ಜೆಡಿಎಸ್ ಹೊಸ ರಾಜ್ಯಾಧ್ಯಕ್ಷ ಘೋಷಣೆ ಇಂದು: ಅಚ್ಚರಿಯ ಹೆಸರು
ಬೆಂಗಳೂರು, ಜುಲೈ 04: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರನ್ನು ಇಂದು ಘೋಷಿಸುವ ಸಾಧ್ಯತೆ ದಟ್ಟವಾಗಿದ್ದು, ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ದೇವೇಗೌಡ ಅವರ ಆಯ್ಕೆ ಆಗಲಿದ್ದಾರೆ.
ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ ಅವರು ಜೆಡಿಎಸ್ನ ರಾಜ್ಯಾಧ್ಯಕ್ಷರಾಗುವುದು ಬಹುತೇಕ ಅಂತಿಮವಾಗಿದ್ದು, ಇಂದೇ ದೇವೇಗೌಡ ಅವರು ಹೊಸ ರಾಜ್ಯಾಧ್ಯಕ್ಷರನ್ನು ಘೋಷಿಸಲಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ಸಹ ಎಚ್.ಕೆ.ಕುಮಾರಸ್ವಾಮಿ ಅವರ ಆಯ್ಕೆಗೆ ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ. ಆದರೆ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಇಲ್ಲದಿರುವ ಸಮಯದಲ್ಲಿ ಜೆಡಿಎಸ್ ಅಧ್ಯಕ್ಷರ ಘೋಷಣೆ ಆಗಲಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ಅವರು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದಾರೆ. ಅವರ ಮನವೊಲಿಸುವ ಯತ್ನವನ್ನು ದೇವೇಗೌಡ ಅವರು ಮಾಡಿದರಾದರೂ ಅದು ಸಾಧ್ಯವಾಗಿಲ್ಲ, ಹಾಗಾಗಿ ಅಂತಿಮವಾಗಿ ಎಚ್.ಕೆ.ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಲಾಗಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ, ಮಧು ಬಂಗಾರಪ್ಪ, ವೈ.ಎಸ್.ವಿ.ದತ್ತ, ನಿಖಿಲ್ ಕುಮಾರಸ್ವಾಮಿ, ಶರವಣ ಇವರುಗಳ ಹೆಸರು ಕೇಳಿಬಂದಿತ್ತು, ಆದರೆ ಅಚ್ಚರಿಯ ರೀತಿಯಲ್ಲಿ ಎಚ್.ಕೆ.ಕುಮಾರಸ್ವಾಮಿ ಅವರನ್ನು ದೇವೇಗೌಡ ಅವರು ಈ ಜವಾಬ್ದಾರಿಯುತ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ.
ದೇವೇಗೌಡ ಅವರೇ ಹೇಳಿರುವಂತೆ, ಜೆಡಿಎಸ್ಗೆ ಒಬ್ಬ ರಾಜ್ಯಾಧ್ಯಕ್ಷ ಮತ್ತು ನಾಲ್ಕು ಕಾರ್ಯಾಧ್ಯಕ್ಷರನ್ನು ನೇಮಿಸಲಾಗುವುದು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ಕೆ.ಕುಮಾರಸ್ವಾಮಿ ಅಂತಿಮವಾಗಿದ್ದು, ನಾಲ್ಕು ಮಂದಿ ಕಾರ್ಯಾಧ್ಯಕ್ಷರು ಯಾರಾಗಲಿದ್ದಾರೆ ಎಂಬ ಕುತೂಹಲ ಇದೆ. ಒಂದು ಕಾರ್ಯಾಧ್ಯಕ್ಷ ಸ್ಥಾನ ನಿಖಿಲ್ ಕುಮಾರಸ್ವಾಮಿ ಅವರಿಗೆ ನೀಡುವ ಸಾಧ್ಯತೆ ಇದೆ.











Click it and Unblock the Notifications