ಸಂತ್ರಸ್ತರಿಗೂ ಮೇಲ್ಮನವಿ ಅವಕಾಶಕ್ಕಾಗಿ ಸಿಆರ್ಪಿಸಿ ತಿದ್ದುಪಡಿ ಮಾಡಿ-ಹೈಕೋರ್ಟ್
ಬೆಂಗಳೂರು ಜೂ.2. ಕ್ರಿಮಿನಲ್ ಕೇಸ್ಗಳಲ್ಲಿ ಸಂತ್ರಸ್ತರಿಗೂ ಮೇಲ್ಮನವಿ ಸಲ್ಲಿಸುವ ಅವಕಾಶ ನೀಡಲು ಅಪರಾಧ ದಂಡ ಸಂಹಿತೆಗೆ ತಿದ್ದುಪಡಿ ಅಗತ್ಯವಿದೆ ಎಂದು ಹೈಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರ ನ್ಯಾಯಪೀಠ, ಅಪರಾಧ ಪ್ರಕರಣದಲ್ಲಿ ದೋಷಿಗೆ ವಿಧಿಸಲಾಗುವ ಶಿಕ್ಷೆ ಪ್ರಮಾಣ ಹೆಚ್ಚಿಸಲು ಕೋರಿ ಮೇಲ್ಮನವಿ ಸಲ್ಲಿಸಲು ಪ್ರಕರಣದ ಸಂತ್ರಸ್ತರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಸೆಕ್ಷನ್ 372ಕ್ಕೆ ಅಗತ್ಯ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
ಮಾನನಷ್ಟ ಮೊಕದ್ದಮೆಯೊಂದರಲ್ಲಿ 'ಪಾರಿವಾಳ' ಪತ್ರಿಕೆಯ ಸಂಪಾದಕ ಆರ್.ಕೆ. ರವಿಕುಮಾರ್ಗೆ ವಿಧಿಸಿದ್ದ ಜೈಲು ಶಿಕ್ಷೆ ಪ್ರಮಾಣ ಹೆಚ್ಚಳ ಕೋರಿ ಮೂಲ ದೂರುದಾರರಾದ ನಿವೃತ್ತ ಐಎಎಸ್ ಅಧಿಕಾರಿ ಬಿ.ಎ. ಹರೀಶ್ ಗೌಡ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ನ್ಯಾಯಪೀಠ ಆಲಿಸಿತು.
ಶಿಕ್ಷೆ ಪ್ರಮಾಣ ಅಸರ್ಮಪಕವಾಗಿದ್ದರೆ ಆ ಕುರಿತು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಮಾತ್ರ ಅವಕಾಶವಿದೆ ಹೊರತು ಸಂತ್ರಸ್ತರಿಗೆ ಇಲ್ಲ. ಇದರಿಂದ ಸಂತ್ರಸ್ತರಿಗೆ ತಾರತಮ್ಯ ಮಾಡಿದಂತಾಗುತ್ತದೆ. ಮೇಲ್ಮನವಿ ಸಲ್ಲಿಸಲು ಸಂತ್ರಸ್ತರಿಗೂ ಅವಕಾಶ ಕಲ್ಪಿಸುವ ಸಂಬಂಧ ಸಿಆರ್ಪಿಸಿ ಸೆಕ್ಷನ್ 372ಗೆ ತಿದ್ದುಪಡಿ ತರುವ ಅಗತ್ಯತೆಯನ್ನು ಕೇಂದ್ರ ಸರ್ಕಾರ ಪರಿಗಣಿಸಬೇಕಿದೆ ಹಾಗೂ ಈ ನಿಟ್ಟಿನಲ್ಲಿ ಕ್ರಮ ಜರುಗಿಸಬೇಕು ಎಂದು ಸಲಹೆ ನೀಡಿದೆ.

