ಹಿಜಾಬ್ ವಿವಾದ: ಶಾಂತಿ, ಸುವ್ಯವಸ್ಥೆ ಕಾಪಾಡಲು ಹೈಕೋರ್ಟ್ ಮನವಿ
ಬೆಂಗಳೂರು, ಫೆಬ್ರವರಿ 08: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಂತೆ ವಿದ್ಯಾರ್ಥಿ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಅಲ್ಲದೆ, ನ್ಯಾಯಾಲಯಕ್ಕೆ ಜನರ ವಿವೇಕದ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಹಾಗಾಗಿ ಅವರು ಯಾವುದೇ ರೀತಿಯಲ್ಲೂ ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ನಡೆದುಕೊಳ್ಳಲಿದ್ದಾರೆ ಎಂದು ಹೈಕೋರ್ಟ್ ಆಶಿಸಿದೆ.
ಮಂಗಳವಾರ ಅರ್ಜಿದಾರರ ವಕೀಲರಿಂದ ಸುಮಾರು 4 ಗಂಟೆ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಬುಧವಾರ ಮಧ್ಯಾಹ್ನಕ್ಕೆ ಮುಂದೂಡಿದೆ.

ನ್ಯಾ.ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏಕಸದಸ್ಯಪೀಠದ ವಿಚಾರಣೆಯನ್ನು ನಡೆಸುತ್ತಿದೆ. ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ವಾದ ಮಂಡನೆ ಪೂರ್ಣಗೊಳಿಸಿದ ನಂತರ ಮಧ್ಯಪ್ರವೇಶಿಸಿ ಮಾತನಾಡಿದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ''ರಾಜ್ಯಾದ್ಯಂತ ಪ್ರತಿಭಟನೆ, ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿವೆ, ಕೆಲವು ಸಂಘಟನೆಗಳು ಇದರ ಲಾಭ ಪಡೆಯುವ ಸಾದ್ಯತೆ ಇದೆ. ಇದು ಕಾನೂನು ಮತ್ತು ಸುವ್ಯವಸ್ಥೆ ಮೇಲೆ ಸಮಸ್ಯೆಯಾಗಬಹುದು. ಹಾಗಾಗಿ ನ್ಯಾಯಾಲಯ ಶಾಂತಿ ಕಾಯ್ದುಕೊಳ್ಳುವಂತೆ ಆದೇಶಿಸಬೇಕು,'' ಎಂದು ಕೋರಿದರು.
ಅಲ್ಲದೆ, ದೆಹಲಿಯಲ್ಲಿ ರೈತರು ಪ್ರತಿಭಟನೆ ವೇಳೆ ಶಾಂತಿ ಕಾಯ್ದುಕೊಳ್ಳುವ ಸಂಬಂಧ ಸುಪ್ರೀಂಕೋರ್ಟ್ ಆದೇಶವನ್ನು ಸಲ್ಲಿಸಿದರು.
ಎಜಿಯ ಈ ವಾದವನ್ನು ಒಪ್ಪಿದ ಅರ್ಜಿದಾರರ ಪರ ವಕೀಲರು, ನಮ್ಮ ಕಕ್ಷಿದಾರರು ಯಾವುದೇ ರೀತಿಯ ಪ್ರತಿಭಟನೆ ಮಾಡುವುದಿಲ್ಲ. ನ್ಯಾಯಾಲಯದ ಆದೇಶಕ್ಕೆ ಕಾಯುತ್ತೇವೆ. ಆದರೆ ಯಾರೂ ದುಷ್ಕರ್ಮಿಗಳು ಕಾನೂನನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡಬಾರದು ಎಂದರು.
ಆಗ ನ್ಯಾಯಮೂರ್ತಿ ''ಹೌದು ದಿನಾ ಟಿವಿಯಲ್ಲಿ ಗಲಾಟೆ, ಬೆಂಕಿ, ರಕ್ತವನ್ನು ನೋಡಿದರೆ ನಮ್ಮ ಮನಸಿನ ಮೇಲೂ ಪ್ರಭಾವ ಬೀರುತ್ತದೆ. ಆಗ ತೀರ್ಪು ನೀಡಲು ಕಷ್ಟವಾಗುತ್ತದೆ,'' ಎಂದರು.
ಎಜಿ ವಾದವನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಂತೆ ಮನವಿ ಮಾಡಿ ವಿಚಾರಣೆಯನ್ನು ಬುಧವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.
Recommended Video
ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ಹಿಜಾಬ್ಗೆ ನಿರ್ಬಂಧಿಸುತ್ತಿರುವುದು ಮೂಲಭೂತ ಹಕ್ಕಿನ ಉಲ್ಲಂಘನೆ, ಶಿಕ್ಷಣ ಹಕ್ಕು ಕಾಯಿದೆಯ ಉಲ್ಲಂಘನೆ. ಇಸ್ಲಾಂನಲ್ಲಿ ಹಿಜಾಬ್ ಧರಿಸುವುದು ಸಾಂಪ್ರದಾಯಿಕ ಅಗತ್ಯ ಪದ್ದತಿ ಎಂದು ವಾದಿಸಿದರು.












Click it and Unblock the Notifications