ಮಕ್ಕಳ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರ ನೇಮಕ ಎತ್ತಿಹಿಡಿದ ಹೈಕೋರ್ಟ್
ಬೆಂಗಳೂರು, ನವೆಂಬರ್ 21: ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಹುದ್ದೆಗೆ ಕೆ. ನಾಗಣ್ಣಗೌಡ ಎಂಬುವರನ್ನು ನೇಮಕ ಮಾಡಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಅಲ್ಲದೆ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡವಲ್ಲಿ ಸರ್ಕಾರ ರಚನೆ ಮಾಡಿರುವ ಸಮಿತಿ ಪೂರ್ವಪರ ಆಲೋಚನೆ ಮಾಡಿಯೇ ನೇಮಕ ಮಾಡಿರಲಿದೆ ಎಂದು ಪೀಠ ಅಭಿಪ್ರಾಯ ಪಟ್ಟಿದೆ.
ನಾಗಣ್ಣಗೌಡರ ನೇಮಕ ರದ್ದುಗೊಳಿಸಿ ಹೊಸದಾಗಿ ನೇಮಕ ಪ್ರಕ್ರಿಯೆ ನಡೆಸುವಂತೆ ಕೋರಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಹುದ್ದೆಯ ಆಕಾಂಕ್ಷಿ ವಕೀಲ ಅಶೋಕ್ ಡಿ. ಸನಾದಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಮಾಡಿದೆ.

"ಸರ್ಕಾರದ ನೇಮಕಾತಿಗಳನ್ನು ನ್ಯಾಯಿಕ ಪರಾಮರ್ಶೆ ಮಾಡುವ ಸಂದರ್ಭದಲ್ಲಿ ನ್ಯಾಯಾಲಯಗಳು ಸಮಿತಿಗಳು ಹಾಗೂ ಮೇಲ್ಮನವಿ ನ್ಯಾಯಾಧೀಕರಣದಂತೆ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ. ಸರ್ಕಾರದ ಆಯ್ಕೆ ಸಮಿತಿಗಳು ಅರ್ಹತೆಗಳ ಮಾನದಂಡ ಪರಿಶೀಲನೆ ನಡೆಸುವಲ್ಲಿ ತಪ್ಪೆಸಗಿದ್ದಲ್ಲಿ ಸಾಂವಿಧಾನಾತ್ಮಕ ನ್ಯಾಯಾಲಯ ಮಧ್ಯಪ್ರವೇಶಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ನಿರುಂಕುಶತೆಯಿಂದ ಕೂಡಿದ್ದಲ್ಲಿ ನ್ಯಾಯಾಲಯ ಮದ್ಯಪ್ರವೇಶ ಮಾಡಬಹುದಾಗಿದೆ" ಎಂದು ನ್ಯಾಯಪೀಠ ತಿಳಿಸಿದೆ.
ನಿಯಮ ಉಲ್ಲಂಘನೆಯಾಗಿಲ್ಲ: ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕಕ್ಕೆ ಪರಿಗಣಿಸುವ ಸಂದರ್ಭದಲ್ಲಿ ಮಾನವ ಹಕ್ಕು ಹಾಗೂ ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿರುವವರು ಹಾಗೂ ಕ್ರಿಮಿನಲ್ ಆರೋಪ ಹೊತ್ತಿರುವ ವ್ಯಕಿಯನ್ನು ನೇಮಕ ಮಾಡುವುದಕ್ಕೆ ಅವಕಾಶವಿಲ್ಲ. ಮಕ್ಕಳ ಹಕ್ಕುಗಳ ರಕ್ಷಣಾ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷ ಸೇವೆ ಮಾಡಿರಬೇಕು ಮತ್ತು ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರುವಂತಿಲ್ಲ. ಜತೆಗೆ, ಸರ್ಕಾರದಲ್ಲಿ ಯಾವುದೇ ಲಾಭದಾಯಕ ಹುದ್ದೆಯನ್ನು ಹೊಂದಿರಬಾರದು ಎಂಬುದಾಗಿ ಷರತ್ತುಗಳಿವೆ.
ಆದರೆ, ಪ್ರತಿವಾದಿಯಾಗಿರುವ ನಾಗಣ್ಣಗೌಡ ಬಿಜೆಪಿ ಪಕ್ಷದ ಸದಸ್ಯರಾಗಿದ್ದರೂ, ಆ ಸ್ಥಾನಕ್ಕೆ ರಾಜೀನಾಮೆ ನೀಡಿದ 15 ತಿಂಗಳ ಬಳಿಕ ಅವರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಆ ಹುದ್ದೆಗೆ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ ಸಂದರ್ಭದಲ್ಲಿ ಅವರು ಯಾವುದೇ ರಾಜಕೀಯ ಪಕ್ಷದ ಸದಸ್ಯರಾಗಿರಲಿಲ್ಲ. ಜತೆಗೆ, 2001ರಿಂದ ಮಕ್ಕಳ ಹಕ್ಕುಗಳ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಸಂಬಂಧ ಹಲವು ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ಪಡೆದ ಹಲವು ಪ್ರಶಸ್ತಿಗಳನ್ನು ಪಡೆದ ದಾಖಲೆ ಸಲ್ಲಿಸಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಶೀಲನೆ ನಡೆಸಿ ಸಮಿತಿ ಅವರನ್ನು ಅಂತಿಮವಾಗಿ ನೇಮಕ ಮಾಡಿದೆ.
ಈ ಹಿನ್ನೆಲೆಯಲ್ಲಿ ನಾಗಣ್ಣಗೌಡರನ್ನು ಈ ಹುದ್ದೆಗೆ ನೇಮಕ ಮಾಡಿರುವ ಪ್ರಕ್ರಿಯೆಯಲ್ಲಿ ಯಾವುದೇ ಕಾನೂನುಗಳ ಉಲ್ಲಘನೆ ಮಾಡಿರುವ ಅಂಶಗಳು ಪ್ರಸ್ತುತದ ಪ್ರಕರಣದಲ್ಲಿ ಗೋಚರಿಸುತ್ತಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯ ಪಟ್ಟು ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ಸ್ಥಾನಕ್ಕೆ ಅರ್ಹರನ್ನು ಭರ್ತಿ ಮಾಡುವುದಕ್ಕಾಗಿ ಸರ್ಕಾರ 2022ರ ಜನವರಿ 31 ರಂದು ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗೆ ಅರ್ಜಿದಾರ ಆಶೋಕ್ ಡಿ. ಸನಾದಿ ಮತ್ತು ನಾಗಣ್ಣಗೌಡರು ಅರ್ಜಿ ಸಲ್ಲಿಸಿದ್ದರು. ಸರ್ಕಾರ ನೇಮಕ ಮಾಡಿದ್ದ ಸಮಿತಿ ನಾಗಣ್ಣಗೌಡರನ್ನು ನೇಮಕ ಮಾಡಿ ಆದೇಶಿಸಿತ್ತು.












Click it and Unblock the Notifications