ಲೋಕಸಭಾ ಚುಣಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಕುರಿತು ಮಹತ್ವದ ಹೇಳಿಕೆ ನೀಡಿದ ಹೆಚ್ ಡಿ ದೇವೇಗೌಡ
ಬೆಂಗಳೂರು, ಫೆಬ್ರವರಿ 14: ಲೋಕಸಭಾ ಚುನಾವಣೆಯಲ್ಲಿ ನೀವು ನಿಲ್ಲಬೇಕು ಅಥವಾ ಕುಮಾರಸ್ವಾಮಿ ಅವರು ನಿಲ್ಲಬೇಕು ಇಲ್ಲವೇ ನಿಖಿಲ್ ಕುಮಾರಸ್ವಾಮಿ ನಿಲ್ಲಬೇಕು ಎಂಬ ಒತ್ತಡ ಕೇಳಿ ಬರುತ್ತಿದೆ. ಆದರೆ, ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನಿಖಿಲ್ ಅವರು ಕೂಡ ನಾನು ನಿಲ್ಲೋದಿಲ್ಲ,ಕುಮಾರಸ್ವಾಮಿ ಸದನದ ಒಳಗೆ, ಹೊರಗೆ ಹೋರಾಟ ನಡೆಸಬೇಕಿದೆ. ಹೀಗಾಗಿ ಅವರು ಲೋಕಸಭೆಗೆ ಹೋಗುವೆ ಎಂದು ಹೇಳಲ್ಲ, ಇರುವ ವಾಸ್ತವಾಂಶವನ್ನು ಹೇಳುತ್ತೇನೆ ಎಂದು ದೇವೇಗೌಡ್ರು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಪ್ರಮುಖ ನಾಯಕರ ಜೊತೆಗೆ ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆಗೆ ಯಾರು ಅಭ್ಯರ್ಥಿ ಆಗಬೇಕು ಎನ್ನುವ ಬಗ್ಗೆ ಎಲ್ಲಾ ನಾಯಕರು ಬಹಳ ಸದ್ಭಾವನೆ ವ್ಯಕ್ತ ಮಾಡಿದ್ದಾರೆ. ಆದರೆ, ನಾನು ನಿಲ್ಲುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ.

ನಿಖಿಲ್ ಅವರು ಕೂಡ ನಾನು ನಿಲ್ಲೋದಿಲ್ಲ, ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರು ಲೋಕಸಭೆಗೆ ಹೋಗುತ್ತಾರೆ ಎಂದು ವಿನಾಕಾರಣ ಊಹಾಪೋಹ ಸೃಷ್ಟಿ ಮಾಡಲಾಯಿತು. ಆದರೆ, ಅವರು ಎಂದೂ ಲೋಕಸಭೆಗೆ ಹೋಗುವೆ ಎಂದು ಹೇಳಿಲ್ಲ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು.
ಪಕ್ಷ ಸಂಘನೆ ದೃಷ್ಟಿಯಿಂದ ಮುಂದಿನ ವಾರದಿಂದ ಮಂಡ್ಯ ಜಿಲ್ಲೆಯ ಎಲ್ಲಾ 8 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಆಗ ಎಲ್ಲಾ ಕಾರ್ಯಕರ್ತರು, ಮುಖಂಡರು, ಸಂಘ ಸಂಸ್ಥೆಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಆಮೇಲೆ ಅಭ್ಯರ್ಥಿ ಬಗ್ಗೆ ನಮ್ಮ ಪಕ್ಷದ ನಾಯಕರೆಲ್ಲ ಸೇರಿ ಒಂದು ಅಭಿಪ್ರಾಯಕ್ಕೆ ಬರುತ್ತೇವೆ.
ನಾವು ಎನ್ ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ನಮ್ಮ ನಿರ್ಧಾರವನ್ನು ಪ್ರಧಾನಿಗಳಾದ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸುತ್ತೇವೆ. ಆಮೇಲೆ ಕುಮಾರಸ್ವಾಮಿ ಅವರು ಅವರೆಲ್ಲರ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ಹೆಚ್ ಡಿ ದೇವೇಗೌಡ್ರು ತಿಳಿಸಿದರು.

ಕ್ಷೇತ್ರ ಹಂಚಿಕೆ ಪ್ರಶ್ನಗೆ ಮಾಧ್ಯಮಗಳ ಪ್ರಶ್ನಗೆ ಉತ್ತರಿಸಿದ ಅವರು, ಇಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಎನ್ನುವುದಲ್ಲ. ಎನ್ ಡಿಎ ಅಷ್ಟೇ ಮುಖ್ಯ. ಅಂತಿಮವಾಗಿ ಮೋದಿ ಅವರು, ಅಮಿತ್ ಶಾ, ನಡ್ಡಾ ಮತ್ತು ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಈಗಾಗಲೇ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಅವರು ಎಲ್ಲಾ ಮಾಹಿತಿ ನೀಡಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.
ಇನ್ನೂ ಈ ವೇಳೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ, ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಶಾಸಕರಾದ ಮಂಜುನಾಥ್, ಮಂಜೇಗೌಡ, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ.ಅನ್ನದಾನಿ, ಕೆ.ಟಿ.ಶ್ರೀಕಂಠಗೌಡರು, ಜಿಲ್ಲಾಧ್ಯಕ್ಷ ರಮೇಶ್, ರಾಮಚಂದ್ರ ಹಾಗೂ ವಿವೇಕ್ ಮುಂತಾದವರು ಸಭೆಯಲ್ಲಿ ಭಾಗಿಯಾಗಿದ್ದರು.












Click it and Unblock the Notifications