಿವರ: ಸಕಲೇಶಪುರದ ಆಹಾರ ನಿರೀಕ್ಷಕರು 2008ರ ಜೂ.20ರಂದು ಸಯ್ಯದ್ ಅಹ್ಮದ್ ಮಾಲೀಕತ್ವದ ಸೆಲೆಕ್ಟ್ ಕಾಫಿ ವರ್ಕ್ಸ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಲ್ಲದೆ, 600 ಗ್ರಾಂ ಕಾಫಿ ಪುಡಿ ಖರೀದಿಸಿ ವೈಜ್ಞಾನಿಕ ಪರೀಕ್ಷೆಗೆ ರವಾನಿಸಿದ್ದರು. ತಪಾಸಣೆಯಲ್ಲಿ ಕಾಫಿ ಪುಡಿ ಕಲಬೆರಕೆಯಾಗಿರುವುದು, ಪುಡಿಯಲ್ಲಿ ಶೇ 0.4 ಕೆಫೀನ್ ಮತ್ತು ಶೇ.55 ಜಲೀಯ ಸಾರದ ಅಂಶ ಇರುವುದು ಖಚಿತವಾಗಿತ್ತು.
ಜತೆಗೆ, ಮಾರಾಟದ ಸಂದರ್ಭದಲ್ಲಿಯಾವುದೇ ಬ್ಯಾಚ್ ಸಂಖ್ಯೆ, ಎಕ್ಸ್ಪೈರಿ ದಿನಾಂಕಗಳನ್ನು ಮುದ್ರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿಅರ್ಜಿದಾರರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ತನಿಖೆ ನಡೆಸಿ ಸಕಲೇಶಪುರದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕಲಬೆರಕೆ ಆಹಾರ ಪದಾರ್ಥ ಮಾರಾಟ ಮಾಡಿದ ಆರೋಪದಲ್ಲಿ ಸಯ್ಯದ್ ಅಹ್ಮದ್ಗೆ ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಇದರಿಂದ, ಸಯ್ಯದ್ ಹೈಕೋರ್ಟ್ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ್ದರು.












Click it and Unblock the Notifications