ಜಾರ್ಜ್ ವಿರುದ್ಧ ಎಫ್ಐಆರ್ ಹಾಕುವಂತೆ ಕೋರಿದ್ದ ಅರ್ಜಿ ವಜಾ!
ಬೆಂಗಳೂರು, ಜುಲೈ 15: ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಆಧಿಕಾರಿಗಳು ಹಾಗೂ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಕೋರಿದ್ದ ಅರ್ಜಿಯನ್ನು ಶುಕ್ರವಾರದಂದು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಆತ್ಮಹತ್ಯೆಗೂ ಮುನ್ನ ಎಂಕೆ ಗಣಪತಿ ಅವರು ವಿಡಿಯೋ ಮೂಲಕ ನೀಡಿರುವ ಹೇಳಿಕೆಯನ್ನು ಪರಿಗಣಿಸಿ ಎಫ್ಐಆರ್ ದಾಖಲಿಸಲು ತನಿಖಾಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಹೈಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. [ಎಂ.ಕೆ.ಗಣಪತಿ ಆತ್ಮಹತ್ಯೆ, ಎಡಿಜಿಪಿ ಎ.ಎಂ.ಪ್ರಸಾದ್ ಹೇಳಿದ್ದೇನು?]
ಈ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿಕೊಳ್ಳದೆ ತನಿಖೆ ಮುಂದುವರೆಸಲಾಗುತ್ತಿದೆ. ಆರೋಪಿಗಳನ್ನು ರಕ್ಷಿಸಲಾಗುತ್ತಿದೆ ಎಂದು ಪಿಐಎಲ್ ಅರ್ಜಿಯಲ್ಲಿ ವಕೀಲ ರಂಗನಾಥ ರೆಡ್ಡಿ ಹೇಳಿದ್ದಾರೆ. [ಡಿವೈಎಸ್ಪಿ ಗಣಪತಿ ಯಾರು? ಏನು? ಎತ್ತ?]
ಆದರೆ, ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸುಬ್ರೊ ಕಮಲ್ ಮುಖರ್ಜಿ ಹಾಗೂ ಜಸ್ಟೀಸ್ ರವಿ ಮಳಿಮಠ್ ಅವರಿದ್ದ ನ್ಯಾಯಪೀಠ ಈ ಪ್ರಕರಣದಲ್ಲಿ ತನಿಖೆ ಆರಂಭವಾಗಿದ್ದು, ಈ ಸಮಯದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ, ಅದು ಸರಿಯೂ ಅಲ್ಲ ಎಂದು ಹೇಳಿದೆ.ಆದರೆ, ಈ ಬಗ್ಗೆ ಮ್ಯಾಜಿಸ್ಟ್ರೇಟ್ ಕೋರ್ಟಿನಲ್ಲಿ ಸಿಆರ್ ಪಿಸಿ 156ರ ಅನ್ವಯ ಪ್ರಶ್ನಿಸುವ ಅವಕಾಶವನ್ನು ಅರ್ಜಿದಾರರಿಗೆ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಳ್ಳದೇ ತನಿಖೆಯನ್ನು ಸಿಐಡಿಗೆ ನೀಡಲಾಯಿತು, ನಂತರ ನ್ಯಾಯಾಂಗ ತನಿಖೆ ನಡೆಸುವುದಾಗಿ ಸಿದ್ದರಾಮಯ್ಯ ಸರ್ಕಾರ ಭರವಸೆ ನೀಡಿದೆ.