ಹಾಸನದಿಂದ ಹೆಚ್ ಡಿ ದೇವೇಗೌಡರು ಸ್ಪರ್ಧೆ? ಪ್ರಜ್ವಲ್ ರೇವಣ್ಣ ಕಥೆ ಏನು?
ಹಾಸನ, ಡಿಸೆಂಬರ್ 01: 2019 ರ ಲೋಕಸಭಾ ಚುನಾವಣೆಯಲ್ಲಿ ಮೊಮ್ಮೊಗನಿಗಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹಾಸನ ಕ್ಷೇತ್ರವನ್ನ ತ್ಯಾಗ ಮಾಡಿದ್ದು, ಇದೀಗ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳ ಒತ್ತಾಯದ ಮೇರೆಗೆ ಹಾಸನದಿಂದ ದೇವೇಗೌಡರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬಂದಿದ್ದು, ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯವೇನು ಎಂಬ ಪ್ರಶ್ನೆ ಉದ್ಭವಿಸಿದೆ.
ಹೌದು, ಹಾಸನದಿಂದ ದೇವೇಗೌಡರನ್ನು ಲೋಕಸಭೆಗೆ ಕಳಿಸಲು ಮುಖಂಡರು, ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ ಎನ್ನಲಾಗಿದೆ. ಹಾಸನ ಕ್ಷೇತ್ರ ಜೆಡಿಎಸ್ ನ ಭದ್ರಕೋಟೆಯಾಗಿದ್ದು, ದಿನೇ ದಿನೇ ತನ್ನ ಅಸ್ವಿತ್ವವನ್ನ ಕಳೆದುಕೊಳ್ಳುತ್ತಿದೆ. ಹೀಗಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳುವುದು ಅನಿವಾರ್ಯವಾಗಿದೆ ಎಂದು ಮುಖಂಡರು ಒತ್ತಡ ಹಾಕಿದ್ದಾರೆ ಎನ್ನಲಾಗಿದೆ.

ಹಾಸನ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ವಿರೋಧದ ಅಲೆ ಹೆಚ್ಚಾಗಿದೆ. ಅಲ್ಲದೇ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದರು ಗೆಲುವು ಸುಲಭವಲ್ಲ ಎಂಬ ಲೆಕ್ಕಾಚಾರವನ್ನ ಜೆಡಿಎಸ್ ನಾಯಕರು ಹಾಕಿಕೊಂಡಿದ್ದಾರೆ. ಇದರಿಂದ ಪ್ರಜ್ವಲ್ ಸ್ಪರ್ಧೆ ಮಾಡಿದರೆ ಹಾಸನದಲ್ಲಿ ಜೆಡಿಎಸ್ಗೆ ಹಿನ್ನಡೆ ಆಗುವ ಸಾಧ್ಯತೆಗಳಿವೆ. ಹೀಗಾಗಿ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಸನದಿಂದ ಸ್ಪರ್ಧೆ ಮಾಡಿದರೆ ಒಳ್ಳೆಯದು ಎಂದು ಹಾಸನ ಜಿಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಒತ್ತಾಯಿಸಿದ್ದಾರೆ.
ಇನ್ನೂ ಕಾರ್ಯಕರ್ತರು ಹಾಗೂ ಮುಖಂಡರು , ಜಿಲ್ಲೆಯ ಜನಪ್ರತಿನಿಧಿಗಳ ಜೊತೆ ಸಭೆ ನಡೆಸಲು ದೇವೇಗೌಡರು ಮುಂದಾಗಿದ್ದು, ಚುನಾಯಿತ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಹೆಜ್ಜೆ ಇಡುವ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಡಿಸೆಂಬರ್ 01 ರಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅವರ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಸಂಸದರು, ಶಾಸಕರು, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರು ಭಾಗಿಯಾಗಲಿದ್ದಾರೆ.

ಈಗಾಗಲೇ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಪ್ರಜ್ವಲ್ ರೇವಣ್ಣ ಕುರಿತು ಬೆಂಬಲ ಸೂಚಿಸುವುದಿಲ್ಲ ಎಂದು ಕೆಲವು ಬಿಜೆಪಿ ಮುಖಂಡರು ಹೇಳಿದ್ದಾರೆ. ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಆಗಿರುವ ಹಿನ್ನೆಲೆ ದೇವೇಗೌಡರು ಸ್ಪರ್ಧೆ ಮಾಡಿದರೆ ಪಕ್ಷಾತೀತವಾಗಿ ಬೆಂಬಲ ನೀಡುತ್ತಾರೆ ಎಂಬ ಲೆಕ್ಕಾಚಾರವಿದೆ.
ಇತ್ತ ಒಂದು ವೇಳೆ ಹಾಸನದಿಂದ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದರೆ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ, ಸಿಮೆಂಟ್ ಮಂಜು ವಿರೋಧ ವ್ಯಕ್ತಪಡಿಸುವ ಸಾಧ್ಯತೆಗಳಿವೆ. ಹೀಗಾಗಿ ದೇವೇಗೌಡರೇ ಸ್ಪರ್ಧೆ ಮಾಡಿದರೆ ಇಬ್ಬರೂ ವಿರೋಧ ಮಾಡುವುದಿಲ್ಲ. ಜೊತೆಗೆ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದಾರೆ ಎಂಬುದು ಜೆಡಿಎಸ್ ನಾಯಕರ ಲೆಕ್ಕಾಚಾರವಾಗಿದೆ. ಹೀಗಾಗಿ ಹಾಸನದಿಂದ ಈ ಬಾರೀಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್ ಡಿ ದೇವೇಗೌಡರು ತವರು ಜಿಲ್ಲೆ ಹಾಸನ ಕ್ಷೇತ್ರದಿಂದಲೇ ಅಖಾಡಕ್ಕಿಳಿಯುತ್ತಾರೆ ಎಂದು ಹೇಳಲಾಗಿದೆ.
ಇನ್ನೂ ಒತ್ತಡಕ್ಕೆ ಮಣೆದು ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಒಪ್ಪಿದರೆ ಹಾಲಿ ಹಾಸನ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ಕಥೆ ಏನು ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಇತ್ತ ಮೈತ್ರಿಯಿಂದಾಗಿ ಈ ಬಾರೀ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಜೆಡಿಎಸ್ ತೆಕ್ಕೆಗೆ ಬರಲಿದೆ ಎನ್ನಲಾಗಿದ್ದು, ಬಿಜೆಪಿ ಹೈಕಮಾಂಡ್ ನಾಯಕರು ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟರೆ ಪ್ರಜ್ಲಲ್ ರೇವಣ್ಣ ಸ್ಪರ್ಧಿಸಹುದು ಎಂದು ಹೇಳಲಾಗಿದೆ.












Click it and Unblock the Notifications