Siddaramaiah: ಇದು ಪ್ರಾಸಿಕ್ಯೂಷನ್ಗೆ ಅಲ್ಲ, ಪ್ರಾಥಮಿಕ ತನಿಖೆಗೆ ಅಷ್ಟೆ: ಎಂಬಿ ಪಾಟೀಲ್
ಬೆಂಗಳೂರು, ಸೆಪ್ಟಂಬರ್ 24: ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ನೀರ್ಣಯ ಎತ್ತಿ ಹಿಡಿದ ಹೈಕೋರ್ಟ್ ತೀರ್ಪಿನ ಕುರಿತು ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರದ ಕಾನೂನು ಹೋರಾಟ, ತನಿಖೆ ಕುರಿತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ ಅವರು ಪ್ರತಿಕ್ರಿಯಿಸಿದ್ದಾರೆ. ರಾಜ್ಯಪಾಲರದ್ದು ಸೆಲೆಕ್ಟಿವ್ ವರ್ತನೆ ಎಂದು ಅವರು ಗುಡುಗಿದ್ದಾರೆ.
ಮಂಗಳವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿಯ ಯಡಿಯೂರಪ್ಪ ಸೇರಿದಂತೆ ಹಲವರು ಜಾಮೀನಿನ ಮೇಲೆ ಓಡಾಡುತ್ತಿದ್ದಾರೆ. ರಾಜ್ಯಪಾಲರು ಬಹಳ 'ಸೆಲೆಕ್ಟೀವ್' ಆಗಿ ವರ್ತಿಸುತ್ತಿರುವುದು ಸರಿಯಲ್ಲ. ಇದನ್ನು ನಾವು ಒಪ್ಪುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಳಿಸಿ ಹೈಕೋರ್ಟ್ ತೀರ್ಪನ್ನು ಪ್ರಕಟಿಸಿದೆ. ಸದ್ಯ ನ್ಯಾಯಾಲಯವು ಪ್ರಾಥಮಿಕ ತನಿಖೆಗೆ ಅನುಮತಿ ಸೂಚಿಸಿದೆಯೇ ಹೊರತು ರಾಜ್ಯಪಾಲರ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿಲ್ಲ. ಇದೆಲ್ಲವನ್ನು ನಾವು ರಾಜಕೀಯವಾಗಿ ಜೊತೆ ಜೊತೆಗೆ ಕಾನೂನಾತ್ಮಕವಾಗಿಯೂ ಎದುರಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ವಿರುದ್ಧ ಅನುಕೂಲಸಿಂಧು ನಿರ್ಧಾರ
ಜೆಡಿಎಸ್ ನಾಯಕ ಕೇಂದ್ರದ ಹಾಲಿ ಸಚಿವ ಎಚ್ಡಿ ಕುಮಾರಸ್ವಾಮಿ, ಬಿಜೆಪಿ ಮಾಜಿ ಸಚಿವ ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಮುಗಿದಿದೆ. ಹೀಗಿದ್ದರೂ ರಾಜ್ಯಪಾಲರು ಆ ಪ್ರಕರಣಗಳ ಬಗ್ಗೆ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವರು ಅನುಕೂಲಸಿಂಧು ತೀರ್ಮಾನ ಕೈಗೊಂಡಿದ್ದಾರೆ. ಇದೆಂತಹ ನೈತಿಕತೆ ಎಂದು ಅವರು ಪ್ರಶ್ನೆ ಮಾಡಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರದ್ದ ತಪ್ಪಿಲ್ಲ. ಇಡೀ ಬೆಳವಣಿಗೆಗಳ ಹಿಂದೆ ಕೇಂದ್ರ ಬಿಜೆಪಿ ಸರ್ಕಾರದ ಪಾತ್ರ ಇದೆ ಎಂದು ರಾಜ್ಯ ಷಡ್ಯಂತ್ರದ ಅನುಮಾನ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಅಸ್ಥಿರತೆ ಸೃಷ್ಟಿಸಲು ಯತ್ನ
ದೆಹಲಿ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ಕೊನೆಗೆ ಏನಾಯಿತು?. ಸುಪ್ರೀಂ ಕೋರ್ಟ್ ಕೊನೆಗೆ ಛೀಮಾರಿ ಹಾಕಿತು. ಹಲವು ರಾಜ್ಯಗಳಲ್ಲಿ ಅಸ್ಥಿರತೆ ಸೃಷ್ಟಿಸಿರುವ ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದಲ್ಲಿ ಅಂತಹುದೇ ಯತ್ನವನ್ನು ನಡೆಸುತ್ತಿದೆ ಎಂದು ಅವರು ಆರೋಪಿಸಿದರು.
ಸದ್ಯ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮುಂದೆ ಏನು ಮಾಡಬೇಕೆಂದು ಮುಖ್ಯಮಂತ್ರಿಗಳೇ ತೀರ್ಮಾನಿಸುತ್ತಾರೆ. ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು, ಸಂಪುಟ ಸದಸ್ಯರು ಅವರ ಜೊತೆ ನಿಂತು ಬೆಂಬಲಿಸುತ್ತೇವೆ ಎಂದು ತಿಳಿಸಿದರು.
ಸಿಎಂ ರಾಜೀನಾಮೆಗೆ ವಿ.ಸೋಮಣ್ಣ ಆಗ್ರಹ
ಇನ್ನೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಪ್ರತಿಕ್ರಿಯಿಸಿ, ಕಾನೂನಿನ ಮೇಲೆ ಗೌರವ ಇರುವ ಸಿಎಂ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಇತ್ತ ಬಿಜೆಪಿ ನಾಯಕರು, ಕಾರ್ಯಕರ್ತರಿಂದ ಸಿಎಂ ಸ್ಥಾನದಿಂದ ಕೆಳಗಿಳಿಯುವಂತೆ ಕೂಡಲೇ ರಾಜೀನಾಮೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.












Click it and Unblock the Notifications