HD Deve Gowda: ಮಾರ್ಚ್ನಿಂದ ಹೆಚ್.ಡಿ.ದೇವೇಗೌಡರ ರಾಜ್ಯ ಪ್ರವಾಸ
ಬೆಂಗಳೂರು, ಜನವರಿ 27: ಕಳೆದ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಸಾಲು ಸಾಲು ಸೋಲುಗಳನ್ನ ಕಂಡಿದ್ದು, ಇದೀಗ ಜೆಡಿಎಸ್ ಪಕ್ಷ ಸಂಘಟನೆಗಾಗಿ ಮಾರ್ಚ್ ತಿಂಗಳಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆಗೆ ಹೆಚ್ ಡಿ ದೇವೇಗೌಡ್ರು ಮಾತನಾಡಿ, ಪಕ್ಷದ ಸಂಘಟನೆಗೆ ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತೇನೆ. ಮಾರ್ಚ್ ತಿಂಗಳಿಂದ ಜಿಲ್ಲೆಗಳಿಗೆ ಭೇಟಿ ಕೊಡುತ್ತೇನೆ. ಕಾರ್ಯಕರ್ತರು, ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ತಿಳಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರು ದೇಶದ ಉದ್ದಗಲಕ್ಕೂ ಸಂಚಾರ ಮಾಡಿ ಕೆಲಸ ಮಾಡಬೇಕಿದೆ. ನಾನು, ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ಎಲ್ಲಾ ಹಿರಿಯ, ಕಿರಿಯ ಮುಖಂಡರೆಲ್ಲ ಸೇರಿ ಕಾರ್ಯಕರ್ತರ ಪಡೆಯೊಂದಿಗೆ ಪಕ್ಷ ಕಟ್ಟುತ್ತೇವೆ ಎಂದು ಹೆಚ್ ಡಿ ದೇವೇಗೌಡ್ರು ಅವರು ಹೇಳಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಕ್ಕೆ ಶಕ್ತಿ ತುಂಬುತ್ತೇವೆ. ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸುತ್ತೇವೆ. ಬೆಂಗಳೂರು ನಗರದಲ್ಲಿ ಸ್ಥಳೀಯರ ಮುಖಂಡರ ಜತೆಗೂಡಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡ್ರು ಹೇಳಿದರು.
ಒಂದು ಕೈಲಿ ಗ್ಯಾರಂಟಿ; ಇನ್ನೊಂದು ಕೈಲಿ ಸುಲಿಗೆ: ಹೆಚ್ಡಿಕೆ ಕಿಡಿ
ಮಹಿಳೆಯರಿಗೆ ₹2000 ಗೃಹಲಕ್ಷ್ಮಿ ಹಣ ಕೊಟ್ಟು ಸಬಲೀಕರಣ ಮಾಡುತ್ತೇವೆ ಎನ್ನುವ ರಾಜ್ಯ ಸರಕಾರ; ಇನ್ನೊಂದು ಕಡೆ ಅದೇ ಮಹಿಳೆಯರ ಜೀವ ಹರಣ ಮಾಡಲು ಮೈಕ್ರೋ ಫೈನಾನ್ಸ್ ಗಳಿಗೆ ಧಾರಾಳವಾಗಿ ಅವಕಾಶ ಕೊಟ್ಟಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು.
ಉತ್ತಮ ಆಡಳಿತಕ್ಕೆ ಕರ್ನಾಟಕ ಮಾದರಿ ಆಗಿತ್ತು. ಅದನ್ನು ಸರ್ವನಾಶ ಮಾಡಲು ಇವರು ಹೊರಟಿದ್ದಾರೆ. ಅಧಿಕಾರಕ್ಕಾಗಿ ಕಚ್ಚಾಡುತ್ತಿರುವ ಇವರು ಜನರಿಗೆ ಏನು ಮಾಡಿದ್ದಾರೆ. ಒಂದು ತಿಂಗಳ ಹಿಂದೆಯೇ ಚಾಮರಾಜನಗರದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಶುರುವಾಯಿತು. ಜನರು ಊರೇ ಬಿಟ್ಟು ಹೋದರು. ಇಷ್ಟೆಲ್ಲಾ ಹಾವಳಿಯ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದರೂ ಸರ್ಕಾರ ಯಾರ ವಿರುದ್ಧವೂ ಕ್ರಮ ಕೈಗೊಳ್ಳಲಿಲ್ಲ. ಯಾಕೆ? ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.
ರೈತ ಮಹಿಳೆಯರು ಮತ್ತು ಬಡ ಮಹಿಳೆಯರೇ ಹೆಚ್ಚಾಗಿ ಮೈಕ್ರೋ ಫೈನಾನ್ಸ್ ಗಳಿಗೆ ಗುರಿಯಾಗುತ್ತಿದ್ದಾರೆ. ಇವರೆಲ್ಲರೂ ತಮ್ಮ ಮನೆ ಊರುಗಳನ್ನು ಬಿಟ್ಟು ಹೋಗುತ್ತಿದ್ದಾರೆ. ಇದಕ್ಕೆ ಯಾರು ಕಾರಣ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರಶ್ನಿಸಿದರು
ಮೈಕ್ರೋ ಫೈನಾನ್ಸ್ ಕಂಪನಿಗಳು ರಾಜ್ಯದಲ್ಲಿ ನಾಯಿಕೊಡೆಗಳಂತೆ ತಲೆ ಎತ್ತಿವೆ. ಕಾನೂನುಬಾಹಿರವಾಗಿ ಚಟುವಟಿಕೆಗಳನ್ನು ನಡೆಸುತ್ತಿವೆ. ಕಾನೂನು ನಿಯಂತ್ರಣ ಇಲ್ಲ. 2018ರಲ್ಲಿ ನಾನು ಕಾಂಗ್ರೆಸ್ ಪಕ್ಷದ ಜತೆ ಸೇರಿ ಸರಕಾರ ಮಾಡಿದ್ದೆ. ಋಣ ಮುಕ್ತ ಕಾಯ್ದೆಯನ್ನು ಜಾರಿಗೆ ತಂದಿದ್ದೆ. ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆಯೇ ಅಂಗೀಕಾರವಾಗಿದೆ. ರಾಜ್ಯಪಾಲರು ಒಪ್ಪಿಗೆ ಕೊಟ್ಟ ಮೇಲೆ ನಾನೇ ಸ್ವತಃ ದೆಹಲಿಗೆ ಹೋಗಿ ರಾಷ್ಟ್ರಪತಿಗಳ ಅಂಕಿತ ಹಾಕಿಸಿಕೊಂಡು ಬಂದೆ. ನಂತರ ಬಂದ ಸರಕಾರಗಳು ಆ ಕಾಯ್ದೆಯನ್ನು ಏನು ಮಾಡಿದವು? ಎಂದು ಬೇಸರ ವ್ಯಕ್ತಪಡಿಸಿದರು.












Click it and Unblock the Notifications