ಸಿಆರ್ಪಿಸಿ ಸೆಕ್ಷನ್ 372 ಪ್ರಕಾರ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ವಿಧಿಸಿರುವ ಶಿಕ್ಷೆಯನ್ನು ಹೆಚ್ಚಿಸುವಂತೆ ಕೋರಿ ಸಂತ್ರಸ್ತರು ಮೇಲ್ಮನವಿ ಸಲ್ಲಿಸಲು ಅವಕಾಶವಿಲ್ಲ. ಆದರೂ, ಸಂತ್ರಸ್ತರ ಮೇಲ್ಮನವಿ ಪರಿಗಣಿಸಿ ವಿಚಾರಣಾ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಒಂಭತ್ತು ತಿಂಗಳಿಗೆ ಹೆಚ್ಚಿಸಿರುವುದು ಸರಿಯಲ್ಲ ಶಿಕ್ಷೆ ಪ್ರಮಾಣ ಹೆಚ್ಚಿಸಿದ್ದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಆದೇಶ ರದ್ದುಪಡಿಸಿತು.
ಆದರೆ, ಆರೋಪಿ ಬರೆದಿರುವ ಲೇಖನದಿಂದ ದೂರುದಾರರ ಮಾನಹಾನಿಯಾಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿರುವುದು ಸೂಕ್ತವಾಗಿದೆ ಎಂದು ತೀರ್ಮಾನಿಸಿದ ಹೈಕೋರ್ಟ್, ಆರು ತಿಂಗಳ ಜೈಲು ಶಿಕ್ಷೆ ಕಾಯಂಗೊಳಿಸಿದೆ.
ಪ್ರಕರಣದ ಹಿನ್ನೆಲೆ ಏನು?
ಹರೀಶ್ ಗೌಡ 2000ನೇ ಇಸವಿಯಲ್ಲಿ ಪತ್ರಿಕೆಯಲ್ಲಿ ಲೇಖನ ಬರೆದು ತಮ್ಮ ಮಾನಹಾನಿ ಮಾಡಲಾಗಿದೆ ಎಂದು ಆರೋಪಿಸಿ ರವಿಕುಮಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಪ್ರಕರಣದಲ್ಲಿ ರವಿಕುಮಾರ್ಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 25 ಸಾವಿರ ರು. ದಂಡ ವಿಧಿಸಿ 2017ರ ಆ.30ರಂದು ಮ್ಯಾಜಿಸ್ಟೇಟ್ ಕೋರ್ಟ್ ಆದೇಶಿಸಿತ್ತು. ಶಿಕ್ಷೆ ರದ್ದುಪಡಿಸುವಂತೆ ಕೋರಿ ಆರೋಪಿ ಮತ್ತು ಶಿಕ್ಷೆ ಪ್ರಮಾಣ ಹೆಚ್ಚಿಸುವಂತೆ ಕೋರಿ ದೂರುದಾರರು (ಸಂತ್ರಸ್ತರು) ಪ್ರತ್ಯೇಕ ಮೇಲ್ಮನವಿ ಸಲ್ಲಿಸಿದ್ದರು.
ಅವುಗಳ ವಿಚಾರಣೆ ನಡೆಸಿದ್ದ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್, ಆರೋಪಿಯ ಮೇಲ್ಮನವಿ ವಜಾಗೊಳಿಸಿತು. ಇದೇ ವೇಳೆ ದೂರುದಾರರ ಮೇಲ್ಮನವಿ ಪುರಸ್ಕರಿಸಿ ಆರೋಪಿಗೆ ವಿಧಿಸಲಾಗಿದ್ದ ಶಿಕ್ಷೆ ಪ್ರಮಾಣವನ್ನು ಒಂಭತ್ತು ತಿಂಗಳಿಗೆ ಹೆಚ್ಚಿಸಿತ್ತು. ಹಾಗಾಗಿ ಶಿಕ್ಷೆ ಪ್ರಮಾಣ ಹೆಚ್ಚಳ ಕೋರಿ ಹರೀಶ್ ಗೌಡ ಮತ್ತು ಶಿಕ್ಷೆ ತಗ್ಗಿಸಲು ರವಿಕುಮಾರ್ ಮೇಲ್ಮನವಿ ಸಲ್ಲಿಸಿದ್ದರು.












Click it and Unblock the Notifications