ಹುದ್ದೆ ತೋರಿಸದೆ ಅಧಿಕಾರಿ ಎತ್ತಂಗಡಿ, ಸರ್ಕಾರದ ವಿರುದ್ಧ ಹೈಕೋರ್ಟ್ ಗರಂ
ಬೆಂಗಳೂರು,ಆ.31. ಹೊಸ ಹುದ್ದೆ ತೋರಿಸದೆ ಹಾಲಿಯಿರುವ ಹುದ್ದೆಯಿಂದ ಅಧಿಕಾರಿಯನ್ನು ಎತ್ತಂಗಡಿ ಮಾಡುವ ಸರ್ಕಾರದ ಧೋರಣೆಗೆ ಹೈಕೋರ್ಟ್ ಗರಂ ಆಗಿದೆ.
ಅಲ್ಲದೆ,ಸರ್ಕಾರ ವರ್ಗಾವಣೆ ಆದೇಶ ಹೊರಡಿಸುವಾಗ ಕಡ್ಡಾಯವಾಗಿ ಅಧಿಕಾರಿಗಳಿಗೆ ಹೊಸ ಹುದ್ದೆ ತೋರಿಸಲೇಬೇಕು ಎಂದು ಆದೇಶಿಸಿದೆ.
ಸರ್ಕಾರದ ಈ ನಡೆಯಿಂದ ವರ್ಗಾವಣೆಗೊಂಡ ಅಧಿಕಾರಿಗಳು ಸಂಬಂಧಪಟ್ಟ ಇಲಾಖೆ ಮುಂದೆ ಹೋಗಿ ತಮಗೆ ಹುದ್ದೆ ತೋರಿಸುವಂತೆ ಕೋರುವ ಪರಿಸ್ಥಿತಿ ಉದ್ಭವಿಸುತ್ತದೆ. ಹಾಗೆಯೇ, ಅಧಿಕಾರಿಗಳಿಗೆ ಅವರ ಮುಂದಿನ ಹುದ್ದೆಗಳ ಬಗ್ಗೆ ಸುಳಿವೇ ಇಲ್ಲದಂತೆ ಮಾಡುತ್ತದೆ. ಇಂತಹ ಸಮಸ್ಯೆಗೆ ಸರ್ಕಾರ ಸೂಕ್ತ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದೆ.

ಚಾಮರಾಜನಗರ ಜಿಲ್ಲೆಯ ಹನೂರು ಪುರಸಭೆ ಮುಖ್ಯಅಧಿಕಾರಿ ಹುದ್ದೆಯಿಂದ ತಮ್ಮ ವರ್ಗಾವಣೆ ಆಕ್ಷೇಪಿಸಿ ಮೂರ್ತಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಸ್. ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.
ಅರ್ಜಿದಾರರ ವರ್ಗಾವಣೆ ಆದೇಶ ರದ್ದುಪಡಿಸಿರುವ ನ್ಯಾಯಪೀಠ, ವರ್ಗಾವಣೆ ಮುನ್ನ ಹೊಂದಿದ್ದ ಹುದ್ದೆಗೆ ಅರ್ಜಿದಾರರನ್ನು ಮರು ನಿಯೋಜಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿದೆ.
ಎಂ.ಅರುಣ್ ಪ್ರಸಾದ್ ಮತ್ತು ರಾಜ್ಯ ಅಬಕಾರಿ ಆಯುಕ್ತರ ನಡುವಿನ ಪ್ರಕರಣದಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ತೀರ್ಪು ಆಧರಿಸಿ ವರ್ಗಾಣೆ ಸಂಬಂಧ 2017ರ ಮಾ.27ರಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಅಧಿಕಾರಿಗೆ ಹುದ್ದೆ ತೋರಿಸದಿದ್ದರೆ, ಅದಕ್ಕೆ ಕಾರಣವನ್ನು ಲಿಖಿತವಾಗಿ ನಮೂದಿಸಬೇಕು. ಅದು ಸಹ ಆಡಳಿತಾತ್ಮಕ ಕಾರಣಗಳಾಗಿರಬೇಕು. ಕಾರಣ ನಮೂದಿಸಿದ ನಂತರ ವರ್ಗಾವಣೆ ಆದೇಶವನ್ನು ಇಲಾಖಾ ಮುಖ್ಯಸ್ಥರು ಮರು ಪರಿಶೀಲನೆ ನಡೆಸುವಂತಿರಬೇಕು ಎಂಬುದಾಗಿ ಸರ್ಕಾರದ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ, ವಿಭಾಗೀಯಪೀಠ ತೀರ್ಪಿನಲ್ಲಿ ವ್ಯಕ್ತಪಡಿಸಿದ ಅನಿಸಿಕೆ ಮತ್ತು ಸರ್ಕಾರದ ಸುತ್ತೋಲೆಯ ನಿಯಮಗಳು ಈ ಪ್ರಕರಣದಲ್ಲಿ ಪಾಲನೆಯಾಗಿಲ್ಲ. ಹೊಸ ಹುದ್ದೆಗಳನ್ನು ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಪದ್ಧತಿ ಮರುಕಳಿಸುತ್ತಿದೆ ಎಂದು ಆದೇಶದಲ್ಲಿ ಕೋರ್ಟ್ ಕಿಡಿಕಾರಿದೆ.
