ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ
ಬೆಂಗಳೂರು, ಏಪ್ರಿಲ್ 6: ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) 2020ಯಡಿ ಕನ್ನಡ ಭಾಷೆ ಕಲಿಕೆಯನ್ನು ಕಡ್ಡಾಯಗೊಳಿಸುವಂತಿಲ್ಲ, ಆ ಕುರಿತು ಯಾವುದೇ ನಿಯಮಗಳಿಲ್ಲ ಎಂದು ಕೇಂದ್ರ ಸರ್ಕಾರ ಅಧಿಕೃತ ಹೇಳಿಕೆ ನೀಡಿದ್ದರೂ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ ಕಲಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿತ್ತು. ಸದರಿ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯ ಕುರಿತಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಆದೇಶ(2021ರ ಆಗಸ್ಟ್ 7 ಹಾಗೂ ಸೆಪ್ಟೆಂಬರ್ 15) ಜಾರಿಗೆ ನ್ಯಾಯಾಲಯ ತಡೆಯಾಜ್ಞೆ ಜಾರಿಗೊಳಿಸಿದೆ. ಇದರಿಂದಾಗಿ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ.
ಹಿನ್ನೆಲೆ ಹೀಗಿದೆ:
ಕನ್ನಡ ಕಡ್ಡಾಯ ಕಲಿಕೆಯ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ ಟ್ರಸ್ಟ್ ಹಾಗೂ ವಿದ್ಯಾರ್ಥಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆ ನಡೆಸಲಾಗಿದೆ.
ಕೆಲ ಕಾಲ ವಾದ ಆಲಿಸಿದ ಬಳಿಕ ನ್ಯಾಯಪೀಠ, ಉನ್ನತ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡ್ಡಾಯ ಮಾಡಲಾಗದು. ಕೇಂದ್ರ ಸರ್ಕಾರ ಬೇರೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಕಡ್ಡಾಯ ಮಾಡಲಾಗದು ಎಂದು ಹೇಳಿದೆ, ಹಾಗಾಗಿ ಸರ್ಕಾರದ ಆದೇಶಗಳಿಗೆ ತಡೆ ನೀಡಲಾಗುವುದು ಎಂದು ಆದೇಶಿಸಿತು.

ಎನ್ಇಪಿ ಅಡಿ ಕನ್ನಡ ಕಡ್ಡಾಯವಲ್ಲ: ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಕಡ್ಡಾಯಗೊಳಿಸಿತ್ತು. ಆದರೆ ಈ ಮಧ್ಯೆ, ಕಾಲೇಜುಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ, ಆ ರೀತಿ ಭಾಷೆಯ ಕಲಿಕೆಯನ್ನು ಬಲವಂತ ಮಾಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿತ್ತು.
ಪ್ರಮಾಣಪತ್ರದಲ್ಲಿ "ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಮಹಾತ್ವಾಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಸುಲಭವಾಗಿ ಸಮಗ್ರ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಎನ್ಇಪಿ ಜಾರಿಗೊಳಿಸಲಾಗಿದೆ. ಎನ್ಇಪಿಯಲ್ಲಿ ಭಾರತದ ಭಾಷೆಗಳು, ಕಲೆ ಮತ್ತು ಸಂಸ್ಕೃತಿ ಪ್ರಚಾರ ತಲೆಬರಹ ಹೊಂದಿರುವ 22ನೇ ಅಧ್ಯಾಯವನ್ನು ಭಾರತೀಯ ಭಾಷೆ ಮತ್ತು ಪ್ರಾದೇಶಿಕ ಭಾಷೆಗಳ ಪ್ರಚಾರಕ್ಕೆ ಮೀಸಲಿಡಲಾಗಿದೆ ಎಂದು ತಿಳಿಸಿದೆ.
ಅಲ್ಲದೆ, ಈ ಅಧ್ಯಾಯದ 22.10ನೇ ಪ್ಯಾರಾದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳು ಮಾತೃಭಾಷೆ/ಸ್ಥಳೀಯ ಭಾಷೆಯನ್ನು ಬೋಧನಾ ಭಾಷೆಯನ್ನಾಗಿ ಬಳಕೆ ಮಾಡಬಹುದಾಗಿದ್ದು, ದ್ವಿಭಾಷೆಗೆ ಅವಕಾಶ ನೀಡುತ್ತದೆ. ಎಲ್ಲಾ ಮಟ್ಟದಲ್ಲೂ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅನುಕೂಲಕ್ಕಾಗಿ ಭಿನ್ನ ಬಗೆಯ ಶೈಕ್ಷಣಿಕ ಸಾಫ್ಟ್ ವೇರ್ಗಳನ್ನು ಅಭಿವೃದ್ಧಿಪಡಿಸಿ ಅದು ಎಲ್ಲರಿಗೂ ದೊರೆಯುವಂತೆ ಮಾಡುವ ಉದ್ದೇಶ ಎನ್ಇಪಿಯಲ್ಲಿ ಹೊಂದಲಾಗಿದೆ. ಎನ್ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್ಇಪಿ ನಿಯಮಗಳನ್ನು ಪುನರ್ ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಮರುಪರಿಶೀಲನೆಗೆ ಸೂಚನೆ:
Recommended Video

ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ)2020 ಹಾಗೂ ಅದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂಬುದಾಗಿ ಕೇಂದ್ರ ಸರ್ಕಾರವು ಸ್ಪಷ್ಟಪಡಿಸಿರುವುದರಿಂದ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯದ ಕುರಿತ ನಿಲುವನ್ನು ಮರು ಪರಿಶೀಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗುವುದು ಎಂದು ಹೈಕೋರ್ಟ್ ಆದೇಶಿಸಿತ್ತು.












Click it and Unblock the Notifications