ಬಿಎಸ್ವೈ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ಬೆಂಗಳೂರು, ಸೆ. 16 : ಮಾಜಿ ಮುಖ್ಯಮಂತ್ರಿ ಮತ್ತು ಶಿವಮೊಗ್ಗ ಸಂಸದ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೋಕಾಯುಕ್ತ ಎಸ್ಐಟಿ ಅಧಿಕಾರಿಗಳು ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಿಸಿದ್ದ ಮೂರು ಎಫ್ಐಆರ್ಗಳ ತನಿಖೆಗೆ ತಡೆಯಾಜ್ಞೆ ನೀಡಿದೆ.
ಸಿಎಜಿ ವರದಿ ಆಧರಿಸಿ ಲೋಕಾಯುಕ್ತ ಎಸ್ಐಟಿ ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು, ತನಿಖೆಗೆ ತಡೆಯಾಜ್ಞೆ ನೀಡಬೇಕು ಎಂದು ಯಡಿಯೂರಪ್ಪ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ರತ್ನಕಲಾ ಅವರ ಏಕಸದಸ್ಯ ಪೀಠ ಮೂರು ಪ್ರಕರಣಗಳ ತನಿಖೆಗೆ ತಡೆಯಾಜ್ಞೆ ನೀಡಿದೆ. [ಯಡಿಯೂರಪ್ಪ ವಿರುದ್ಧ 13ನೇ FIR]

ಬೆಂಗಳೂರಿನ ಬಿಳೇಕಹಳ್ಳಿ, ಹಲಗೇವಡೇರಹಳ್ಳಿ, ಮಹಾಲಕ್ಷ್ಮೀ ಬಡಾವಣೆಯ ಜೆ.ಬಿ ಕಾವಲ್ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನಡೆಸುತ್ತಿದ್ದ ತನಿಖೆಗೆ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಆದರೆ, ಎಫ್ಐಆರ್ ರದ್ದುಗೊಳಿಸುವ ಬಗ್ಗೆ ಯಾವುದೇ ಆದೇಶ ನೀಡಿಲ್ಲ. [ಯಡಿಯೂರಪ್ಪಗೆ ಧೈರ್ಯ ತುಂಬಿದ ಎಚ್ಡಿಕೆ]
ಕೆಲವು ತಿಂಗಳ ಹಿಂದೆ ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ಸಾಲು-ಸಾಲು ಎಫ್ಐಆರ್ಗಳು ದಾಖಲಾಗಿದ್ದವು. ತಮ್ಮ ವಿರುದ್ಧ ದುರುದ್ದೇಶಪೂರ್ವಕವಾಗಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲು ಮಾಡುತ್ತಿದ್ದಾರೆ ಎಂದು ಯಡಿಯೂರಪ್ಪ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. [ಯಡಿಯೂರಪ್ಪ ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ]
ಜುಲೈ2ರಂದು ನಡೆದ ವಿಚಾರಣೆ ಸಂದರ್ಭದಲ್ಲಿ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸದ್ಯಕ್ಕೆ ಬಂಧಿಸುವುದಿಲ್ಲ ಎಂದು ಲೋಕಾಯುಕ್ತ ಪೊಲೀಸರು ಹೈಕೋರ್ಟ್ಗೆ ಹೇಳಿಕೆ ನೀಡಿದ್ದರು. ಆಗಲೂ ತನಿಖೆಗೆ ತಡೆ ಕೋರಿ ಯಡಿಯೂರಪ್ಪ ಪರ ವಕೀಲರು ಮನವಿ ಮಾಡಿದ್ದರು. ಆದರೆ, ತಡೆ ನೀಡಲು ಕೋರ್ಟ್ ನಿರಾಕರಿಸಿತ್ತು.












Click it and Unblock the Notifications