ಕಪ್ಪತಗುಡ್ಡದ ಸುತ್ತ ಗಣಿಗಾರಿಕೆ ನಿಷೇಧ ಸರಿ ಇದೆ: ಹೈಕೋರ್ಟ್
ಬೆಂಗಳೂರು, ಜೂನ್ 26: ಗದಗ ಜಿಲ್ಲೆಯ ಕಪ್ಪತಗುಡ್ಡ ವನ್ಯಜೀವಿಧಾಮ ಗಡಿಯ 1 ಕಿಲೋ ಮೀಟರ್ ಫಾಸಲೆಯಲ್ಲಿ ಕಲ್ಲು, ಮರಳು ಗಣಿಗಾರಿಕೆ ನಿಷೇಧಿಸಿದ್ದ ಹಾಗೂ ಕ್ವಾರಿ ಗುತ್ತಿಗೆಗಳನ್ನು ಅಮಾನತುಪಡಿಸಿದ್ದ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ಅಲ್ಲದೆ, ಸರ್ಕಾರದ ನಿರ್ಧಾರ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಸರಿಯಾಗಿಯೇ ಇದೆ, ಅದರಲ್ಲಿ ಹಸ್ತಕ್ಷೇಪ ಮಾಡಲಾಗದು ಎಂದು ನ್ಯಾಯಾಲಯ ಹೇಳಿದೆ.
ಸರ್ಕಾರದ ಆದೇಶ ಪ್ರಶ್ನಿಸಿ ಎಸ್. ಆರ್. ಬೆಳ್ಳಾರಿ, ಎ. ಜೆ. ಕಳ್ಕೆರೆ ಹಾಗೂ ಶಿವಗಂಗಾ ಸ್ಟೋನ್ ಕ್ರಷಿಂಗ್ ಇಂಡಸ್ಟ್ರೀಸ್ ಸೇರಿ ಹಲವು ಗಣಿಗಾರಿಕೆ ಕಂಪನಿಗಳು ಹಾಗೂ ಅವುಗಳ ಮಾಲೀಕರು ಸಲ್ಲಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ವಜಾಗೊಳಿಸಿದೆ.

ಹೈಕೋರ್ಟ್ ಆದೇಶವೇನು?: ನ್ಯಾಯಪೀಠ, "ಕಪ್ಪತಗುಡ್ಡ ಮೀಸಲು ಅರಣ್ಯವನ್ನು ವನ್ಯಜೀವಿ ಧಾಮವೆಂದು ಅಧಿಸೂಚಿಸಲಾಗಿದೆ. ಇದರಿಂದ ಅದರ ಸುತ್ತಲಿನ 1 ಕಿ. ಮೀ. ಪ್ರದೇಶವು ನಿಷೇಧಿತ ವಲಯವಾಗುತ್ತದೆ. ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ ಇಲ್ಲದೆಯೂ ಸಂರಕ್ಷಿತ ಪ್ರದೇಶದಿಂದ ಒಂದು ಕಿ. ಮೀ. ಜಾಗವನ್ನು ಸಂರಕ್ಷಿಸಬೇಕಾಗುತ್ತದೆ ಎಂದೇ ಪರಿಗಣಿಸಬೇಕಿದೆ. ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ ಪ್ರಕಟಿಸುವುದರಿಂದ ಯಾವುದೇ ಪರಿಣಾಮ ಉಂಟಾಗುವುದಿಲ್ಲ. ಆದ್ದರಿಂದ ಈ ವನ್ಯಜೀವಿ ಧಾಮದ 1 ಕಿ. ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ಚಟುವಟಿಕೆಗಳಿಗೆ ಅನುಮತಿ ನೀಡಲಾಗದು" ಎಂದು ಆದೇಶಿಸಿದೆ.
ಕಪ್ಪತಗುಡ್ಡದ ಮೀಸಲು ಅರಣ್ಯ ಪ್ರದೇಶವನ್ನು ವನ್ಯಜೀವಿಧಾಮವೆಂದು 2019ರಲ್ಲಿ ನೋಟಿಫಿಕೇಷನ್ ಹೊರಡಿಸಿರುವುದರಿಂದ ಅಲ್ಲಿ ಗಣಿಗಾರಿಕೆ ನಿಷೇಧಿತ ವಲಯವೆಂದು ಪರಿಗಣಿಸಬೇಕಿದೆ. ಎಲ್ಲ ಅರ್ಜಿದಾರರ ಕ್ವಾರಿ ಘಟಕಗಳು ಕಪ್ಪತಗುಡ್ಡ ವನ್ಯಜೀವಿಧಾಮದ ಗಡಿಯ 1 ಕಿ. ಮೀ. ವ್ಯಾಪ್ತಿಯಲ್ಲಿದೆ. ಆದ್ದರಿಂದ ಗಣಿಗಾರಿಕೆಗೆ ಅನುಮತಿಸಲಾಗುವುದಿಲ್ಲ. ಅರ್ಜಿದಾರರ ಗುತ್ತಿಗೆ ಅಮಾನತು/ ಸ್ಥಗಿತಗೊಳಿಸಿರುವುದು ಸೂಕ್ತ ಮತ್ತು ಕಾನೂನು ಬದ್ಧವಾಗಿದೆ ಎಂದು ನ್ಯಾಯಪೀಠ ಆದೇಶಿಸಿದೆ.
ಏನಿದು ಪ್ರಕರಣ?: ಗದಗ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾರ್ಯಪಡೆ ಸಮಿತಿ (ಗಣಿ), ಜಿಲ್ಲಾ ಮರಳು ಮೇಲ್ವಿಚಾರಣಾ ಸಮಿತಿ, ಜಿಲ್ಲಾ ಕಲ್ಲು ಕ್ರಷರ್ಗಳ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರ 2022ರ ಸೆ.29ರಂದು ಸಭೆ ನಡೆಸಿ, ಕಪ್ಪತಗುಡ್ಡ ವನ್ಯಜೀವಿಧಾಮ ಗಡಿಯ 1 ಕಿ. ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು, 14 ಕ್ವಾರಿ ಗುತ್ತಿಗೆ ಅಮಾನತು ಮಾಡಲು ಮತ್ತು ಯಾವುದಾದರೂ ನಿಯಮ ಉಲ್ಲಂಘಿಸಿದ್ದರೆ ಗುತ್ತಿಗೆ ರದ್ದುಪಡಿಸಲು ಸರ್ವಾನುಮತದಿಂದ ನಿರ್ಧಾರ ಕೈಗೊಂಡಿತ್ತು.
ನಂತರ ಕಲ್ಲುಕ್ವಾರಿ ಗುತ್ತಿಗೆಗಳನ್ನು ಅಮಾನತುಪಡಿಸಿ 2022ರ ಡಿ.5ರಂದು ಗದಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ಮತ್ತು ಸಕ್ಷಮ ಪ್ರಾಧಿಕಾರ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಕಪ್ಪತಗುಡ್ಡ ವನ್ಯಧಾಮ ಗಡಿಯ 1 ಕಿ. ಮೀ. ವ್ಯಾಪ್ತಿಯಲ್ಲಿ ಪರವಾನಗಿ ಪಡೆದು ಕಲ್ಲು ಹಾಗೂ ಮರಳು ಗಣಿಗಾರಿಕೆ ನಡೆಸುತ್ತಿದ್ದ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.












Click it and Unblock the Notifications