ಮುಂದಿನ ಚುನಾವಣೆಗೆ ಕ್ಷೇತ್ರ ಘೋಷಣೆ ಮಾಡಿದ ದೇವೇಗೌಡರು!
ತುಮಕೂರು, ಡಿಸೆಂಬರ್ 08; ಜೆಡಿಎಸ್ ವರಿಷ್ಠ ಮತ್ತು ರಾಜ್ಯಸಭಾ ಸದಸ್ಯ ಎಚ್. ಡಿ. ದೇವೇಗೌಡ ಮುಂದಿನ ಚುನಾವಣೆಗೆ ಸ್ಪರ್ಧಿಸುವ ಕ್ಷೇತ್ರವನ್ನು ಘೋಷಣೆ ಮಾಡಿದ್ದಾರೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರವನ್ನು ಬದಲಾವಣೆ ಮಾಡಿ ಅವರು ಸೋಲು ಕಂಡಿದ್ದರು.
ತುಮಕೂರಿನಲ್ಲಿ ಮಾತನಾಡಿದ ಎಚ್. ಡಿ. ದೇವೇಗೌಡರು, "ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ತುಮಕೂರಿನಿಂದಲೇ ಸ್ಪರ್ಧಿಸುವುದಾಗಿ" ಘೋಷಣೆ ಮಾಡಿದರು.
ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಲು ಆಗಮಿಸಿದ್ದ ಅವರು, "ಜೆಡಿಎಸ್ ಪಕ್ಷ ಎಂದರೆ ಕೇವಲ ದೇವೇಗೌಡ, ಎಚ್. ಡಿ. ಕುಮಾರಸ್ವಾಮಿ ಅಲ್ಲ. ನಾನು, ನನ್ನ ಮಗ ಮಾತ್ರ ಪಕ್ಷವನ್ನು ಉಳಿಸಲು ಸಾಧ್ಯವಿಲ್ಲ" ಎಂದು ಹೇಳಿದರು.
2019ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರ ಬಿಟ್ಟು ತುಮಕೂರಿನಿಂದ ಎಚ್. ಡಿ. ದೇವೇಗೌಡರು ಚುನಾವಣಾ ಕಣಕ್ಕಿಳಿದಿದ್ದರು. ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿ ಇದ್ದ ಕಾರಣ ಚುನಾವಣೆಯಲ್ಲಿ ಕಾಂಗ್ರೆಸ್ ಸಹ ಅಭ್ಯರ್ಥಿ ಹಾಕದೇ ದೇವೇಗೌಡರಿಗೆ ಬೆಂಬಲ ನೀಡಿತ್ತು. ಆದರೆ ಚುನಾವಣೆಯಲ್ಲಿ ದೇವೇಗೌಡರು ಸೋಲು ಕಂಡಿದ್ದರು. ಬಳಿಕ ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ನಾನು ಮಾತ್ರ ಚುನಾವಣೆಗೆ ಸ್ಪರ್ಧಿಸುತ್ತೇವೆ
"2023ರ ಲೋಕಸಭೆ ಚುನಾವಣೆ ನಂತರ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಾರೋ, ಇಲ್ಲವೋ ಗೊತ್ತಿಲ್ಲ. ಅದು ಅವರ ಹಣೆ ಬರಹ, ನಾನು ಮಾತ್ರ 2024ರಲ್ಲಿ ಮತ್ತೆ ತುಮಕೂರು ಲೋಕಸಭಾ ಕ್ಷೇತ್ರದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತೇನೆ" ಎಂದು ಎಚ್. ಡಿ. ದೇವೇಗೌಡರು ಹೇಳಿದರು.

ರಾಜ್ಯ ಪ್ರವಾಸ ಮಾಡುತ್ತೇನೆ
ಎಚ್. ಡಿ. ದೇವೇಗೌಡರು, "ನನಗೀಗ 89 ವರ್ಷ. ಹೋರಾಟದ ಶಕ್ತಿ ಕುಂದಿಲ್ಲ, ಇನ್ನೂ ಚೈತನ್ಯವಿದೆ. ಪಕ್ಷ ಉಳಿಸುವ ಛಲದಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ತುಮಕೂರಿನಿಂದಲೇ ಕಣಕ್ಕಿಳಿಸುವುದಾಗಿ" ಘೋಷಣೆ ಮಾಡಿದರು.

ತುಮಕೂರಿನಲ್ಲಿ ಸೋತಿದ್ದ ದೇವೇಗೌಡರು
2019ರ ಲೋಕಸಭೆ ಚುನಾವಣೆಯಲ್ಲಿ ಎಚ್. ಡಿ. ದೇವೇಗೌಡರು ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟು ತುಮಕೂರಿನಿಂದದ ಸ್ಪರ್ಧೆ ಮಾಡಿದ್ದರು. 5,82,788 ಮತಗಳನ್ನು ಪಡೆದು, ಬಿಜೆಪಿಯ ಜಿ. ಎಸ್. ಬಸವರಾಜ ವಿರುದ್ಧ ಸೋಲು ಕಂಡಿದ್ದರು. ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು.

ರಾಜ್ಯಸಭೆಗೆ ಆಯ್ಕೆಯಾದ ದೇವೇಗೌಡರು
2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ಎಚ್. ಡಿ. ದೇವೇಗೌಡರು ಬಳಿಕ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಕರ್ನಾಟಕ ವಿಧಾನಸಭೆಯಿಂದ ನಾಲ್ವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 19ರಂದು ಚುನಾವಣೆ ನಡೆಯಬೇಕಿತ್ತು. ಆದರೆ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ ಮತ್ತು ಜೆಡಿಎಸ್ನಿಂದ ಎಚ್. ಡಿ. ದೇವೇಗೌಡ ಅವಿರೋಧವಾಗಿ ಆಯ್ಕೆಯಾದರು.

2019ರ ಚುನಾವಣೆ
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿತ್ತು. ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರು. ಆದರೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಗೆದ್ದಿದ್ದು ಒಂದು ಸ್ಥಾನದಲ್ಲಿ ಮಾತ್ರ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಗೆದ್ದರು. ಬೆಂಗಳೂರು ಗ್ರಾಮಾಂತರದಲ್ಲಿ ಡಿ. ಕೆ. ಸುರೇಶ್ ಕಾಂಗ್ರೆಸ್ನಿಂದ ಗೆದ್ದರು. 25 ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸಿದರೆ, ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದರು.












Click it and Unblock the Notifications