ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಶಿಕ್ಷಕನಿಗಿಲ್ಲ ಜಾಮೀನು
ಬೆಂಗಳೂರು, ಮೇ 28; ದೇಶದಲ್ಲಿ ಶಿಕ್ಷಕರನ್ನು ದೇವರ ಸ್ಥಾನದಲ್ಲಿ ನೋಡಲಾಗುತ್ತಿದೆ. ಆದರೆ ಅಂತಹ ಶಿಕ್ಷಕರೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆ ಹೇಗೆ? ಎಂದು ಕರ್ನಾಟಕ ಹೈಕೋರ್ಟ್ ಪ್ರಶ್ನಿಸಿದೆ.
ಅಲ್ಲದೇ, ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುವಂತಹ ಪ್ರಸಂಗಗಳು ಅತ್ಯಂತ ಘೋರ ಅಪರಾಧವಾಗಿದೆ ಎಂದು ಅಭಿಪ್ರಾಯ ಪಟ್ಟಿರುವ ನ್ಯಾಯಾಲಯ, ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಶಿಕ್ಷಕನೊಬ್ಬನಿಗೆ ಜಾಮೀನು ನೀಡಲು ನಿರಾಕರಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಮಧುಗಿರಿಯ ಶಿಕ್ಷಕ ಸಿ. ಮಂಜುನಾಥ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಅವರ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
ಅಲ್ಲದೇ, ಆರೋಪಿ ಶಿಕ್ಷಕರಾಗಿದ್ದು ಸಮಾಜದಲ್ಲಿ ತಮ್ಮ ಸ್ಥಾನಮಾನವನ್ನು ನೋಡದೇ ಅವರು ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಿದ್ದಾರೆ. ಅರ್ಜಿದಾರರ ನಡತೆಯಿಂದ ಪೋಷಕರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುವ ಸ್ಥಿತಿ ಇದೆ. ಜತೆಗೆ, ದೇಶದಲ್ಲಿ ಶಿಕ್ಷಕರನ್ನು ದೇವರು ಎಂದು ಪರಿಗಣಿಸಲಾಗುತ್ತಿದ್ದು, ಅವರಿಗೆ ದೇವರಿಗೆ ನೀಡುವ ಗೌರವ ನೀಡಲಾಗುತ್ತದೆ ಎಂದು ಪೀಠ ಅಭಿಪ್ರಾಯ ಪಟ್ಟು ಅರ್ಜಿ ವಜಾಗೊಳಿಸಿದೆ.

ಅರ್ಜಿದಾರರ ವಾದವೇನು?; ಅರ್ಜಿದಾರ ಶಿಕ್ಷಕರನ್ನು ಪ್ರತಿನಿಧಿಸಿದ್ದ ವಕೀಲರು, ಶಾಲೆಯ ಸುತ್ತಿನ ಜಾಗದಲ್ಲಿ ಗ್ರಾಮಸ್ಥರು ಅಂಗಡಿ ನಡೆಸುತ್ತಿದ್ದಾರೆ. ಈ ಸಂಬಂಧ ಕಳಕಳಿ ವ್ಯಕ್ತಪಡಿಸಿದ್ದರ ಪರಿಣಾಮ ತಮ್ಮ ಕಕ್ಷಿದಾರರನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈ ರೀತಿಯ ಆರೋಪ ಸಂಬಂಧ ನಮ್ಮ ಕಕ್ಷಿದಾರರ ವಿರುದ್ಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಅರ್ಜಿದಾರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ತಮ್ಮ ಮಕ್ಕಳನ್ನು ಪ್ರೇರೇಪಿಸಿ ಪೊಲೀಸರಿಗೆ ಸುಳ್ಳು ಹೇಳಿಕೆ ಕೊಡಿಸಲಾಗಿದೆ. ಹಾಗಾಗಿ ಅರ್ಜಿದಾರ ಶಿಕ್ಷೆಕನಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದ್ದರು.
ಆದರೆ ಸರ್ಕಾರದ ಪರ ವಕೀಲರು, ಹಲವು ಮಕ್ಕಳ ಮೇಲೆ ಶಿಕ್ಷಕ ಕ್ರೌರ್ಯ ವೆಸಗಿರುವ ಆರೋಪವಿದೆ. ಅಲ್ಲದೆ, ಪ್ರಕರಣದಲ್ಲಿ ಸಂತ್ರಸ್ತರಾಗಿರುವವರು ಶಾಲಾ ಆವರಣದಲ್ಲಿ ಅಂಗಡಿಯನ್ನಿಟ್ಟವರಲ್ಲ. ಜಾಮೀನು ಪಡೆಯುವುದಕ್ಕಾಗಿ ಕಟ್ಟು ಕತೆ ಕಟ್ಟಿದ್ದಾರೆ. ಆದ್ದರಿಂದ ಅರ್ಜಿದಾರರಿಗೆ ಜಾಮೀನು ನೀಡಬಾರದು ಎಂದು ನ್ಯಾಯ ಪೀಠಕ್ಕೆ ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ; ಅರ್ಜಿದಾರು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬೊರಗುಂಟೆ ಗ್ರಾಮದಲ್ಲಿ ಸುಮಾರು 7 ವರ್ಷಗಳ ಕಾಲ ಸಹಾಯಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಾಲ್ಕರಿಂದ ಆರನೇ ತರಗತಿಯವರೆಗಿನ ಹೆಣ್ಣು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪವನ್ನು ಎದುರಿಸುತ್ತಿದ್ದರು. ಈ ಸಂಬಂಧದ ಗ್ರಾಮಸ್ಥರು ಮಧುಗಿರಿಯ ಕ್ಷೇತ್ರ ಶಿಕ್ಷಣಾಧಿಕಾರಿಗೆ (ಬಿಇಒ) ದೂರು ನೀಡಿದ್ದರು.
ಈ ಕುರಿತಂತೆ ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಅವರು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ್ದರು. ಈ ವೇಳೆ ಕೆಲ ವಿದ್ಯಾರ್ಥಿನಿಯರು ಸಿಡಿಪಿಒ ಎದುರಲ್ಲಿ ಶಿಕ್ಷಕ ನಮ್ಮ ದೇಹದ ಖಾಸಗಿ ಭಾಗಗಳನ್ನು ಮುಟ್ಟುತ್ತಾರೆ. ಅಸಭ್ಯವಾದ ಪದಗಳನ್ನು ಬಳಸಿ ಮಾತನಾಡುತ್ತಾರೆ ಎಂಬುದಾಗಿ ಆರೋಪಿಸಿದ್ದರು.
ಈ ಸಂಬಂಧ ಬಿಇಒ ಬಡವನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ದೂರಿನ ಸಂಬಂಧ ಪೊಲೀಸರು ಪೋಕ್ಸೊ ಕಾಯಿದೆ ಸೆಕ್ಷನ್ ಗಳಾದ 8 (ಲೈಂಗಿಕ ದೌರ್ಜನ್ಯ) ಮತ್ತು 12 (ಲೈಂಗಿಕ ಕಿರುಕುಳ) ಅಡಿ ಪ್ರಕರಣ ದಾಖಲಿಸಿದ್ದರು. ಜಾಮೀನು ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ತ್ವರಿತಗತಿಯ ವಿಶೇಷ ನ್ಯಾಯಾಲಯ ವಜಾಗೊಳಿಸಿತ್ತು. ಅಲ್ಲದೆ. ನ್ಯಾಯಾಂಗ ಬಂಧನಕ್ಕೆ ವಹಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.












Click it and Unblock the Notifications