Karnataka Milk Federation: ಕೆಎಂಎಫ್ನ 487 ಹುದ್ದೆಗಳ ನೇಮಕಕ್ಕೆ (KMF) ಹೈಕೋರ್ಟ್ನಿಂದ ಬ್ರೇಕ್
ನೇಮಕಾತಿಯಲ್ಲಿ ಭಾರೀ ಭ್ರಷ್ಟಾಚಾರ ನಡೆದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್) ನಡೆಸುತ್ತಿದ್ದ 487 ಹುದ್ದೆಗಳ ನೇಮಕಕ್ಕೆ ಬ್ರೇಕ್ ಹಾಕಿದೆ.
ಬೆಂಗಳೂರು, ಮಾರ್ಚ್ 18: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಹೈಕೋರ್ಟ್ ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್) ನಡೆಸುತ್ತಿದ್ದ 487 ಹುದ್ದೆಗಳ ನೇಮಕಕ್ಕೆ ಬ್ರೇಕ್ ಹಾಕಿದೆ.
ನೇಮಕದಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಅಭ್ಯರ್ಥಿಗಳ ಅಂಕಗಳನ್ನು ತಿದ್ದಲು ಪ್ರತಿ ಹುದ್ದೆಗೆ 30ರಿಂದ 50 ಲಕ್ಷ ರೂಪಾಯಿಗಳವರೆಗೆ ಲಂಚ ಪಡೆಯಲಾಗಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್ ಶುಕ್ರವಾರ ಈ ಆದೇಶ ನೀಡಿದೆ.

ನ್ಯಾಯಾಲಯ ನೇಮಕಾತಿಗೆ ತಡೆಯಾಜ್ಞೆ ನೀಡಿರುವುದಲ್ಲದೆ, ಮುಂದಿನ ವಿಚಾರಣೆವರೆಗೆ ಅಂತಿಮ ನೇಮಕಾತಿ ಪಟ್ಟಿ ಪ್ರಕಟಿಸಬಾರದು ಎಂದು ತಾಕೀತು ಮಾಡಿದೆ. ಹಾಗಾಗಿ ಅಂತಿಮ ಪಟ್ಟಿ ಪ್ರಕಟಣೆ ನಿರೀಕ್ಷೆಯಲ್ಲಿದ್ದ ಕೆಎಂಎಫ್ಗೆ ಹಿನ್ನಡೆಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಐತಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ಸೇರಿ ಐದು ಸಂಘಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ಹಿರಿಯ ನ್ಯಾ. ಬಿ.ವೀರಪ್ಪ ಹಾಗೂ ನ್ಯಾ. ವೆಂಕಟೇಶ್ ಟಿ.ನಾಯಕ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.
ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿದ ಬಳಿಕ ಸರ್ಕಾರ, ಕೆಎಂಎಫ್, ಗುಜರಾತ್ ಮೂಲದ ನೇಮಕಾತಿ ಏಜೆನ್ಸಿ ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್ ಮತ್ತು ಸಿಐಡಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪರ ವಕೀಲರು, ಈ ಅಕ್ರಮ ನೇಮಕದ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸಿಐಡಿಗೆ ನಿರ್ದೇಶನ ನೀಡಬೇಕು. ಜೊತೆಗೆ ತನಿಖೆ ಮುಗಿಯುವವರೆಗೆ ನೇಮಕ ತಡೆ ಹಿಡಿಯುವಂತೆ ಕೋರಿದ್ದ ಮನವಿಯನ್ನು ಪುರಸ್ಕರಿಸುವಂತೆಯೂ ನಿರ್ದೇಶನ ನೀಡಬೇಕೆಂದರು.
ನೇಮಕದಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ. ಲಿಖಿತ ಪರೀಕ್ಷೆಯಲ್ಲಿ ಕನ್ನಡವೂ ಒಂದು ವಿಷಯವಾಗಿದೆ, ಆದರೆ ನೇಮಕ ಪರೀಕ್ಷೆಗಳನ್ನು ನಡೆಸಿ ಅನುಭವ ಇಲ್ಲದ, ಕನ್ನಡದ ಬಗ್ಗೆ ಜ್ಞಾನವಿಲ್ಲ, ಗುಜರಾತ್ನ ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ ಮೆಂಟ್ಗೆ ಹೊಣೆ ನೀಡಲಾಗಿದೆ. ಅದಕ್ಕೂ ಮುಖ್ಯವಾಗಿ ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಸಂದರ್ಶಕರಿಗೆ ನೀಡಿದ್ದಾರೆ. ಇದು ನಿಯಮ ಬಾಹಿರ. ಹಾಗಾಗಿ ತಡೆ ನೀಡಬೇಕೆಂದರು.
