ಜೆಡಿಎಸ್ ಬಿಡದಂತೆ ಮನವೊಲಿಸಲು ಕೆಲವು ಶಾಸಕರಿಗೆ ಜವಾಬ್ದಾರಿ: ಜೆಡಿಎಲ್ಪಿ ಸಭೆ ನಿರ್ಣಯ
ಬೆಂಗಳೂರು ಮೇ 18: ರಾಜ್ಯಸಭೆ, ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ, ಮುಂದಿನ ಚುನಾವಣೆ, ಪಂಚರತ್ನ ಕಾರ್ಯಕ್ರಮಗಳ ಕುರಿತು ಇಂದು ನಡೆದ ಮಹತ್ವದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಯಿತು.
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದೇವನಹಳ್ಳಿ ಸಮೀಪದ ಖಾಸಗಿ ರೆಸಾರ್ಟ್ ನಲ್ಲಿ ಇಂದು ಸಂಜೆ ನಡೆದ ಸಭೆಯಲ್ಲಿ ಕೆಲವೊಂದು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಶಾಸಕಾಂಗ ಪಕ್ಷದ ಸಭೆಯ ನಿರ್ಣಯಗಳು:
ಪಕ್ಷದ ಸಂಘಟನೆಗೆ ಸಂಬಂಧಿಸಿದಂತೆ ಮಾಜಿ ಮಂತ್ರಿಗಳು, ಹಾಲಿ ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. ಅವರವರ ಕ್ಷೇತ್ರಗಳ ಜೊತೆಗೆ 2-3 ಕ್ಷೇತ್ರಗಳನ್ನು ಜವಾಬ್ದಾರಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಳೆದ 2018ರ ಮೈತ್ರಿ ಸರ್ಕಾರದ ನಂತರ ಕೆಲವು ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಂದ ಪಕ್ಷ ಬಿಟ್ಟು ಹೋಗುವಂತಹ ಹಾಗೂ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳದ ಮುಖಂಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಅವರ ಮನವೊಲಿಸಲು ಕೆಲವು ಕೆಲವು ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಶಕ್ತಿಯನ್ನು ತುಂಬಲಿಕ್ಕೆ ಜೆಡಿಎಸ್ ಅನ್ನು ಛಿದ್ರಗೊಳಿಸಲು ಹೊರಟಿದ್ದಾರೆ. ಅವರಿಗೆ ಬುದ್ಧಿ ಕಲಿಸಲು ಮತ್ತು ಪಕ್ಷ ತೊರೆಯಲು ಮುಂದಾಗಿರುವ ಮುಖಂಡರು, ಶಾಸಕರು, ಮಾಜಿ ಶಾಸಕರು ಇರಬಹುದು. ಪಕ್ಷ ತೊರೆಯದಂತೆ ಎಲ್ಲರನ್ನು ಮನವೊಲಿಸಿಕೊಳ್ಳಲು ಕೆಲವು ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಇನ್ನೂ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಅಧಿಕಾರವನ್ನು ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೆ ನೀಡಲು ಸಭೆಯಲ್ಲಿ ಒಮ್ಮತದ ತೀರ್ಮಾನವಾಗಿದೆ.
ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿ ಎಲ್ಲ ಶಾಸಕರು ಸಭೆಯಲ್ಲಿ ಹಾಜರಿದ್ದರು.