ಪತ್ರಕರ್ತ ರವಿ ಬೆಳಗೆರೆ ಜಾಮೀನು ರದ್ದತಿಗೆ ಹೈಕೋರ್ಟ್ ನಕಾರ
ಬೆಂಗಳೂರು, ಜೂನ್ 28: ಪತ್ರಕರ್ತ ರವಿಬೆಳಗೆರೆಗೆ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ನೀಡಿದ್ದ ಜಾಮೀನನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ವಿರುದ್ಧ ಸುಪಾರಿ ನೀಡಿದ ಆರೋಪ ಎದುರಿಸುತ್ತಿದ್ದ ರವಿ ಬೆಳಗೆರೆಗೆ ಕೆಳ ನ್ಯಾಯಾಲಯ ಜಾಮೀನು ನೀಡಿತ್ತು. ಜಾಮೀನು ನೀಡಿರುವ ಕ್ರಮವನ್ನು ಪ್ರಶ್ನಿಸಿ ಸರ್ಕಾರಿ ವಕೀಲರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.
ಸುಪಾರಿ ಕೇಸ್: ರವಿ ಬೆಳಗೆರೆಗೆ ಜಾಮೀನು ಮಂಜೂರು
ಗುರುವಾರ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರವಿ ಬೆಳಗೆರೆಗೆ ನೀಡಿರುವ ಜಾಮೀನನ್ನು ರದ್ದುಪಡಿಸಲು ನಿರಾಕರಿಸಿದೆ. ಹಾಗಾಗಿ ಈಗಾಗಲೇ ಕೆಳ ನ್ಯಾಯಾಲಯ ನೀಡಿರುವ ಜಾಮೀನಿನ ಅನ್ವಯ ಆರೋಪಿತರು ಯಾವುದೇ ಷರತ್ತುಗಳನ್ನು ಉಲ್ಲಂಘಿಸಿಲ್ಲ. ಹೀಗಾಗಿ ಜಾಮೀನು ರದ್ದುಪಡಿಸಲು ಯಾವುದೇ ಸಕಾರಣವಿಲ್ಲ ಎಂದು ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಮೇಲ್ಮನವಿಯನ್ನು ಕೈಬಿಟ್ಟಿತು.
ಪ್ರಕರಣದ ಸಂಬಂಧ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಆರೋಪಿಯು ಅಧೀನ ನ್ಯಾಯಾಲಯ ವಿಧಿಸಿರುವ ಯಾವುದೇ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿಲ್ಲ ಎಂದು ಹೇಳಿದೆ.