ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾಗೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಡಿಸೆಂಬರ್ 09: ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ. ಚುನಾವಾಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಆಸ್ತಿ ವಿವರ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳಲ್ಲಿ ಸತ್ಯಾಂಶಗಳನ್ನು ಮರೆಮಾಚಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ಜಾರಿಯಾಗಿದ್ದು, ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಚುನಾವಣೆಯಲ್ಲಿ ಕನೀಝ್ ಫಾತಿಮಾ ವಿರುದ್ಧ ಜನತಾದಳ (ಸಂಯುಕ್ತ) ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡ ಎ. ಎಸ್. ಶರಣಬಸಪ್ಪ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಾಲಯ ಪ್ರತಿವಾದಿಗಳಾದ ಶಾಸಕಿ, ಕನೀಝ್ ಫಾತಿಮಾ, ಚಂದ್ರಕಾಂತ್, ನಾಸಿರ್ ಹುಸೇನ್, ಮೆಹಬೂಬ್ ಷಾ, ಸೈಯದ್ ಸಜ್ಜದ್ ಅಲಿ, ಅಬ್ದುಲ್ ಹಾಜಿ ಮೊಹಮದ್, ತಾರಾಭಾಯಿ ಭೋವಿ, ಮೊಹಮದ್ ಅಶ್ರಫ್, ಅಬ್ದುರ್ ರಹೀಂ, ಅಬ್ದುಲ್ ಹಮೀದ್ ಬಾಗಬಾನ್ ಮತ್ತು ಮುಜಾಹಿದ್ ರೌಫ್ ಮಜ್ಹರಿ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ವಿಚಾರಣೆ ವೇಳೆ ಕನೀಝ್ ಫಾತಿಮಾ ಪರ ಹಾಜರಾದ ವಕೀಲರು ಆಕ್ಷೇಪಣೆ ಸಲ್ಲಿಸಲು ಸಮಯಾವಕಾಶ ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, 4 ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ಅರ್ಜಿಯಲ್ಲಿ ಆಕ್ಷೇಪವೇನು?; ರಾಜ್ಯ ವಿಧಾನಸಭೆಗೆ 2023ರ ಮೇ 10ರಂದು ನಡೆದ ಚುನಾವಣೆಯಲ್ಲಿ ಕನೀಝ್ ಫಾತಿಮಾ ಕಲಬುರಗಿ ಉತ್ತರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇವರು ಚುನಾವಣೆಗೆ ಸ್ಪರ್ಧಿಸುವ ವೇಳೆ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ತಮ್ಮ ಸ್ಥಿರಾಸ್ತಿ, ಶೇರುಗಳು ಹಾಗೂ ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳಲ್ಲಿ ಸತ್ಯಾಂಶದ ವಿವರಗಳನ್ನು ನೀಡಿಲ್ಲ ಎಂದು ಅರ್ಜಿಯಲ್ಲಿ ಅಕ್ಷೇಪಿಸಲಾಗಿದೆ.
ಅಲ್ಲದೆ, ಇದು ಜನಪ್ರತಿನಿಧಿಗಳ ಕಾಯ್ದೆಯ ಉಲ್ಲಂಘನೆ. ಆದ್ದರಿಂದ, ಇವರ ಆಯ್ಕೆಯನ್ನು ಅನೂರ್ಜಿತಗೊಳಿಸಿ ಇವರ ಸಮೀಪದ ಪ್ರತಿಸ್ಪರ್ಧಿಯಾಗಿ ಎರಡನೇ ಅತಿಹೆಚ್ಚು ಮತ ಪಡೆದ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.












Click it and Unblock the Notifications