8 ವಾರಗಳಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿ; ಹೈಕೋರ್ಟ್
ಬೆಂಗಳೂರು, ಜನವರಿ 03: ರಾಜ್ಯದಲ್ಲಿ ಚುನಾವಣೆ ಬಾಕಿ ಇರುವ ಡಿಸಿಸಿ ಬ್ಯಾಂಕುಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಚುನಾವಣೆ ಬಾಕಿಯಿರುವ ಡಿಸಿಸಿ ಬ್ಯಾಂಕುಗಳನ್ನು ಆಡಳಿತಾಧಿಕಾರಿ ವಹಿಸಿಕೊಳ್ಳಬೇಕು, ಡಿಸಿಸಿ ಬ್ಯಾಂಕುಗಳ ಆಡಳಿತ ಮಂಡಳಿಗೆ ಚುನಾವಣೆ ವಿಳಂಬಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಆದೇಶಿಸಿದೆ.
ಅರ್ಹ, ಅನರ್ಹ ಪಟ್ಟಿಯಲ್ಲಿ ಗೊಂದಲ ಹಿನ್ನೆಲೆಯಲ್ಲಿ ಚುನಾವಣಾ ಅಧಿಸೂಚನೆ ಹಿಂಪಡೆದಿದ್ದನ್ನು ಪ್ರಶ್ನಿಸಿ ಹಲವು ಡಿಸಿಸಿ ಬ್ಯಾಂಕುಗಳ ಆಡಳಿತ ಮಂಡಳಿಗಳು ಮೇಲ್ಮನವಿ ಸಲ್ಲಿಸಿದ್ದವು, ಅದೇ ರೀತಿ ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್ ಹಾಗೂ ದಾವಣಗೆರೆ ಜಿಲ್ಲಾ ಸಹಕಾರ ಬ್ಯಾಾಂಕಿನ ಆಡಳಿತ ಮಂಡಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸಬೇಕು. ಇದಕ್ಕಾಾಗಿ ಸರ್ಕಾರ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಭಾಗಿದಾರರು ಅಗತ್ಯ ಅನುಕೂಲಕರ ಕ್ರಮಗಳನ್ನು ಕೈಗೊಳ್ಳಬೇಕು. ತಕ್ಷಣ ಆಡಳಿತಾಧಿಕಾರಿಗಳು ಸಹಕಾರ ಬ್ಯಾಂಕುಗಳ ಕಾರ್ಯಭಾರವನ್ನು ವಹಿಸಿಕೊಳ್ಳಬೇಕು. ನ್ಯಾಯಾಲಯ ನೀಡಿರುವ ಎಲ್ಲಾ ಮಧ್ಯಂತರ ಆದೇಶಗಳು ವಿಸರ್ಜನೆಗೊಂಡಿದ್ದು, ಸಂಬಂಧಪಟ್ಟ ಪ್ರಾಧಿಕಾರಗಳು ತಕ್ಷಣ ಕಾನೂನು ರೀತಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆದೇಶಿಸಿರುವ ನ್ಯಾಯಪೀಠ, ಮೇಲ್ಮನವಿಗಳನ್ನು ಇತ್ಯರ್ಥಪಡಿಸಿದೆ.
ಏನಿದು ಪ್ರಕರಣ?: ಮೈಸೂರು-ಚಾಮರಾಜನಗರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಗೆ 2018 ನ.12ಕ್ಕೆ ಚುನಾವಣೆ ನಡೆದಿತ್ತು. 2023ರ ನ.11ಕ್ಕೆ ಆಡಳಿತ ಮಂಡಳಿಯ ಐದು ವರ್ಷದ ಕಾಲಾವಧಿ ಮುಗಿದಿತ್ತು. ಚುನಾವಣೆ ನಡೆಸುವಂತೆ ಅವಧಿ ಮುಗಿಯವ 6 ತಿಂಗಳು ಮುಂಚಿತವಾಗಿ, ಅಂದರೆ 2023ರ ಮೇ 4ರಂದು ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.
2023-2028ರ ಅವಧಿಗೆ 2023ರ ಅ.27ರಿಂದ ನ.4ರವರೆಗೆ ಚುನಾವಣೆ ನಡೆಸಲು 2023ರ ಸೆ.1ರಂದು ಚುನಾವಣಾಧಿಕಾರಿ ಅಧಿಸೂಚನೆ ಹೊರಡಿಸಿದ್ದರು. ಈ ಮಧ್ಯೆ ಮತದಾರರ ಪಟ್ಟಿಯಲ್ಲಿನ ಗೊಂದಲಗಳ ಹಿನ್ನೆಲೆಯಲ್ಲಿ ಸೆ.2ರಂದು ಚುನಾವಣಾ ವೇಳಾಪಟ್ಟಿಯನ್ನು ವಾಪಸ್ ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಬ್ಯಾಂಕಿನ ಕೆಲ ನಿರ್ದೇಶಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಏಕಸದಸ್ಯಪೀಠದ ಆದೇಶವೇನು?; ಅರ್ಜಿ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ಕಾಲಮಿತಿಯೊಳಗೆ, ಅಂದರೆ ಗರಿಷ್ಠ 120 ದಿನಗಳಲ್ಲಿ ಚುನಾವಣೆ ನಡೆಸಬೇಕು, ಚುನಾವಣೆ ವಿಳಂಬಕ್ಕೆ ಸರ್ಕಾರ ಮತ್ತು ಬ್ಯಾಂಕಿನ ಆಡಳಿತ ಇಬ್ಬರಿಂದಲೂ ಲೋಪ ಆಗಿದ್ದರಿಂದ ಅವಧಿ ಮುಗಿದ ಆಡಳಿತ ಮಂಡಳಿಯಲ್ಲಿದ್ದ ನಿರ್ದೇಶಕರಿಗೆ ಚುನಾವಣೆ ಸ್ಪರ್ಧೆಯಿಂದ ಅನರ್ಹಗೊಳಿಸಬಾರದು ಎಂದು 2023ರ ಅ.12ರಂದು ಆದೇಶ ನೀಡಿತ್ತು. ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ವಿಷಯವೂ ಒಂದೇ ಆಗಿದ್ದರಿಂದ ಆ ಅರ್ಜಿಯನ್ನೂ ಸೇರಿಸಿ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದ್ದರಿಂದ ಮೂರು ಬ್ಯಾಂಕುಗಳಿಗೂ ಅನ್ವಯವಾಗಿತ್ತು.
ಚುನಾವಣೆಗಳನ್ನು 120 ದಿನಗಳಲ್ಲಿ ನಡೆಸುವಂತೆ ಏಕಸಕದಸ್ಯ ನ್ಯಾಯಪೀಠದ ಆದೇಶವನ್ನು ಮಾರ್ಪಡಿಸುವಂತೆ ಕೋರಿ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು. ಈ ಮೇಲ್ಮನವಿಗಳನ್ನು ಮಾನ್ಯ ಮಾಡಿರುವ ವಿಭಾಗೀಯ ನ್ಯಾಾಯಪೀಠ ಎಂಟು ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದೆ.












Click it and Unblock the Notifications