ಅನಧಿಕೃತ ಜಾಹೀರಾತು ತೆರವು ವಿಫಲ: ಬಿಬಿಎಂಪಿ, ಸರ್ಕಾರಕ್ಕೆ ಹೈಕೋರ್ಟ್ ಕ್ಲಾಸ್
ಬೆಂಗಳೂರು, ಜುಲೈ 27: ಬೆಂಗಳೂರು ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳಿಗೆ ಕಡಿವಾಣ ಹಾಕುವಲ್ಲಿ ಮತ್ತು ನ್ಯಾಯಾಲಯದ ಆದೇಶಗಳನ್ನು ಪಾಲಿಸುವಲ್ಲಿ ವಿಫಲವಾಗಿರುವ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರವನ್ನು ಕರ್ನಾಟಕ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ನಗರದಲ್ಲಿ ಅನಧಿಕೃತ ಜಾಹೀರಾತು ಫಲಕ, ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ಗಳ ಹಾವಳಿ ತಡೆಯಲು ಸರ್ಕಾರ ಮತ್ತು ಬಿಬಿಎಂಪಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಮಾಯಿಗೇಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಇದೇ ವಿಚಾರವಾಗಿ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಅಸಡ್ಡೆಯನ್ನು ಸಹಿಸುವುದಿಲ್ಲ: ಕಳೆದ ವಿಚಾರಣೆ ಸಂದರ್ಭದಲ್ಲಿ ಅನಧಿಕೃತ ಜಾಹೀರಾತು ಫಲಕಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನ್ಯಾಯಾಲಯ ಕಾಲ-ಕಾಲಕ್ಕೆನೀಡಿದ ಆದೇಶಗಳನ್ನು ಪಾಲಿಸಲು ವಿಫಲವಾಗಿರುವ ಹಿನ್ನೆಲೆಯಲ್ಲಿ ನಿಮ್ಮ ವಿರುದ್ದ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಏಕೆ ಜರುಗಿಸಬಾರದು? ಎಂದು ವಿವರಣೆ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್ ಹೇಳಿತ್ತು.
ಅದರಂತೆ ಬಿಬಿಎಂಪಿ ಹಾಗೂ ನಗರ ಪೊಲೀಸ್ ಆಯುಕ್ತರ ಪ್ರಮಾಣ ಪತ್ರವನ್ನು ಪರಿಶೀಲಿಸಿದ ನ್ಯಾಯಪೀಠ, ನ್ಯಾಯಾಲಯ ಕೇಳಿದ್ದ ವಿಷಯದ ಬಗ್ಗೆ ಪ್ರಮಾಣ ಪತ್ರದಲ್ಲಿ ಒಂದಕ್ಷರವೂ ಹೇಳಿಲ್ಲ. ಎಲ್ಲೂ ಚಕಾರ ಎತ್ತಿಲ್ಲ, ಇದನ್ನು ನ್ಯಾಯಾಲಯ ಸಹಿಸುವುದಿಲ್ಲ. ಬಹಳ ಗಂಭೀರವಾಗಿ ಇದನ್ನು ಪರಿಗಣಿಸಲಾಗುವುದು. ಕೋರ್ಟ್ ಆದೇಶಗಳಂದರೆ ನಿಮಗೆ ಅಷ್ಟು ಅಸಡ್ಡೆಯೇ? ಎಂದು ಪ್ರಶ್ನಿಸಿತು.
ಬಿಬಿಎಂಪಿ ಪರ ವಕೀಲರು, ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ನೀವು ಅನಧಿಕೃತ ಜಾಹೀರಾತು ಫಲಕಗಳನ್ನು ತೆಗೆಯುವುದಕ್ಕೆ ಕ್ರಮ ಕೈಗೊಳ್ಳುವ ಬದಲು, ಅನಧಿಕೃತ ಜಾಹೀರಾತು ಫಲಕಗಳಿಗೆ ಅನುಮತಿ ನೀಡುವ ಕೆಲಸ ಮಾಡಿದ್ದೀರಿ ಎಂದು ಬಿಬಿಎಂಪಿ ಪರ ವಕೀರನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿತು. ಕ್ಷಮೆ ಇರಲಿ, ವಿವರವಾದ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದರು.