ಇನ್ನು ಅಂಕಗಳನ್ನು ತಿದ್ದಲಾಗಿದೆ. ಅದಕ್ಕಾಗಿ ಹಲವು ಅಭ್ಯರ್ಥಿಗಳಿಗೆ ಹಣಕ್ಕೆ ಬೇಡಿಕೆಯೊಡ್ಡಲಾಗಿದೆ. ಪ್ರತಿ ಅಭ್ಯರ್ಥಿಗೆ ಸುಮಾರು 30 ಲಕ್ಷದಿಂದ 50 ಲಕ್ಷ ರೂಗಳವರೆಗೆ ಲಂಚ ಪಡೆಯಲಾಗಿದೆ. ನೇಮಕಾತಿಗಳು ಭಾರೀ ಅಕ್ರಮ ನಡೆದಿದೆ ಎಂದು ಆರೋಪಗಳ ಬಗ್ಗೆ ಕೆಎಂಎಫ್ಗೆ ಮನವಿ ಸಲ್ಲಿಸಿದ್ದರೂ ಏನೂ ಪ್ರಯೋಜನವಾಗಿಲ್ಲ. ಜೊತೆಗೆ ಮುಖ್ಯಮಂತ್ರಿಗಳಿಗೂ ನೇಮಕ ತಡೆ ಹಿಡಿಯುವಂತೆ ಕೋರಲಾಗಿದೆ, ಆದರೂ ಏನೂ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಹುದ್ದೆಗಳ ನೇಮಕಕ್ಕೆ ಅನಗತ್ಯ ವೆಚ್ಚ
ಈ 487 ಹುದ್ದೆಗಳ ನೇಮಕದಿಂದ ಪ್ರತಿ ತಿಂಗಳು ವೇತನಕ್ಕೆ 3 ಕೋಟಿ ಮತ್ತು ವರ್ಷಕ್ಕೆ 30ರಿಂದ 40 ಕೋಟಿ ಹೆಚ್ಚುವರಿ ವೆಚ್ಚ ತಗುಲಲಿದೆ. ಈ ಹೆಚ್ಚುವರಿ ಹುದ್ದೆಗಳ ಭರ್ತಿ ಅಗತ್ಯವಿಲ್ಲ. ಆದರೂ ನೇಮಕ ಮಾಡಲಾಗುತ್ತಿದೆ. ಇದರಿಂದ ಹಾಲು ಉತ್ಪಾದಕರ ಸಂಘಗಳ ಮೇಲೆ ಅಧಿಕ ಆರ್ಥಿಕ ಹೊರೆ ಬೀಳಲಿದೆ. ಈ ನೇಮಕದ ಮುಂದೆ ಸಹಕಾರ ಸಂಘಗಳ ಜೊತೆ ಕೆಎಂಎಫ್ ಚರ್ಚೆ ನಡೆಸಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
487 ಹುದ್ದೆಗಳ ನೇಮಕಕ್ಕೆ ಕೆಎಂಎಫ್ 2022ರ ಅ.20ರಂದು ಅಧಿಸೂಚನೆ ಹೊರಡಿಸಿತ್ತು. ಆ ನೇಮಕ ಪ್ರಕ್ರಿಯೆ ನಡೆಸಲು ಗುಜರಾತ್ ಮೂಲದ ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ ಮೆಂಟ್ ಏಜೆನ್ಸಿಯನ್ನು ನೇಮಕ ಮಾಡಿಕೊಂಡಿತ್ತು. ಪರೀಕ್ಷೆ ನಂತರ, 2023ರ ಫೆ.2ರಿಂದ 28ವರೆಗೆ ಸಂದರ್ಶನ ನಡೆಸಿ ಅಂತಿಮ ಪಟ್ಟಿ ಸಿದ್ಧಪಡಿಸಲಾಗಿದೆ.











Click it and Unblock the Notifications