ಅಕ್ರಮ ಡಿನೋಟಿಫಿಕೇಷನ್: ಮಾಜಿ ಸಿಎಂ ಸಿದ್ದರಾಮಯ್ಯಗೆ ರಿಲೀಫ್
ಬೆಂಗಳೂರು, ಅ.24: ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ ಸಮನ್ಸ್ ರದ್ದುಗೊಂಡಿದೆ. ಮೈಸೂರಿನಲ್ಲಿ ನಡೆದಿದೆ ಎನ್ನಲಾದ ಅಕ್ರಮ ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್ ರಗದ್ದುಗೊಳಿಸಿ ಹೈಕೋರ್ಟ್ ಶುಕ್ರವಾರದಂದು ಆದೇಶಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ಕುರಿತಂತೆ ತಮ್ಮ ವಿರುದ್ಧ ಹೊರಡಿಸಲಾಗಿರುವ ಸಮನ್ಸ್ ರದ್ದು ಕೋರಿ ಸಿದ್ದರಾಮಯ್ಯ ಅವರು ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ನ್ಯಾಯಪೀಠ, ಸಮನ್ಸ್ ರದ್ದುಗೊಳಿಸಿ ಆದೇಶ ನೀಡಿದೆ.
ಮೈಸೂರಿನ ವಿಜಯನಗರ 2ನೆ ಹಂತದ ಬಡಾವಣೆ ನಿರ್ಮಾಣಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ) ಸ್ವಾಧೀನಪಡಿಸಿಕೊಂಡಿದ್ದ 535 ಎಕರೆ ಜಮೀನಿನಲ್ಲಿ 30 ಗುಂಟೆ ಜಮೀನು ಡಿನೋಟಿಫೈ ಮಾಡಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆಂಬ ಆರೋಪ ಎದುರಿಸುತ್ತಿದ್ದರು.
ಭೂ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿಸಲು ಹೋದ ಬಿಜೆಪಿಗೆ ಬೂಮರಾಂಗ್
ಈ ಕುರಿತಂತೆ ತನಿಖೆ ನಡೆಸಿದ್ದ ಸ್ಥಳೀಯ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಕ್ಲೀನ್ ಚಿಟ್ ನೀಡಿದ್ದನ್ನು ಗಂಗರಾಜು ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿ ರಿಪೋರ್ಟ್ ರದ್ದುಗೊಳಿಸಿ, ವಿಚಾರಣೆಗೆ ಖುದ್ದು ಹಾಜರಾಗುವಂತೆ ಸಿದ್ದರಾಮಯ್ಯನವರಿಗೆ ಸಮನ್ಸ್ ಜಾರಿಗೊಳಿಸಿತ್ತು. ನ್ಯಾಯಾಲಯದ ಆದೇಶದ ವಿರುದ್ಧ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
Recommended Video

ಡಿಸಿಎಂ ಆಗಿದ್ದಾಗ ಡಿನೋಟಿಫೈ
ಸಿದ್ದರಾಮಯ್ಯ 1997ರಲ್ಲಿ ಡಿಸಿಎಂ ಆಗಿದ್ದಾಗ ಡಿನೋಟಿಫೈ ಮಾಡಲಾದ 30 ಗುಂಟೆ ಜಮೀನಿನ ಪೈಕಿ 10 ಗುಂಟೆ ಖರೀದಿಸಿ ಸಿದ್ದರಾಮಯ್ಯ ಮನೆ ನಿರ್ಮಾಣ ಮಾಡಿ, ಬಳಿಕ ಆ ಮನೆ ಮಾರಾಟ ಮಾಡಿದ್ದರು. ಈ ರೀತಿ ನೋಟಿಫೈ ಮಾಡಿದ ಜಾಗವನ್ನು ಮಾರಾಟ ಮಾಡಿ ಸಿದ್ದರಾಮಯ್ಯ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿ ಗಂಗರಾಜು ಎಂಬುವರು ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ್ದರು.
ಅಕ್ರಮ ಡಿನೋಟಿಫೈ ಜಾಗಕ್ಕೆ ಹೊಂದಿಕೊಂಡಂತೆ 400-500 ಎಕರೆ ಜಾಗ ಭೂಸ್ವಾಧೀನವಾಗಿದೆ. ಸಿದ್ದರಾಮಯ್ಯ ಜೊತೆ ಮುಡಾದ ಮಾಜಿ ಅಧ್ಯಕ್ಷರಾದ ಸಿ. ಬಸವೇಗೌಡ, ಡಿ ಧೃವಕುಮಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು ಎಂದು ಗಂಗರಾಜು ದೂರು ನೀಡಿದ್ದರು.

ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆ
ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ನಾಲ್ಕು ಜನರ ವಿರುದ್ಧ 9 ಐಪಿಸಿ ಸೆಕ್ಷನ್ 120ಬಿ, 197, 166, 167, 169, 200, 417, 409, 420 ಹಾಗೂ ಸೆಕ್ಷನ್ 468] ಪ್ರಕರಣ ದಾಖಲಿಸಲಾಗಿದೆ. ಮೈಸೂರಿನ ಸಿವಿಲ್ ನ್ಯಾಯಾಲಯವು ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಲು ಆದೇಶ ನೀಡಿತ್ತು. ಆದರೆ, ಈಗ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಕೆಯಾಗಿದೆ.

ತಮ್ಮ ಪ್ರಭಾವ ಬಳಸಿ ಡಿನೋಟಿಫೈ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಈ ಕೃಷಿ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿತ್ತು. ಆದರೆ, ಈ ಜಾಗವನ್ನು ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಡಿನೋಟಿಫೈ ಮಾಡಿಸಿದ್ದಲ್ಲದೆ, ಜಾಗ ಖರೀದಿಸಿ ಮನೆ ಕಟ್ಟಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ, ಗ್ರಾಮ ಪಂಚಾಯಿತಿಯಿಂದ ಅನುಮತಿ ಕೂಡಾ ಸಮರ್ಪಕವಾಗಿ ಸಿಕ್ಕಿಲ್ಲ ಎಂದು ಆರೋಪಿಸಲಾಗಿತ್ತು.

ಸಿಬಿಐ ತನಿಖೆಗೂ ಮನವಿ ಸಲ್ಲಿಸಲಾಗಿತ್ತು
ಮೈಸೂರಿನ ವಿಜಯನಗರದಲ್ಲಿರುವ ಸಿದ್ದರಾಮಯ್ಯ ನಿವಾಸವೇ ಈಗ ವಿವಾದದ ಕೇಂದ ಬಿಂದು. ಈ ಮನೆಯನ್ನು ಕೃಷಿಭೂಮಿಯಲ್ಲಿ ನಿರ್ಮಿಸಲಾಗಿದೆ. ಮನೆ ಜಾಗ ಖರೀದಿ, ನಿರ್ಮಾಣ, ಅನುಮತಿ ಎಲ್ಲದರಲ್ಲಿ ಅಕ್ರಮವಾಗಿದೆ ಎಂದು ದೂರಿದ್ದರು.
ಈ ದೂರಿನ ಕುರಿತು ತನಿಖೆ ನಡೆಸಿದ್ದ ಪೊಲೀಸರು 2018ರ ನವೆಂಬರ್ ಮೊದಲ ವಾರದಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲವೆಂದು ತಿಳಿಸಿದ್ದರು. ಇದರಿಂದಾಗಿ ಸಿದ್ದರಾಮಯ್ಯನವರಿಗೆ ಬಿಗ್ ರಿಲೀಫ್ ಸಿಕ್ಕಿತ್ತು. ಸಿದ್ದರಾಮಯ್ಯ ವಿರುದ್ಧದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಕುರಿತು ಮೈಸೂರು ಪೊಲೀಸ್ ಆಯುಕ್ತರಿಗೆ ಪೊಲೀಸ್ ಮಹಾನಿರ್ದೇಶಕರು(ಡಿಜಿ -ಐಜಿಪಿ) ಪತ್ರ ಬರೆದಿದ್ದರು.












Click it and Unblock the Notifications