ಇನ್ಸ್ಪೆಕ್ಟರ್ಗಳು ನೇಮಕ: ಸರ್ಕಾರದ ಪರ ವಕೀಲರು, ಪೊಲೀಸ್ ಇಲಾಖೆಯೂ ಬಹಳ ಗಂಭೀರವಾಗಿ ಈ ವಿಚಾರ ತೆಗೆದುಕೊಂಡಿದ್ದು, ಪ್ರತಿ ವಲಯದಲ್ಲಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ದೂರು ಬಂದರೆ, ಎಫ್ಐಆರ್ ದಾಖಲಿಸಿಕೊಳ್ಳಲಾಗುತ್ತದೆ. ಕಳೆದ ಒಂದು ತಿಂಗಳಲ್ಲಿ 230 ಎಫ್ಐಆರ್ಗಳನ್ನು ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಅನಧಿಕೃತ ಜಾಹೀರಾತು ಫಲಕಗಳ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಅದಕ್ಕೂ ಅಸಮಧಾನ ವ್ಯಕ್ತಪಡಿಸಿದ ನ್ಯಾಯಪೀಠ, ದೂರು ಬಂದರೆ ಎಫ್ಐಆರ್ ದಾಖಲಿಸಿಕೊಳ್ಳುವುದಷ್ಟೇ ನಿಮ್ಮ ಕೆಲಸವೇ?. ಸ್ವಯಂಪ್ರೇರಿವಾಗಿ ನೀವೇನೂ ಮಾಡುವುದಿಲ್ಲ ಎಂದರು. ಅದಕ್ಕೆ ಎಫ್ಐಆರ್ ದಾಖಲಿಸಿಕೊಂಡು ಸಂಬಂಧಪಟ್ಟವರಿಗೆ ನೋಟಿಸ್ ನೀಡಲಾಗುತ್ತದೆ. ತೆರವು ಕಾರ್ಯಚರಣೆಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತದೆ ಎಂದು ಸರ್ಕಾರದ ಪರ ವಕೀಲರು ಸಮಜಾಯಿಷಿ ನೀಡಿದರು. ಅಲ್ಲದೆ ಜಾಹೀರಾತಿಗೆ ಸಂಬಂಧಿಸಿದಂತೆ ಹೊಸ ನೀತಿ ತರಲಾಗಿದ್ದು, ಕರಡು ಪ್ರಕಟಿಸಿ ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗಿದೆ ಎಂದು ವಿವರಣೆ ನೀಡಿದರು.
ಅರ್ಜಿದಾರರ ಪರ ವಕೀಲ ಜಿ. ಆರ್. ಮೋಹನ್ ವಾದ ಮಂಡಿಸಿ, ಪ್ರಕರಣ ಸಂಬಂಧ 2017ರಿಂದ ಕಾಲಕಾಲಕ್ಕೆ ನ್ಯಾಯಾಲಯ ಆದೇಶ, ನಿರ್ದೇಶನಗಳನ್ನು ನೀಡುತ್ತಾ ಬಂದಿದೆ. ಇದೇ ಜುಲೈ 8ರಂದು ವಿವರವಾದ ಆದೇಶ ಹೊರಡಿಸಿದೆ. ಆದರೂ ಕೂಡ ಪಾಲಿಕೆಯಾಗಲಿ, ಸರ್ಕಾರವಾಗಲಿ ಯಾವುದೇ ರೀತಿಯಲ್ಲಿ ಸೂಕ್ತ ಕ್ರಮ ಜರುಗಿಸಿಲ್ಲ. ಇದರಿಂದಾಗಿ ಸಂಚಾರ ದಟ್ಟಣೆ ಸೇರಿದಂತೆ ಹಲವು ರೀತಿಯಲ್ಲಿ ತೊಂದರೆ ಉಂಟಾಗುತ್ತಿದೆ ಎಂದರು.












Click it and Unblock the Notifications