ರೋಹಿತ್ ಚಕ್ರತೀರ್ಥ ಸಮಿತಿಯ ಪರಿಷ್ಕೃತ ಪಠ್ಯಗಳನ್ನು ಹಿಂಪಡೆಯುವಂತೆ ಸಿಎಂಗೆ ಪತ್ರ ಬರೆದ ದೇವೇಗೌಡ
ಬೆಂಗಳೂರು ಜೂ.21: ರಾಜ್ಯ ಸರ್ಕಾರ ಮರು ಪರಿಷ್ಕರಣೆ ಮಾಡಿದ ಪಠ್ಯ ಪುಸ್ತಕಗಳನ್ನು ಹಿಂಪಡೆದು, ಚಿಂತಕ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಎಲ್ಲ 27 ಸಮಿತಿಗಳು ಪರಿಷ್ಕರಿಸಿದ್ದ ಹಳೆಯ ಪಠ್ಯವನ್ನೆ ಮುಂದುವರಿಸುವಂತೆ ಒತ್ತಾಯಸಿ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್. ಡಿ.ದೇವೇಗೌಡ ಅವರು ಮಂಗಳವಾರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಪಠ್ಯ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿ ನನ್ನ ಮೂಲಕ ಸರ್ಕಾರಕ್ಕೆ ಮನವರಿಕೆ ಮಾಡಲು ಪ್ರತಿಭಟನಾಕರರು ನೀಡಿದ್ದ ಹಕ್ಕೋತ್ತಾಗಳನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದೇನೆ ಎಂದು ದೇವೇಗೌಡರು ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಪತ್ರದಲ್ಲಿ ಏನಿದೆ?
ಪಠ್ಯ ಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿದ್ದಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಹೇಳಿದ್ದು ಕೂಡ ಕುವೆಂಪು ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ. ನಾಡ ಧ್ವಜವನ್ನು ಒಳಉಡುಪಿಗೆ ಹೋಲಿಸಿದ್ದು ಕೂಡ ನಾಡಿನ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ. ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಹಂಗಿಸಿದ್ದಾರೆ.
ಮಹನೀಯರನ್ನು ಹಂಗಿಸಿದ ಇಂತಹ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಲು ಸರ್ಕಾರ ನಿರ್ಧರಿಸಿದ್ದೆ ಮೊದಲ ತಪ್ಪು. ಅಲ್ಲದೇ ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳು ಸಾಕಷ್ಟಿವೆ. ಸಮಾಜ ವಿಜ್ಞಾನ ಪುಸ್ತಕದ ಏಕೀಕರಣ ಪಾಠದಿಂದ ಕುವೆಂಪು ಅವರ ಭಾವಚಿತ್ರವನ್ನು ತೆಗೆದು ಹಾಕಲಾಗಿದೆ. ಶರಣ ಬಸವಣ್ಣನವರ ಚಳವಳಿಯ ಆಶಯಗಳ ಭಾಗಗಳನ್ನು ಕೈ ಬಿಡಲಾಗಿದೆ. ಸಿದ್ಧಗಂಗೆ ಮತ್ತು ಆದಿ ಚುಂಚನಗಿರಿ ಶ್ರೀಗಳ ಸೇವೆಯ ವಿವಿರಗಳನ್ನು ತೆಗೆದು ಹಾಕಲಾಗಿದೆ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
ಅಸಂಖ್ಯಾತ ದೋಷಗಳಿವೆ:
ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಪಠ್ಯದಲ್ಲಿ 'ಸಂವಿಧಾನ ಶಿಲ್ಪಿ, ಎಂದಿದ್ದ ವಿಶೇಷಣವನ್ನು ತೆಗೆದಿದ್ದಾರೆ. ಶರಣೆ ಅಕ್ಕಮಹಾದೇವಿ, ಕನಕದಾಸರು, ಪುರಂದರ ದಾಸರು, ಶಿಶುನಾಳ ಶರೀಫರಂಥಹ ಮಹಾ ದಾರ್ಶನಿಕರ, ಸಂತರ ಪಠ್ಯಗಳನ್ನು ಕೈ ಬಿಡಲಾಗಿದೆ. ನಾಡಪ್ರಭು ಕೆಂಪೇಗೌಡ, ಸುರಪುರ ನಾಯಕರ ವಿಷಯಗಳನ್ನು ಪಠ್ಯದಿಂದ ಕಡಿತಗೊಳಿಸಲಾಗಿದೆ.
ಅಂಬೇಡ್ಕರ್ ಮತ್ತು ರಾಷ್ಟ್ರಕವಿ ಕುವೆಂಪು ಅವರು ಸಾರಿದ ಸಾಮಾಜಿಕ ನ್ಯಾಯ, ಸಮಾನತೆ, ಜಾತ್ಯಾತೀತತೆ ಮತ್ತು ವಿಶ್ವಮಾನವತ್ವದ ಪರಿಕಲ್ಪನೆಗಳನ್ನು ಕಡೆಗಣಿಸಿರುವುದು ಪಠ್ಯ ಪನರ್ ಪರಿಷ್ಕರಣೆಯಲ್ಲಿ ಎದ್ದು ಕಾಣುತ್ತದೆ. ಪಠ್ಯ ಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ.
ಆದ್ದರಿಂದ ರಾಜ್ಯ ಸರ್ಕಾರ ಪುನರ್ ಪರಿಷ್ಕರಣೆಯ ಪಠ್ಯ ಪುಸ್ತಕಗಳನ್ನು ಹಿಂಪಡೆಯಬೇಕು. ಹಿಂದೆ ಬರಗೂರು ರಾಮಚಂದ್ರ ಅವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಗಳನ್ನೇ ಮುಂದುವರಿಸುವುದು ಸೂಕ್ತವೆಂದು ಅಭಿಪ್ರಾಯ ಪಟ್ಟಿರುವುದಾಗಿ ದೇವೇಗೌಡ ಅವರು ಪತ್ರದ ಮೂಲಕ ಸರ್ಕಾರಕ್ಕೆ ತಿಳಿಸಿದ್ದಾರೆ.
Recommended Video