ಮರು ನಿಯೋಜನೆ:
ಈ ಪ್ರಕರಣದಲ್ಲಿ ಅರ್ಜಿದಾರರ ಹುದ್ದೆಗೆ ತಮ್ಮನ್ನು ವರ್ಗಾವಣೆ ಮಾಡುವಂತೆ ಪರಶಿವಯ್ಯ ಅವರು ಕೋರಿದ್ದರು. ಆಗ ಹುದ್ದೆ ಖಾಲಿಯಿರಲಿಲ್ಲ. ಶಾಸಕರೊಬ್ಬರ ಪತ್ರದ ಆಧರಿಸಿ ಪರಶಿವಯ್ಯ ವರ್ಗಾವಣೆ ಮಾಡಲಾಗಿದೆ. ಏನೇ ಇದ್ದರೂ ವರ್ಗಾವಣೆ ಪ್ರಕ್ರಿಯೆಯಲ್ಲಿ ನಿಯಮಗಳು ಪಾಲನೆಯಾಗಬೇಕು. ಅರ್ಜಿದಾರರು ವರ್ಗಾವಣೆಯಾಗಿ ಆರು ತಿಂಗಳು ಕಳೆದರೂ ಯಾವುದೇ ಹುದ್ದೆ ತೋರಿಸಿರಲಿಲ್ಲ. ಸಾಮಾನ್ಯ ವರ್ಗಾವಣೆ ಅವಧಿ ನಂತರ ಖಾಲಿಯಿರುವ ಹುದ್ದೆಗಳಿಗೆ ಹೊರತುಪಡಿಸಿ ಬೇರೆ ಯಾವುದೇ ವರ್ಗಾವಣೆ ಮಾಡುವಂತಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅರ್ಜಿದಾರರನ್ನು ಹನೂರು ಪುರಸಭೆ ಮುಖ್ಯ ಅಧಿಕಾರಿಯಾಗಿ ಮರು ನಿಯೋಜಿಸುವಂತೆ ಸರ್ಕಾರಕ್ಕೆ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ:
ಹನೂರು ನಗರಸಭೆ ಮುಖ್ಯ ಅಧಿಕಾರಿ ಹುದ್ದೆಯಿಂದ ಮೂರ್ತಿ ಅವರನ್ನು ವರ್ಗಾವಣೆ ಮಾಡಿ 2021ರ ಡಿ.23ರಂದು ಆದೇಶಿಸಿದ್ದ ಸರ್ಕಾರ, ಆ ಹುದ್ದೆಗೆ ಪರಶಿವಯ್ಯ ಎಂಬುವವರನ್ನು ನಿಯೋಜಿಸಿತ್ತು. ಆದರೆ, ಮೂರ್ತಿ ಅವರಿಗೆ ಹೊಸ ಹುದ್ದೆಯನ್ನು ತೋರಿಸದೆ, ಹುದ್ದೆ ಪಡೆಯುವುದಕ್ಕೆ ಸಂಬಂಧಪಟ್ಟ ಇಲಾಖೆ ಮುಂದೆ ಹಾಜರಾಗುವಂತೆ ಸೂಚಿಸಿತ್ತು. ಈ ಆದೇಶ ಪ್ರಶ್ನಿಸಿ ಮೂರ್ತಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದು ವಿಚಾರಣೆ ಹಂತದಲ್ಲಿರುವಾಗ 2022ರ ಜು.30ರಂದು ಮೂರ್ತಿಗೆ ಉಳ್ಳಾಲ ಪುರಸಭೆಯಲ್ಲಿ ಖಾಲಿಯಿದ್ದ ಹುದ್ದೆ ತೋರಿಸಲಾಗಿತ್ತು. ಅದನ್ನು ಅರ್ಜಿದಾರರು ಪ್ರಶ್ನಿಸಿದ್ದರು.












Click it and Unblock the Notifications